ದೆಹಲಿ ಧಾರ್ಮಿಕ ಸಭೆಯಲ್ಲಿ ಕೊಡಗಿನ 13 ಮಂದಿ ಭಾಗಿ: ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್
ಮಡಿಕೇರಿ, ಎ.1: ದೆಹಲಿ ಧಾರ್ಮಿಕ ಸಭೆಗೆ ಕೊಡಗು ಜಿಲ್ಲೆಯಿಂದ ಪಾಲ್ಗೊಂಡಿದ್ದವರ ಮಾಹಿತಿ ಪಡೆಯಲಾಗಿದ್ದು, ಜಿಲ್ಲೆಯಿಂದ ಭಾಗವಹಿಸಿದ್ದ 13 ಜನರನ್ನು ವಿಳಾಸದೊಂದಿಗೆ ಪತ್ತೆ ಹಚ್ಚಲಾಗಿದೆ ಎಂದು ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಅವರು ತಿಳಿಸಿದ್ದಾರೆ.
ಜಿಲ್ಲಾಡಳಿತದ ತಂಡವು ಸಂಬಂಧಪಟ್ಟವರ ಮನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, 13 ಜನರ ಪೈಕಿ ಐವರು ದೆಹಲಿಯಲ್ಲಿಯೇ ಕ್ವಾರಂಟೈನ್ ನಲ್ಲಿದ್ದಾರೆ. ಐವರು ಹೊರ ಜಿಲ್ಲೆಗಳಲ್ಲಿ ವಾಸವಿದ್ದು, ಈ ಬಗ್ಗೆ ಸಂಬಂಧಪಟ್ಟ ಜಿಲ್ಲೆಗಳಿಗೆ ಮಾಹಿತಿ ನೀಡಲಾಗಿದೆ. ಉಳಿದ ಮೂವರು ಕೊಡಗು ಜಿಲ್ಲೆಯಲ್ಲಿ ವಾಸವಿದ್ದು, 14 ದಿನಗಳ ಕ್ವಾರಂಟೈನ್ ಅವಧಿ ಮುಗಿದಿರುತ್ತದೆ. ಆದರೂ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಕ್ವಾರಂಟೈನ್ ನಲ್ಲಿಡಲು ಕ್ರಮ ವಹಿಸಲಾಗಿದೆ. ಈ ಮೂವರನ್ನು ಸರ್ಕಾರದ ನಿರ್ದೇಶನದಂತೆ ಜಿಲ್ಲಾಡಳಿತದ ಸಮೂಹ ಸಂಪರ್ಕ ತಡೆ ಗೃಹಕ್ಕೆ ಸ್ಥಳಾಂತರಿಸುವ ಕಾರ್ಯ ನಡೆದಿದೆ.
ಆದ್ದರಿಂದ ಈ ಬಗ್ಗೆ ಜನರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ. ಆದರೂ ಪರಿಶೀಲನೆಯಿಂದ ದೆಹಲಿ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದವರು ಬಿಟ್ಟು ಹೋಗಿದ್ದಲ್ಲಿ, ಕೂಡಲೇ ಹತ್ತಿರದ ಸರ್ಕಾರಿ ಆಸ್ಪತ್ರೆಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿ ಅವರು ಕೋರಿದ್ದಾರೆ.