ಎಸೆಸೆಲ್ಸಿ ವಿದ್ಯಾರ್ಥಿಯ ಉತ್ತರ ಪತ್ರಿಕೆಗಳ ಹಾಳೆ ಬದಲಾವಣೆ ಪ್ರಕರಣ: ಸೂಕ್ತ ತನಿಖೆಗೆ ಸುರೇಶ್ ಕುಮಾರ್ ಸೂಚನೆ
ಬೆಂಗಳೂರು, ಆ.18: ಎಸೆಸೆಲ್ಸಿ ವಿದ್ಯಾರ್ಥಿನಿಯ ಉತ್ತರ ಪತ್ರಿಕೆಗಳ ಹಾಳೆಗಳು ಬದಲಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡುವಂತೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದಾರೆ.
ಪ್ರಕರಣ ಸಂಬಂಧ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಮಂಡ್ಯ ಜಿಲ್ಲೆ ಶ್ರೀರಂಗಪಟ್ಟದ ತರೀಪುರ ಗ್ರಾಮದ ಎಸೆಸೆಲ್ಸಿ ವಿದ್ಯಾರ್ಥಿನಿ ಅಶ್ವಿನಿಯ ಉತ್ತರ ಪತ್ರಿಕೆಗಳ ಹಾಳೆಗಳು ಬದಲಾಗಿರುವುದು ಗಂಭೀರ ವಿಷಯವಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಅಧಿಕಾರಿಗಳಿಗೆ ಆದೇಶಿಸಿದ್ದಾರೆ.
''ವಿದ್ಯಾರ್ಥಿನಿ ಅಶ್ವಿನಿ ಪ್ರತಿಭಾವಂತೆಯಾಗಿದ್ದಳು. ಆದರೆ, ಎಸೆಸೆಲ್ಸಿ ಪರೀಕ್ಷೆಯ ಕೆಲ ವಿಷಯಗಳಲ್ಲಿ ತೀರಾ ಕಡಿಮೆ ಅಂಕ ಬಂದಿದ್ದರಿಂದ ಆತಂಕಗೊಂಡು ಉತ್ತರ ಪತ್ರಿಕೆಗಳ ನಕಲನ್ನು ಪಡೆದು ಪರೀಕ್ಷಿಸಲಾಯಿತು. ಕನ್ನಡ ಮತ್ತು ವಿಜ್ಞಾನ ವಿಷಯಗಳ ಉತ್ತರ ಪತ್ರಿಕೆಗಳ ಮೊದಲ ಪುಟ ಹೊರತುಪಡಿಸಿ ಉಳಿದೆಲ್ಲ ಹಾಳೆಗಳನ್ನು ಬದಲಾಯಿಸಲಾಗಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸಿ ವಿದ್ಯಾರ್ಥಿನಿಗೆ ನ್ಯಾಯ ಒದಗಿಸಿಕೊಡಬೇಕೆಂದು ಶಾಲೆಯ ಮುಖ್ಯ ಶಿಕ್ಷಕ ನಂಜೇಗೌಡ ಒತ್ತಾಯಿಸಿದ್ದಾರೆ.