ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿದ್ದರಿಂದ ಬಿಜೆಪಿಗೆ ಲಾಭ: ಸಚಿವ ಡಾ.ಕೆ.ಸುಧಾಕರ್
ಬೆಂಗಳೂರು, ಜು. 2: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಗೆ ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿರುವುದರಿಂದ ಬಿಜೆಪಿಗೆ ಲಾಭವಾಗಲಿದೆಯೇ ಹೊರತು ಕಾಂಗ್ರೆಸ್ ಪಕ್ಷಕ್ಕೆ ಅಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಇಂದಿಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.
ಗುರುವಾರ ನಗರದಲ್ಲಿ ಡಿ.ಕೆ.ಶಿವಕುಮಾರ್ ಪದಗ್ರಹಣದ ಹಿನ್ನೆಲೆಯಲ್ಲಿ ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸುಧಾಕರ್, ಡಿ.ಕೆ.ಶಿವಕುಮಾರ್ ಅಧ್ಯಕ್ಷರಾಗಿದ್ದು ಬಿಜೆಪಿಗೆ ಮತ್ತಷ್ಟು ಬಲ ಬರಲಿದೆ. ಅವರು ಅಧ್ಯಕ್ಷರಾದ ಕೂಡಲೇ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಭವಿಷ್ಯ ನುಡಿದರು.
ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಮುಖಂಡರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿದ್ದು, ಈ ಅವಧಿಯಲ್ಲಿ ಪಕ್ಷ ಏನಾಗಿತ್ತು ಎಂದು ಗೊತ್ತಿದೆ. ಇದೀಗ ಡಿ.ಕೆ.ಶಿವಕುಮಾರ್ ಅವರು ಅಧ್ಯಕ್ಷರಾದ ಮಾತ್ರಕ್ಕೆ ಪಕ್ಷ ಅಧಿಕಾರಕ್ಕೆ ಬರುವುದಿಲ್ಲ. ಅದೇನೇ ಇದ್ದರೂ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದು, ಅವರಿಗೆ ಶುಭ ಕೋರುತ್ತೇನೆ ಎಂದು ಹೇಳಿದರು.