ಕನ್ನಡ ಭಾಷೆ ವಿಚಾರದಲ್ಲಿ ರಾಜಿ ಇಲ್ಲ: ಮುಖ್ಯಮಂತ್ರಿ ಯಡಿಯೂರಪ್ಪ
ಬೆಂಗಳೂರು, ಡಿ. 14: ‘ಇತ್ತೀಚೆಗೆ ನಡೆದ ಹದಿನೈದು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ರಾಜ್ಯದ ಅಭಿವೃದ್ಧಿ ದೃಷ್ಟಿಯಿಂದ ಜೆಡಿಎಸ್ ತನ್ನ ಅಭ್ಯರ್ಥಿಗಳನ್ನು ಕಣಕ್ಕಿಳಿಸದೆ ಬಿಜೆಪಿಗೆ ಬೆಂಬಲ ನೀಡಬೇಕಿತ್ತು’ ಎಂದು ಜೆಡಿಎಸ್ ಮುಖಂಡ ಜಿ.ಟಿ. ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಶನಿವಾರ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯನವರ ಆರೋಗ್ಯ ವಿಚಾರಿಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ತಮಿಳುನಾಡಿನಲ್ಲಿ ನಡೆದ ಉಪಚುನಾವಣೆಯಲ್ಲಿ ಆಡಳಿತ ಪಕ್ಷದ ವಿರುದ್ದ ಪ್ರತಿಪಕ್ಷ ಡಿಎಂಕೆ ಅಭ್ಯರ್ಥಿಯನ್ನು ಕಣಕ್ಕಿಳಿಸಲಿಲ್ಲ. ಇಲ್ಲಿಯೂ ಜೆಡಿಎಸ್, ಬಿಜೆಪಿಯನ್ನು ಬೆಂಬಲಿಸಬೇಕಿತ್ತು ಎಂದು ಹೇಳಿದರು.
ಸಿಎಂ ಯಡಿಯೂರಪ್ಪ ಅಭಿವೃದ್ಧಿ ಮಂತ್ರವನ್ನು ಜಪಿಸಿದ ಪರಿಣಾಮ ಮತದಾರರು ಆಡಳಿತಾರೂಢ ಪಕ್ಷಕ್ಕೆ ಮತ ಹಾಕಿದ್ದಾರೆ. ನನ್ನ ಪ್ರಕಾರ ಉಪ ಚುನಾವಣೆಯಲ್ಲಿ ಜೆಡಿಎಸ್ ತಟ್ಟಸ್ಥವಾಗಿದ್ದು ಬಿಜೆಪಿಯನ್ನು ಬೆಂಬಲಿಸಬೇಕಿತ್ತು. ಪಕ್ಷದ ವೇದಿಕೆಯಲ್ಲೂ ನಾನು ಇದೇ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದೇನೆ ಎಂದು ಅವರು ಸ್ಪಷ್ಟನೆ ನೀಡಿದರು.
ಉಪಚುನಾವಣೆಯಲ್ಲಿ ಯಡಿಯೂರಪ್ಪ 12 ಕ್ಷೇತ್ರಗಳಲ್ಲಿ ಗೆಲ್ಲುವ ಮೂಲಕ ಸ್ಪಷ್ಟ ಜನಾದೇಶ ಪಡೆದು ತನ್ನ ಸರಕಾರಕ್ಕೆ ಬಹುಮತ ಪಡೆದುಕೊಂಡಿದ್ದಾರೆ. ರಾಜಕೀಯ ಅಸ್ಥಿರತೆ ಕೊನೆಗೊಂಡಿದ್ದು, ಇನ್ನು ಮುಂದಾದರೂ ಅಭಿವೃದ್ದಿ ಕಾರ್ಯಗಳು ನಡೆಯಬೇಕು. ಜನರಿಗೆ ನೀಡಿದ ವಾಗ್ದಾನ ಈಡೇರಿಸುವ ಜವಾಬ್ದಾರಿ ಸರಕಾರದ ಮೇಲಿದೆ ಎಂದು ಹೇಳಿದರು.
ಹುಣಸೂರು ಚುನಾವಣೆ: ನನ್ನ ಪುತ್ರ ಹರೀಶ್ ಯಾವ ಪಕ್ಷಕ್ಕೂ ಸೇರಿದವರಲ್ಲ. ಯೋಗೇಶ್ವರ್ ಅವರು ಏಕವಚನದಲ್ಲಿ ಮಾತಾಡಿದ್ದಾರೆ. ಒಕ್ಕಲಿಗರು ಹೆಚ್ಚಾಗಿರುವ ಊರಿಗೆ ಹೋಗಿ ಯಾರವನು ಜಿಟಿಡಿ, ದೇವೇಗೌಡ ಯಾರು ಎಂದು ಪ್ರಶ್ನಿಸಿದ್ದಾರೆ. ಹೀಗಾಗಿ ಸ್ಥಳೀಯರು ಸಿಡಿದೆದ್ದು ಮತ ಚಲಾಯಿಸಿದ್ದಾರೆ ಎಂದರು.
ರಾಜ್ಯದಲ್ಲಿ ಮೂರು ವರ್ಷದ ನಂತರ ಮುಂದಿನ ಚುನಾವಣೆಯಲ್ಲಿ ರಾಜಕೀಯ ಧೃವೀಕರಣವಾಗಲಿದೆ. ನಾನು ಇನ್ನೂ ಜೆಡಿಎಸ್ ಪಕ್ಷದಲ್ಲೆ ಇದ್ದೇನೆ. ಮೂರು ವರ್ಷಗಳ ನಂತರ ರಾಜಕೀಯ ಯಾವ ದಿಕ್ಕಿಗೆ ಸಾಗುತ್ತದೆ ಎಂಬುದನ್ನು ನೋಡಬೇಕು ಎಂದು ಅವರು ಸ್ಪಷ್ಟಣೆ ನೀಡಿದರು.