ವಾಲ್ಮೀಕಿ ನಿಗಮದ ಅಧ್ಯಕ್ಷರಾಗಿ ಶಾಸಕ ಎಸ್.ವಿ.ರಾಮಚಂದ್ರ ಅಧಿಕಾರ ಸ್ವೀಕಾರ
ಬೆಂಗಳೂರು, ಆ. 6: ದಾವಣಗೆರೆ ಜಿಲ್ಲೆಯ ಜಗಳೂರು ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ವಿ.ರಾಮಚಂದ್ರ ಅವರು ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಗುರುವಾರ ಅಧಿಕಾರ ಸ್ವೀಕರಿಸಿದರು.
ಅನಂತರ ಅಧಿಕಾರಿಗಳೊಂದಿಗೆ ಅನೌಪಚಾರಿಕವಾಗಿ ಸಭೆ ನಡೆಸಿ, ನಿಗಮದ ಕ್ರಿಯಾ ಯೋಜನೆ ಕುರಿತು ಚರ್ಚಿಸಿದರು. ಪರಿಶಿಷ್ಟ ಪಂಗಡ ಸಮುದಾಯದ ಕಲ್ಯಾಣಕ್ಕಾಗಿ ರೂಪಿಸಿರುವ ಭೂ ಒಡೆತನ, ಗಂಗಕಲ್ಯಾಣ, ಸ್ವಯಂ ಉದ್ಯೋಗ, ಮೈಕ್ರೋ ಕ್ರೆಡಿಟ್ ಯೋಜನೆ, ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯಮ ಶೀಲತಾ ಯೋಜನೆ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಶ್ರಮಿಸಲಾಗುವುದು ಎಂದು ರಾಮಚಂದ್ರ ತಿಳಿಸಿದರು.
ಜಿಲ್ಲಾ ಪ್ರವಾಸ ಕೈಗೊಂಡ ಪ್ರಗತಿ ಪರಿಶೀಲನೆ ನಡೆಸಿ, ತಾಂತ್ರಿಕ ಸಮಸ್ಯೆಗಳ ಇತ್ಯರ್ಥಕ್ಕೂ ಶ್ರಮಿಸಲಾಗುವುದು. ನಿಗಮದ ಎಲ್ಲ ಅಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರು ಸಮುದಾಯದ ಏಳಿಗೆಗಾಗಿ ಸ್ವಯಂ ಪ್ರೇರಿತವಾಗಿ ಕಾರ್ಯನಿರ್ವಹಿಸಬೇಕು ಎಂದು ತಿಳಿಸಿದರು. ನಿಗಮದ ವ್ಯವಸ್ಥಾಪಕ ನಿರ್ದೇಶಕ ಹನುಮನರಸಯ್ಯ ಸೇರಿದಂತೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.