ಬಂಧನದ ಬೆನ್ನಲ್ಲೇ ನಟಿ ರಾಗಿಣಿ ಬಿಜೆಪಿ ನಾಯಕ ವಿಜಯೇಂದ್ರ ಜೊತೆಗಿದ್ದ ಫೋಟೋ ವೈರಲ್
ಬೆಂಗಳೂರು, ಸೆ.4: ಡ್ರಗ್ಸ್ ಪ್ರಕರಣ ಆರೋಪದ ಮೇಲೆ ಸಿಸಿಬಿ ಪೊಲೀಸರು ಶುಕ್ರವಾರ ಚಿತ್ರ ನಟಿ ರಾಗಿಣಿ ದ್ವಿವೇದಿಯನ್ನು ಬಂಧಿಸಿದ್ದು, ಇದರ ಬೆನ್ನಲ್ಲೇ 2019ರ ಉಪ ಚುನಾವಣೆಯಲ್ಲಿ ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಜತೆ ಪ್ರಚಾರಕಿಯಾಗಿದ್ದ ರಾಗಿಣಿ ಅವರ ಪೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಸಚಿವ ಕೆ.ಸಿ.ನಾರಾಯಣ ಗೌಡ 2019ರಲ್ಲಿ ನಡೆದ ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದರು. ಆಗ ರಾಗಿಣಿ ಕೆ.ಆರ್.ಪೇಟೆ ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡು ಬಿಜೆಪಿ ಪರ ಪ್ರಚಾರ ಮಾಡಿದ್ದರು.
ಶುಕ್ರವಾರ ಬೆಳಗ್ಗೆ ಸಿಸಿಬಿ ಪೊಲೀಸರು ನಟಿಯ ಮನೆ ಮೇಲೆ ದಾಳಿ ನಡೆಸಿದ ಬೆನ್ನಲ್ಲೇ ರಾಗಿಣಿ ಅವರು ಉಪ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರದಲ್ಲಿ ಪಾಲ್ಗೊಂಡಿದ್ದ ಫೋಟೊ, ವಿಡಿಯೊಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡಲಾರಂಭಿಸಿದವು.
ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ನಾಯಕರೊಂದಿಗೆ ಮನೆ, ಮನೆಗೂ ತೆರಳಿ ಮತ ಯಾಚಿಸಿದ್ದರು. ಅಷ್ಟೇ ಅಲ್ಲದೆ, 2019ರ ಲೋಕಸಭಾ ಚುನಾವಣೆಗೂ ಮೊದಲೇ ರಾಗಿಣಿ ಬಿಜೆಪಿ ಸೇರಲು ಉತ್ಸುಕರಾಗಿದ್ದರು. ಆದರೆ, ಅವರ ಆಸೆ ಕೈಗೂಡಿರಲಿಲ್ಲ ಎಂದು ಹೇಳಲಾಗಿದೆ.