ರಾಣೆಬೆನ್ನೂರು ಕಾಂಗ್ರೆಸ್ ಅಭ್ಯರ್ಥಿ, ಮಾಜಿ ಸ್ಪೀಕರ್ ಮನೆ ಮೇಲೆ ಐಟಿ ದಾಳಿ
ಹಾವೇರಿ, ಡಿ.4: ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಹಾಗೂ ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ನಿವಾಸದಲ್ಲಿರುವ ಕಚೇರಿ ಮೇಲೆ ಐಟಿ ಮತ್ತು ಇ.ಡಿ. ಅಧಿಕಾರಿಗಳು ಮಂಗಳವಾರ ತಡರಾತ್ರಿ ದಾಳಿ ನಡೆಸಿದ್ದಾರೆ.
ವಾಗೀಶ ನಗರದಲ್ಲಿರುವ ಅವರ ನಿವಾಸದ ಮೇಲೆ ತಡರಾತ್ರಿ ದಾಳಿ ನಡೆಸಿರುವ ಅಧಿಕಾರಿಗಳು ಹಲವು ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ. ಉಪ ಚುನಾವಣೆಯ ಹಿನ್ನೆಲೆಯಲ್ಲಿ ಅಕ್ರಮ ಹಣ ಮತ್ತು ಮದ್ಯ ದಾಸ್ತಾನು ಕುರಿತಂತೆ ಖಚಿತ ಮಾಹಿತಿಯನ್ನು ಆಧರಿಸಿ ಈ ದಾಳಿ ನಡೆಸಲಾಗಿದೆ ಎಂದು ಹೇಳಲಾಗುತ್ತಿದೆ.
ಈ ನಡುವೆ ಈ ದಾಳಿಯನ್ನು ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು, ಅಭಿಮಾನಿಗಳು ಪ್ರತಿಭಟನೆ ನಡೆಸಿದರು. ಮನೆಗೆ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ.
ದಾಳಿ ಬಗ್ಗೆ ಪ್ರತಿಕ್ರಿಯಿಸಿರುವ ಕೋಳಿವಾಡ, ರಾಜಕೀಯ ದುರುದ್ದೇಶದಿಂದ ಬಿಜೆಪಿ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ತನ್ನ ನಿವಾಸಲ್ಲಿ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿರುವುದು ನಿಜ. ಆದರೆ ಏನೂ ಸಿಗದ ಕಾರಣ ಬರಿಗೈಯಲ್ಲಿ ಹಿಂದಿರುಗಿದ್ದಾರೆ ಎಂದು ಹೇಳಿದ್ದಾರೆ.