ಕೆಕೆಆರ್ ಡಿಬಿಯಿಂದ ಬಳ್ಳಾರಿ ಜಿಲ್ಲೆಗೆ 862 ಕೋಟಿ ರೂ. ಹಂಚಿಕೆ: ಆನಂದ್ ಸಿಂಗ್
ಬಳ್ಳಾರಿ, ಸೆ.17: ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ 2013-14 ನೇ ಸಾಲಿನಿಂದ ಇಲ್ಲಿಯವರೆಗೆ ಬಳ್ಳಾರಿ ಜಿಲ್ಲೆಗೆ ಒಟ್ಟು 862.54 ಕೋಟಿ ರೂ.ಅನುದಾನ ಹಂಚಿಕೆಯಾಗಿದ್ದು, ಒಟ್ಟು 3341 ಕಾಮಗಾರಿಗಳನ್ನು ಕೈಗೆತ್ತಿಕೊಂಡು 2904 ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. ಇದಕ್ಕೆ 598.60 ಕೋಟಿ ರೂ. ಅನುದಾನ ವೆಚ್ಚ ಮಾಡಲಾಗಿದೆ ಎಂದು ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಆನಂದ್ ಸಿಂಗ್ ಹೇಳಿದರು.
ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆ ನಿಮಿತ್ತ ಜಿಲ್ಲಾಡಳಿತದ ವತಿಯಿಂದ ನಗರದ ಮುನ್ಸಿಪಲ್ ಕಾಲೇಜಿನಲ್ಲಿ ಗುರುವಾರ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿ ಅವರು ಮಾತನಾಡಿದರು.
ಕಲ್ಯಾಣ ಕರ್ನಾಟಕ ಭಾಗದ ವ್ಯಾಪ್ತಿಗೆ ಒಳಪಡುವ 6 ಜಿಲ್ಲೆಗಳಲ್ಲಿ ಶಿಕ್ಷಣ ಹಾಗೂ ಉದ್ಯೋಗ ಮೀಸಲಾತಿಗಾಗಿ ಶೇ.80 ರಷ್ಟು ಮೀಸಲಾತಿ ಕಲ್ಪಿಸಲಾಗಿದೆ ಹಾಗೂ ಹೈದ್ರಾಬಾದ್ ಕರ್ನಾಟಕ ಪ್ರದೇಶ ಹೊರತುಪಡಿಸಿದ ಇತರೆ ಭಾಗದ ನೌಕರಿ ಮತ್ತು ವೃತ್ತಿ ಶಿಕ್ಷಣದಲ್ಲಿ ಈ ಭಾಗದ ಜನರಿಗಾಗಿ ಶೇ.8 ರಷ್ಟು ಮೀಸಲಾತಿಯನ್ನು ಕಲ್ಪಿಸಲಾಗಿದೆ ಎಂದು ಅವರು ಹೇಳಿದರು.
ಇದರ ಲಾಭವನ್ನು ಪಡೆಯಲು ಇಲ್ಲಿಯವರೆಗೆ ಬಳ್ಳಾರಿ ಜಿಲ್ಲೆಯ ಹರಪ್ಪನಹಳ್ಳಿ, ಹೊಸಪೇಟೆ ಹಾಗೂ ಬಳ್ಳಾರಿ ಉಪ ವಿಭಾಗಗಳು ಒಟ್ಟು 1,41,877 ಅಭ್ಯರ್ಥಿಗಳಿಗೆ 371(ಜೆ) ಪ್ರಮಾಣ ಪತ್ರಗಳನ್ನು ವಿತರಿಸಲಾಗಿದೆ. ಇದರಿಂದಾಗಿ ಶಿಕ್ಷಣ ಹಾಗೂ ಸರಕಾರದ ವಿವಿಧ ಇಲಾಖೆಗಳಲ್ಲಿ ಉದ್ಯೋಗ ಮೀಸಲಾತಿಯನ್ನು ಪಡೆಯಲು ಅನುಕೂಲವಾಗಿದೆ ಎಂದು ಆನಂದ್ ಸಿಂಗ್ ತಿಳಿಸಿದರು.
ಈ ಭಾಗದ ಜನರ ಅಭಿವೃದ್ಧಿಗಾಗಿ ನಮ್ಮ ಸರಕಾರ ವಿನೂತನ ಯೋಜನೆಗಳನ್ನು ಹಮ್ಮಿಕೊಂಡು ಅಭಿವೃದ್ಧಿ ಸಾಧಿಸಲು ಕಂಕಣಬದ್ಧವಾಗಿದೆ. ಆದರೆ ಕೊರೋನ ಮಾಹಾಮಾರಿಯಿಂದಾಗಿ ಪ್ರಗತಿಗೆ ತೊಡಕನ್ನುಂಟು ಮಾಡಿದೆ. ಆದರೂ ಸಹಿತ ನಮ್ಮ ಸರಕಾರ ಕೋವಿಡ್ ಅನ್ನು ಸಮರ್ಥವಾಗಿ ನಿಯಂತ್ರಿಸುವಲ್ಲಿ ಹಲವಾರು ಕ್ರಮಗಳನ್ನು ಕೈಗೊಂಡಿದೆ ಎಂದು ಅವರು ಹೇಳಿದರು.
ಬಳ್ಳಾರಿ ಜಿಲ್ಲೆಯಲ್ಲಿ ಕೊರೋನ ನಿಯಂತ್ರಿಸಲು 4 ಕೋವಿಡ್ ಆಸ್ಪತ್ರೆಗಳನ್ನು ಸ್ಥಾಪಿಸಲಾಗಿದೆ. 33 ಕೋವಿಡ್ ಹೆಲ್ತ್ ಸೆಂಟರ್ ಗಳು ಕಾರ್ಯನಿರ್ವಹಿಸುತ್ತಿವೆ. 1128 ಆಕ್ಸಿನೇಟಡ್ ಬೆಡ್ಗಳು, 116 ವೆಂಟಿಲೇಟರ್ ಬೆಡ್ಗಳನ್ನು ಹಾಗೂ 210 ಐ.ಸಿ.ಯು ಬೆಡ್ಗಳನ್ನು ಸ್ಥಾಪಿಸಲಾಗಿದೆ ಎಂದು ಅವರು ಹೇಳಿದರು.
ಜಿಲ್ಲಾ ಆಸ್ಪತ್ರೆಯಲ್ಲಿ 6 ಸಾವಿರ ಲೀಟರ್ ಆಕ್ಸಿಜನ್ ಪ್ಲಾಂಟ್ ಒಳಗೊಂಡಂತೆ ವಿಮ್ಸ್ ಡೆಂಟಲ್ ಕಾಲೇಜ್ ನಲ್ಲಿ 13 ಸಾವಿರ ಕಿಲೋ ಲೀಟರ್, ಟ್ರಾಮಾ ಕೇರ್ ಸೆಂಟರ್ ನಲ್ಲಿ 13 ಸಾವಿರ ಕಿಲೋ ಲೀಟರ್ ಆಕ್ಸಿಜನ್ ಪ್ಲಾಂಟ್ ಅಳವಡಿಸಲಾಗಿದೆ ಎಂದು ಅವರು ತಿಳಿಸಿದರು.
ಬಳ್ಳಾರಿ ನಗರ ಶಾಸಕ ಜಿ.ಸೋಮಶೇಖರ ರೆಡ್ಡಿ, ವಿಧಾನಪರಿಷತ್ ಸದಸ್ಯರಾದ ಕೆ.ಸಿ.ಕೊಂಡಯ್ಯ, ಅಲ್ಲಂವೀರಭದ್ರಪ್ಪ, ಬುಡಾ ಅಧ್ಯಕ್ಷ ದಮ್ಮೂರು ಶೇಖರ್, ಡಿಸಿ ಎಸ್.ಎಸ್.ನಕುಲ್, ಎಸ್ಪಿ ಸೈದುಲು ಅಡಾವತ್, ಜಿಪಂ ಸಿಇಒ ಕೆ.ಆರ್.ನಂದಿನಿ, ಅಪರ ಜಿಲ್ಲಾಧಿಕಾರಿ ಪಿ.ಎಸ್.ಮಂಜುನಾಥ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.