ಎನ್ಆರ್ಸಿ-ಸಿಎಎ ವಿರುದ್ಧ ದೇಶಾದ್ಯಂತ ಪ್ರತಿಭಟನೆ: ಸಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಿ.ರಾಜಾ
ಬೆಂಗಳೂರು, ಡಿ.27: ಕೇಂದ್ರ ಸರಕಾರ ಜಾರಿಗೆ ತರಲು ಮುಂದಾಗಿರುವ ವಿವಾದಾತ್ಮಕ ಎನ್ಆರ್ಸಿ ಹಾಗೂ ಸಿಎಎ ಸೇರಿದಂತೆ ಜನ ವಿರೋಧಿ ಹಾಗೂ ಸಂವಿಧಾನ ವಿರೋಧಿ ನೀತಿಗಳ ವಿರುದ್ಧ ಜನವರಿ 1 ರಿಂದ 7ರವರೆಗೆ ದೇಶಾದ್ಯಂತ ಪ್ರತಿಭಟನೆಗಳನ್ನು ನಡೆಸಲಾಗುವುದು ಎಂದು ಸಿಪಿಐ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಿ.ರಾಜಾ ತಿಳಿಸಿದರು.
ಶುಕ್ರವಾರ ನಗರದ ವೈಯಾಲಿಕಾವಲ್ನಲ್ಲಿರುವ ಪಕ್ಷದ ಕೇಂದ್ರ ಕಚೇರಿ ಘಾಟೆ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಜ.8ರಂದು ಕಾರ್ಮಿಕ ಸಂಘಟನೆಗಳು ಹಾಗೂ ರೈತ ಸಂಘಟನೆಗಳೊಂದಿಗೆ ಸೇರಿ ಗ್ರಾಮೀಣ ಪ್ರದೇಶಗಳಲ್ಲಿ ಮುಷ್ಕರ ನಡೆಸಲಿದ್ದಾರೆ. ಕಾಂಗ್ರೆಸ್ ಸೇರಿದಂತೆ ಯಾವುದೇ ರಾಜಕೀಯ ಪಕ್ಷಗಳು ನಮ್ಮ ಈ ಹೋರಾಟಕ್ಕೆ ಕೈ ಜೋಡಿಸಿದರೆ ಸ್ವಾಗತ ಎಂದರು.
ಎನ್ಆರ್ಸಿ ಹಾಗೂ ಸಿಎಎ ಜಾರಿಗೊಳಿಸುವ ಮೂಲಕ ಬಿಜೆಪಿ ಮತ್ತು ಆರೆಸೆಸ್ಸ್ ಭಾರತವನ್ನು ಹಿಂದೂ ರಾಷ್ಟ್ರವನ್ನಾಗಿ ಪರಿವರ್ತಿಸಲು ಹುನ್ನಾರ ನಡೆಸಿವೆ. ಸಂವಿಧಾನ, ಪ್ರಜಾಪ್ರಭುತ್ವ ಹಾಗೂ ಜಾತ್ಯತೀತ ಮೌಲ್ಯಗಳಿಗೆ ತಿಲಾಂಜಲಿ ಇಡಲು ಮುಂದಾಗಿರುವ ಮೋದಿ ಹಾಗೂ ಶಾ ಜೋಡಿ ಫ್ಯಾಶಿಸ್ಟ್ ಮಾದರಿಯ ಆಡಳಿತ ನೀಡಲು ಯತ್ನಿಸುತ್ತಿದೆ ಎಂದು ಅವರು ದೂರಿದರು.
ಕೇಂದ್ರದ ತಪ್ಪು ಆರ್ಥಿಕ ನೀತಿಗಳಿಂದಾಗಿ, ಇವತ್ತು ದೇಶದ ಅರ್ಥ ವ್ಯವಸ್ಥೆ ಇಳಿಮುಖವಾಗಿದೆ. ಜಿಡಿಪಿ ನಿರಂತರವಾಗಿ ಕುಸಿಯುತ್ತಿದೆ. ನಿರುದ್ಯೋಗದ ಸಮಸ್ಯೆ ಹಿಂದೆಂದಿಗಿಂತಲೂ ಹೆಚ್ಚಿದೆ. ಆದರೆ, ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಮಾತ್ರ ಎನ್ಆರ್ಸಿ ಹಾಗೂ ಸಿಎಎ ಜಾರಿ ಮಾಡುವಲ್ಲಿ ಮಗ್ನರಾಗಿದ್ದಾರೆ ಎಂದು ರಾಜಾ ಟೀಕಿಸಿದರು.
ಸಿಎಎ ವಿಚಾರದಲ್ಲಿ ಮಧ್ಯಪ್ರವೇಶಿಸುವಂತೆ ಈಗಾಗಲೇ ರಾಷ್ಟ್ರಪತಿಗೆ ಕಾಂಗ್ರೆಸ್ ಹಾಗೂ ಇತರ ರಾಜಕೀಯ ಪಕ್ಷಗಳ ನಿಯೋಗ ಮನವಿ ಮಾಡಿದೆ. ಧರ್ಮದ ಆಧಾರದಲ್ಲಿ ದೇಶವನ್ನು ಒಡೆಯಲು ಬಿಜೆಪಿ ಹಾಗೂ ಆರೆಸೆಸ್ಸ್ ಪ್ರಯತ್ನಿಸುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಗುಣಗಾನ ಮಾಡುವ ಬಿಜೆಪಿ ನಾಯಕರು, ಅವರ ಆಶಯಗಳ ವಿರುದ್ಧ ನಿರ್ಧಾರಗಳನ್ನು ಕೈಗೊಳ್ಳುತ್ತಾರೆ. ಕೇಂದ್ರದ ಬಿಜೆಪಿ ಸರಕಾರದ ವಿರುದ್ಧ ನಾವು ರಾಜಕೀಯ ಹಾಗೂ ಸೈದ್ಧಾಂತಿಕವಾಗಿ ಹೋರಾಟ ಮಾಡುತ್ತೇವೆ ಎಂದು ರಾಜಾ ಹೇಳಿದರು.
ವೈಯಾಲಿಕಾವಲ್ನಲ್ಲಿ ಸಿಪಿಐ ಕಚೇರಿಗೆ ಡಿ.25ರಂದು ರಾತ್ರಿ 1 ಗಂಟೆ ಸುಮಾರಿಗೆ ದುಷ್ಕರ್ಮಿಗಳು ಬೆಂಕಿ ಹಚ್ಚಲು ಪ್ರಯತ್ನಿಸಿದ್ದಾರೆ. ಈ ಬಗ್ಗೆ ರಾಜ್ಯ ಸರಕಾರವು ಸಮಗ್ರವಾಗಿ ತನಿಖೆ ನಡೆಸಿ, ಘಟನೆಗೆ ಕಾರಣಕರ್ತರಾದವರನ್ನು ಬಂಧಿಸಿ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
ಮಂಗಳೂರು ಗಲಭೆ ಪ್ರಕರಣದಲ್ಲಿ ಮೃತಪಟ್ಟ ಇಬ್ಬರಿಗೆ ಪರಿಹಾರ ಘೋಷಿಸಿ, ನಂತರ ಹಿಂಪಡೆದಿರುವ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದ ಕ್ರಮ ಖಂಡನೀಯ ಹಾಗೂ ನಾಚಿಕೆಗೇಡು. ಮುಸ್ಲಿಮ್ ಸಮುದಾಯವನ್ನು ಗುರಿಯನ್ನಾಗಿಸಿಕೊಂಡು, ಇಂತಹ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ರಾಜಾ ತಿಳಿಸಿದರು.
ಒಂದು ವರ್ಷದ ಹಿಂದೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಸಿಪಿಐ ಪಕ್ಷದ ಕಚೇರಿಯನ್ನು ಗುರಿಯಾಗಿಸಿ ಸಂಘಪರಿವಾರದವರು ದಾಳಿ ನಡೆಸಿದ್ದರು. ಎನ್ಆರ್ಸಿ ಹಾಗೂ ಸಿಎಎ ವಿರುದ್ಧ ಶಾಂತಿಯುತ ಪ್ರತಿಭಟನೆ ನಡೆಸುತ್ತಿರುವ ಸಿಪಿಐ ವಿರುದ್ಧ ಪುನಃ ಅದೇ ಧೋರಣೆಯನ್ನು ಅನುಸರಿಸುತ್ತಿದೆ ಎಂದು ರಾಜಾ ಆಕ್ರೋಶ ವ್ಯಕ್ತಪಡಿಸಿದರು. ಪತ್ರಿಕಾಗೋಷ್ಠಿಯಲ್ಲಿ ಸಿಪಿಐ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.