ಚಿತ್ರರಂಗಕ್ಕೆ ಮಾದಕ ದ್ರವ್ಯದ ನಂಟು ಅಘಾತಕಾರಿ: ದಿನೇಶ್ ಗುಂಡೂರಾವ್
ಬೆಂಗಳೂರು, ಆ. 30: ಕನ್ನಡ ಚಿತ್ರರಂಗಕ್ಕೆ ಮಾದಕದ್ರವ್ಯದ ನಂಟು ಇದೆ ಎನ್ನುವ ವಿಚಾರ ನಿಜಕ್ಕೂ ಆಘಾತಕಾರಿ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅಭಿಪ್ರಾಯಪಟ್ಟಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ರಾಜ್ಯದಲ್ಲಿ ಮಾದಕ ದ್ರವ್ಯದ ದೊಡ್ಡ ಜಾಲವೇ ಪತ್ತೆಯಾಗಿದೆ. ಡ್ರಗ್ಸ್ ಪೆಡ್ಲರ್ ಗಳ ಜೊತೆ ಕನ್ನಡ ಚಿತ್ರರಂಗದ ಕೆಲವರ ನಂಟು ಇದೆ ಎಂಬ ಮಾತು ಆಘಾತಕಾರಿ. ಯುವ ಸಮುದಾಯ ಮಾದಕ ವ್ಯಸನಕ್ಕೆ ಅತಿ ಹೆಚ್ಚು ಬಲಿಯಾಗುತ್ತಿದ್ದಾರೆ. ರಾಜ್ಯ ಸರಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ಮಾದಕ ವಸ್ತು ಜಾಲವನ್ನು ಮಟ್ಟ ಹಾಕಬೇಕು ಎಂದು ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಮಾದಕ ದ್ರವ್ಯ ಮಾರಾಟ ಸಂಬಂಧ ಈಗಾಗಲೇ ಕಾಂಗ್ರೆಸ್ ಪಕ್ಷದ ಹಲವು ನಾಯಕರು ಬೇಸರ ವ್ಯಕ್ತಪಡಿಸಿದ್ದು, ಸರ್ಕಾರ ಪರಿಣಾಮಕಾರಿಯಾಗಿ ಇದನ್ನು ನಿಯಂತ್ರಿಸಬೇಕು ಎಂದು ಆಗ್ರಹಿಸಿದ್ದಾರೆ.
ಕೇಂದ್ರ ಗೃಹ ಸಚಿವರಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ವಿಧಾನಸಭೆ ಪತ್ರ ಬರೆದು, ಇದರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಅದೇ ರೀತಿಯಲ್ಲಿ ಕಾಂಗ್ರೆಸ್ನ ಹಲವು ನಾಯಕರು ಡ್ರಗ್ಸ್ ದಂಧೆ ವಿರುದ್ಧ ಧ್ವನಿ ಎತ್ತಿದ್ದು ರಾಜ್ಯ ಸರಕಾರ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.