ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ: ತನಿಖೆಗೆ ಎಸ್ಐಟಿ ರಚಿಸಲು ಸರಕಾರಕ್ಕೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು, ನ.26: ರಾಜ್ಯದಲ್ಲಿ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿರುವ 87 ಬಾಲಕರು, 26 ಬಾಲಕಿಯರು ಒಟ್ಟು 113 ಸಂತ್ರಸ್ತ ಮಕ್ಕಳ ಬಗ್ಗೆ ತನಿಖೆ ನಡೆಸಲು ಎಸ್ಐಟಿ ರಚಿಸಬೇಕೆಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ನಿರ್ದೇಶಿಸಿದೆ.
ಈ ಕುರಿತು ಸುಪ್ರೀಂಕೋರ್ಟ್ ನಿರ್ದೇಶನದಂತೆ ಹೈಕೋರ್ಟ್ ಸ್ವಯಂಪ್ರೇರಿತವಾಗಿ ದಾಖಲಿಸಿಕೊಂಡಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
113 ಸಂತ್ರಸ್ತ ಮಕ್ಕಳಿಗೆ ಪುನರ್ ವಸತಿ ಕಲ್ಪಿಸಬೇಕು. ಸೈಬರ್ ಕ್ರೈಂ ನವರಿಗೆ ಈ ಎಲ್ಲ ಪ್ರಕರಣಗಳನ್ನು ಪತ್ತೆ ಹಚ್ಚಲು ಸೂಚಿಸಬೇಕು. ಈ ಕುರಿತು ಇಲ್ಲಿಯವರೆಗೆ ಯಾವ್ಯಾವ ಕ್ರಮಗಳನ್ನು ಕೈಗೊಂಡಿದ್ದಿರಿ ಎಂಬುದರ ಕುರಿತು ಮಾಹಿತಿ ನೀಡಬೇಕು. ಇನ್ನಷ್ಟು ನಿರ್ದೇಶನಗಳನ್ನು ಗುರುವಾರ ನೀಡುವುದಾಗಿ ನ್ಯಾಯಪೀಠವು ತಿಳಿಸಿತು.
ನ್ಯಾಯಪೀಠವು ಸುಪ್ರೀಂಕೋರ್ಟ್ ನಿರ್ದೇಶನದಂತೆ ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ವಿಶೇಷ ಮಕ್ಕಳ ಪೊಲೀಸ್ ಘಟಕಗಳು, ಮಕ್ಕಳ ಕ್ಷೇಮಾಭಿವೃದ್ಧಿ ಪೊಲೀಸ್ ಅಧಿಕಾರಿಗಳಿಗೆ ಬಾಲ ನ್ಯಾಯ ಕಾಯ್ದೆಯ ಗಂಭೀರತೆ ಕುರಿತು ಅರಿವು ಮೂಡಿಸುವ ಜೊತೆಗೆ ಉತ್ತರ ತರಬೇತಿ ನೀಡುವ ಅಗತ್ಯವಿದೆ ಎಂದು ಸರಕಾರಕ್ಕೆ ನಿರ್ದೇಶನ ನೀಡಿತು.