ಎಂಟಿಬಿ, ಆನಂದ್ ಸಿಂಗ್ ವಿರುದ್ಧ ಚುನಾವಣಾ ಆಯೋಗಕ್ಕೆ ಕಾಂಗ್ರೆಸ್ ದೂರು
ಬೆಂಗಳೂರು, ನ.26: ಭಾರತೀಯ ಜನತಾ ಪಕ್ಷ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿರುವುದಲ್ಲದೆ, ಸ್ಪರ್ಧಿಸುತ್ತಿರುವ ಅಭ್ಯರ್ಥಿಗಳು ಮತದಾರರಿಗೆ ಆಮಿಷ ಒಡ್ಡಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ಮಂಗಳವಾರ ನಗರದ ಶೇಷಾದ್ರಿ ರಸ್ತೆಯ ರಾಜ್ಯ ಮುಖ್ಯ ಚುನಾವಣೆ ಆಯೋಗ ಕಚೇರಿಗೆ ವಿಧಾನ ಪರಿಷತ್ ಸದಸ್ಯ ಪ್ರಕಾಶ್ ರಾಥೋಡ್ ನೇತೃತ್ವದ ಕಾಂಗ್ರೆಸ್ ನಿಯೋಗ ಭೇಟಿ ನೀಡಿ, ದೂರು ಸಲ್ಲಿಸಿತು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಕಾಶ್ ರಾಥೋಡ್, ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಎಂ.ಟಿ.ಬಿ.ನಾಗರಾಜ್ ಬಿಜೆಪಿ ಚಿಹ್ನೆಯುಳ್ಳ ಚಿನ್ನಾಭರಣ ಹಂಚಿಕೆ ಮಾಡಿದ್ದಾರೆ. ಇದರಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆಗಲಿದೆ ಎಂದರು.
ಸಿಂಗ್ ವಿರುದ್ಧ ದೂರು: ವಿಜಯನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ತನ್ನ ಪುತ್ರನ ಮದುವೆಗೆ 50 ಸಾವಿರ ಜನರಿಗೆ ಆಮಂತ್ರಣ ನೆಪದಲ್ಲಿ ಊಟ, ತಿಂಡಿ ಮತ್ತು ಉಡುಗೊರೆ ನೀಡಿ, ಮತದಾರರ ಮೇಲೆ ಪ್ರಭಾವ ಬೀರಿದ್ದು, ಈ ಇಬ್ಬರ ಮೇಲೂ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್ ವಕ್ತಾರ ನಿಝಾಮ್ ಫೌಝಾದರ್ ತಿಳಿಸಿದರು.