ನಿಗದಿಗಿಂತ ಹೆಚ್ಚಿನ ದರ ಮೀರಿ ವಸೂಲಿ ಮಾಡುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ: ಡಿಸಿಎಂ ಸವದಿ
ರಾಯಚೂರು, ಜೂ.4: ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನ ವೈರಸ್ ಸೋಂಕು ಚಿಕಿತ್ಸೆ ನೀಡಲು ಸರಕಾರ ನಿರ್ಧರಿಸಿದ್ದು, ನಿಗದಿತ ದರ ಮೀರಿ ಹೆಚ್ಚಿನ ದರ ವಸೂಲಿ ಮಾಡಿದರೆ ಅಂತಹ ಆಸ್ಪತ್ರೆಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೇಳಿದ್ದಾರೆ.
ಮಂಗಳವಾರ ರಾಯಚೂರು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶ್ರೀಮಂತರು ಕೊರೋನ ಚಿಕಿತ್ಸೆಗೆ ನಮಗೆ ಸರಕಾರಿ ಆಸ್ಪತ್ರೆ ಬೇಡ, ನಾವು ಖಾಸಗಿ ಆಸ್ಪತ್ರೆಗೆ ಹೊಗುತೇವೆ ಎನ್ನುತ್ತಿದ್ದಾರೆ, ಅಂಥವರಿಗಾಗಿ ಈಗಾಗಲೆ ಸರಕಾರ ಖಾಸಗಿ ಆಸ್ಪತ್ರೆಯಲ್ಲಿ ಕೊರೋನ ಚಿಕಿತ್ಸೆಗೆ ದರ ನಿಗದಿ ಪಡಿಸಿ ಆದೇಶ ಹೊರಡಿಸಿದೆ.
ಅಲ್ಲದೇ ಸರಕಾರಿ ಆಸ್ಪತ್ರೆಯಲ್ಲಿ ಕೊರೋನ ಸೋಂಕಿತರಿಗೆ ಉಚಿತವಾಗಿ ಚಿಕಿತ್ಸೆ ಸರಕಾರದಿಂದಲೇ ನೀಡುತ್ತಿದ್ದೇವೆ. ಹಾಗೂ ನಾವು ಯಾರಿಗೂ ಖಾಸಗಿ ಆಸ್ಪತ್ರೆಗೆ ಹೋಗಲು ಹೇಳಿಲ್ಲ, ಇಂಥ ಸಂದರ್ಭದಲ್ಲಿ ಎಲ್ಲ ಖಾಸಗಿ ಆಸ್ಪತ್ರೆಗಳಿಗೆ ಅನ್ವಯವಾಗುವಂತೆ ರಾಜ್ಯ ಸರಕಾರ ದರ ನಿಗದಿ ಮಾಡಿ ಸುತ್ತೋಲೆ ಹೊರಡಿಸಿದೆ. ಹೀಗಿರುವಾಗ ಸರಕಾರದ ನಿಯಮದಂತೆಯೆ ಖಾಸಗಿ ಆಸ್ಪತ್ರೆಗಳು ನಡೆದುಕೊಳ್ಳಬೇಕು ಎಂದು ಲಕ್ಷ್ಮಣ ಸವದಿ ಸ್ಪಷ್ಟನೆ ನೀಡಿದರು.
ಖಾಸಗಿ ಆಸ್ಪತ್ರೆಗಳು, ವೈದ್ಯಕೀಯ ಕಾಲೇಜುಗಳು ಶೇ.50ರಷ್ಟು ಹಾಸಿಗೆಗಳನ್ನು ಕೊರೋನ ಸೋಂಕಿತ ರೋಗಿಗಳಿಗೆ ಮೀಸಲಿಡಬೇಕು. ತಪ್ಪಿದಲ್ಲಿ ಸರಕಾರ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು.