ಸಿಎಎ ಅಸಾಂವಿಧಾನಿಕ ಎಂದು ಘೋಷಿಸಲು ಕೋರಿ ಅರ್ಜಿ: ವಿಚಾರಣೆ ಅ.5ಕ್ಕೆ ಮುಂದೂಡಿದ ಹೈಕೋರ್ಟ್
ಬೆಂಗಳೂರು, ಆ.25: ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಅಸಾಂವಿಧಾನಿಕ ಎಂದು ಘೋಷಿಸುವಂತೆ ಕೋರಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆಯನ್ನು ಹೈಕೋರ್ಟ್ ಅಕ್ಟೋಬರ್ 5ಕ್ಕೆ ಮುಂದೂಡಿದೆ.
ನಗರದ ಮುಹಮ್ಮದ್ ಆರೀಫ್ ಜಮೀಲ್, ಪೀಪಲ್ಸ್ ಯುನಿಟಿ ಫಾರ್ ಸಿವಿಲ್ ಲಿರ್ಬಟೀಸ್ ಅಂಡ್ ಹ್ಯೂಮನ್ ರೈಟ್ಸ್ ಫೋರಂ ಮತ್ತಿತರ ಸಂಘಟನೆಗಳು ಪ್ರತ್ಯೇಕವಾಗಿ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕಾ ನೇತೃತ್ವದ ವಿಭಾಗೀಯ ನ್ಯಾಯಪೀಠದಲ್ಲಿ ನಡೆಯಿತು.
ಕೇಂದ್ರ ಸರಕಾರದ ಪರ ವಾದಿಸಿದ ಸಹಾಯಕ ಸಾಲಿಸಿಟರ್ ಜನರಲ್ ಸಿ.ಶಶಿಕಾಂತ್ ಅವರು, ಸಿಎಎ ಹಾಗೂ ಎನ್ಆರ್ಸಿಗೆ ಸಂಬಂಧಿಸಿದಂತೆ ದೇಶದ ಹಲವು ಹೈಕೋರ್ಟ್ ಗಳಲ್ಲಿ ಪಿಐಎಲ್ಗಳನ್ನು ಸಲ್ಲಿಸಲಾಗಿದೆ. ಆದರೆ, ಇದೇ ವಿಷಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನಲ್ಲಿಯೂ ಅರ್ಜಿ ಸಲ್ಲಿಸಲಾಗಿದೆ. ಈ ಅರ್ಜಿ ವಿಚಾರಣಾ ಹಂತದಲ್ಲಿದ್ದು, ಸಿಎಎಗೆ ಸಂಬಂಧಿಸಿದ ಅರ್ಜಿಗಳನ್ನು ಯಾವುದೇ ಹೈಕೋರ್ಟ್ ಗಳು ವಿಚಾರಣೆ ನಡೆಸದಂತೆ ಸುಪ್ರೀಂಕೋರ್ಟ್ ನಿರ್ದೇಶಿಸಿದೆ. ಸುಪ್ರೀಂ ಆದೇಶ ಇನ್ನೂ ಚಾಲ್ತಿಯಲ್ಲಿರುವುದರಿಂದ, ಪಿಐಎಲ್ ವಿಚಾರಣೆ ಮುಂದೂಡಬೇಕು ಎಂದು ಮನವಿ ಮಾಡಿದರು.
ಕೇಂದ್ರದ ಪರ ವಕೀಲರ ವಾದ ಪರಿಗಣಿಸಿದ ಪೀಠ, ಅರ್ಜಿ ವಿಚಾರಣೆಯನ್ನು ಅ.5ಕ್ಕೆ ಮುಂದೂಡಿತು.