ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾದ ಆರೋಗ್ಯ ಇಲಾಖೆ ಗುತ್ತಿಗೆ ನೌಕರರು
ಬೆಂಗಳೂರು, ಸೆ.24: ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಆಗ್ರಹಿಸಿ ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಮುಂದಾಗಿದ್ದಾರೆ.
ಕೊರೋನ ವಾರಿಯರ್ಸ್ ಗಳಾದ ನಮಗೆ ನಿಮ್ಮ ಚಪ್ಪಾಳೆ ಬೇಡ. ಬದಲಿಗೆ ನಮಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡಿ ಎಂದು ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನ ಮತ್ತು ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಮತ್ತು ಹೊರ ಗುತ್ತಿಗೆ ನೌಕರರು ಕಳೆದ ಮೂರು ದಿನದಿಂದ ಕೆಲಸಕ್ಕೆ ಹಾಜರಾಗಿ ಪ್ರತಿಭಟಿಸಿದ್ದರು. ಆದರೆ ಸರಕಾರ ಗಮನ ಕೊಡದೇ ಇದ್ದ ಕಾರಣ ಮನೆಯಲ್ಲಿಯೇ ಇದ್ದು ಅನಿರ್ದಿಷ್ಟಾವಧಿಗೆ ಪ್ರತಿಭಟನೆ ಆರಂಭಿಸಿದ್ದಾರೆ.
ಸಮಾನ ಕೆಲಸಕ್ಕೆ ಸಮಾನ ವೇತನ ನೀಡಬೇಕು. ಸೇವಾ ಭದ್ರತೆ ಒದಗಿಸಬೇಕು. 10-15 ವರ್ಷದಿಂದ ಒಂದೇ ಕಡೆ ಕೆಲಸ, ವರ್ಗಾವಣೆ ಇಲ್ಲ. ಹೊರ ಗುತ್ತಿಗೆ ಪದ್ಧತಿ ಕೈ ಬಿಡಬೇಕೆಂದು ಒತ್ತಾಯಿಸಿ ಸುಮಾರು 30 ಸಾವಿರಕ್ಕೂ ಹೆಚ್ಚು ನೌಕರರು ಕೆಲಸಕ್ಕೆ ಹಾಜರಾಗದೆ ಪ್ರತಿಭಟನೆ ನಡೆಸುತ್ತಿದ್ದಾರೆ.