ಕೊರೋನ ಸೋಂಕು ಹೆಚ್ಚಳ ಹಿನ್ನೆಲೆ: ಕೋರ್ಟ್ ನೀಡಿರುವ ಮಧ್ಯಂತರ ಆದೇಶಗಳ ವಿಸ್ತರಣೆ
ಬೆಂಗಳೂರು, ಆ.7: ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹೈಕೋರ್ಟ್ ಸೇರಿ ರಾಜ್ಯದ ಎಲ್ಲ ಕೋರ್ಟ್ಗಳು ನೀಡಿರುವ ಮಧ್ಯಂತರ ಆದೇಶಗಳನ್ನು ಸೆಪ್ಟೆಂಬರ್ ಅಂತ್ಯದವರೆಗೂ ವಿಸ್ತರಣೆ ಮಾಡಿ ಹೈಕೋರ್ಟ್ ಆದೇಶಿಸಿದೆ.
ಈ ಕುರಿತು ಮೊಹಮ್ಮದ್ ಆರೀಫ್ ಜಮೀಲ್ ಮತ್ತಿತರರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ಹಾಗೂ ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಅರ್ಜಿದಾರರ ಪರ ವಾದಿಸಿದ ವಕೀಲ ರೆಹಮತ್ ಉಲ್ಲಾ ಕೊತ್ವಾಲ್ ಅವರು, ರಾಜ್ಯದಲ್ಲಿ ಕೊರೋನ ಸೋಂಕು ಕೂಡ ವ್ಯಾಪಕವಾಗಿ ಹರಡುತ್ತಿದೆ. ಇದರ ಮಧ್ಯೆಯೇ ಕಕ್ಷಿದಾರರ ಹಿತವನ್ನೂ ಕಾಯುವ ಅವಶ್ಯಕತೆ ಇದೆ. ಹೀಗಾಗಿ, ಕೋರ್ಟ್ಗಳು ನೀಡಿರುವ ಮಧ್ಯಂತರ ಆದೇಶಗಳನ್ನು ಮುಂದೂಡಬೇಕೆಂದು ಪೀಠಕ್ಕೆ ತಿಳಿಸಿದರು.
ವಕೀಲರ ವಾದ ಆಲಿಸಿದ ನ್ಯಾಯಪೀಠವು ಹೈಕೋರ್ಟ್, ಜಿಲ್ಲಾ ಕೋರ್ಟ್ಗಳು, ಸಿವಿಲ್ ಕೋರ್ಟ್ಗಳು, ಫ್ಯಾಮಿಲಿ ಕೋರ್ಟ್ಗಳು, ಕಾರ್ಮಿಕ ನ್ಯಾಯಾಲಯಗಳು, ಕೈಗಾರಿಕಾ ನ್ಯಾಯಮಂಡಳಿಗಳು ಸೇರಿ ರಾಜ್ಯದ ಎಲ್ಲ ಕೋರ್ಟ್ಗಳು ಹೊರಡಿಸಿದ ಮಧ್ಯಂತರ ಆದೇಶಗಳನ್ನು ಸೆಪ್ಟೆಂಬರ್ ಅಂತ್ಯದವರೆಗೂ ವಿಸ್ತರಿಸಿ ಆದೇಶ ನೀಡಿತು.