ಬೆಂಗಳೂರಿನಲ್ಲಿ ಎನ್ಐಎ ಶಾಶ್ವತ ಕಚೇರಿ ತೆರೆಯಲು ಅಮಿತ್ ಶಾಗೆ ತೇಜಸ್ವಿ ಸೂರ್ಯ ಮನವಿ
Photo: Twitter/Tejasvi_Surya
ಹೊಸದಿಲ್ಲಿ, ಸೆ.27: ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ, ಕೇಂದ್ರ ಗೃಹ ಸಚಿವ ಅಮಿತ್ ಶಾರನ್ನು ಇತ್ತೀಚೆಗೆ ಭೇಟಿಯಾಗಿ ರಾಷ್ಟ್ರೀಯ ತನಿಖಾ ದಳ(ಎನ್ಐಎ)ದ ಶಾಶ್ವತ ಕಚೇರಿಯನ್ನು ಬೆಂಗಳೂರಿನಲ್ಲಿ ಆರಂಭಿಸುವಂತೆ ಮನವಿ ಸಲ್ಲಿಸಿದ್ದಾರೆ.
ಇತ್ತೀಚಿಗಿನ ವರ್ಷಗಳಲ್ಲಿ ಬೆಂಗಳೂರು ಮತ್ತು ಕರ್ನಾಟಕದಲ್ಲಿ ಹೆಚ್ಚುತ್ತಿರುವ ಉಗ್ರಗಾಮಿ ಕೃತ್ಯಗಳನ್ನು ಮಟ್ಟ ಹಾಕುವ ನಿಟ್ಟಿನಲ್ಲಿ ಎನ್ಐಎ ಕಚೇರಿ ಬೆಂಗಳೂರಿನಲ್ಲಿ ಆರಂಭಿಸುವಂತೆ ಒತ್ತಾಯ ಮಾಡಿದ್ದು, ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಅಮಿತ್ ಶಾ, ಎನ್ಐಎ ಶಾಶ್ವತ ಕಚೇರಿ ಬೆಂಗಳೂರಿನಲ್ಲಿ ಆರಂಭಿಸಲು ಒಪ್ಪಿಗೆ ನೀಡಿದ್ದಾರೆ.
ದಕ್ಷಿಣ ಭಾರತದ ಪ್ರಮುಖ ಆರ್ಥಿಕ ಕೇಂದ್ರವಾಗಿರುವ ಬೆಂಗಳೂರು ನಗರವನ್ನು ಉಗ್ರಗಾಮಿ, ದೇಶವಿರೋಧಿ ಕೃತ್ಯಗಳಿಂದ ಮುಕ್ತವಾಗಿಡುವುದಕ್ಕೆ ಎನ್ಐಎ ಪ್ರಾದೇಶಿಕ ಕಚೇರಿಯ ಅಗತ್ಯವಿದ್ದು, ಈ ಮನವಿಗೆ ಕೇಂದ್ರ ಗೃಹ ಸಚಿವರು ಸಕಾರಾತ್ಮಕ ಸ್ಪಂದನೆ ನೀಡಿದ್ದಾರೆ ಎಂದು ತೇಜಸ್ವಿ ಸೂರ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.