ಮಸ್ಕಿ ಕ್ಷೇತ್ರದ ಉಪಚುನಾವಣೆಗಿದ್ದ ಅಡ್ಡಿ ನಿವಾರಿಸಿದ ಹೈಕೋರ್ಟ್
ಪ್ರತಾಪ್ ಗೌಡ ಪಾಟೀಲ್ ವಿರುದ್ಧದ ಅರ್ಜಿ ವಜಾ
ಪ್ರತಾಪ್ ಗೌಡ ಪಾಟೀಲ್
ಬೆಂಗಳೂರು, ಸೆ.28: ಚುನಾವಣೆಯಲ್ಲಿ ಅಕ್ರಮವಾಗಿ ಗೆಲುವು ಸಾಧಿಸಿರುವ ಪ್ರತಾಪ್ ಗೌಡ ಪಾಟೀಲ್ ಅವರ ಆಯ್ಕೆಯನ್ನು ಅಸಿಂಧುಗೊಳಿಸಬೇಕು, ಮಸ್ಕಿ ಕ್ಷೇತ್ರದ ಶಾಸಕರಾಗಿ ತಮ್ಮನ್ನು ಘೋಷಿಸಬೇಕು ಎಂದು ಕೋರಿ ಪರಾಜಿತ ಅಭ್ಯರ್ಥಿ ಬಸವನಗೌಡ ತುರವಿಹಾಳ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಮಸ್ಕಿ ಕ್ಷೇತ್ರದ ಉಪ ಚುನಾವಣೆಗಿದ್ದ ಅಡ್ಡಿಯೂ ನಿವಾರಣೆಯಾಗಿದೆ.
2018ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲ್ ಅಕ್ರಮ ಎಸಗಿದ್ದಾರೆ ಎಂದು ಆರೋಪಿಸಿದ್ದ ಬಸವನಗೌಡ ತುರವಿಹಾಳ ಅವರು ತಮ್ಮನ್ನು ಶಾಸಕರಾಗಿ ಘೋಷಿಸಬೇಕು ಎಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಅರ್ಜಿದಾರರು ಸೂಕ್ತ ದಾಖಲೆಗಳನ್ನು ಒದಗಿಸಿಲ್ಲ ಎಂಬ ಆಧಾರದಲ್ಲಿ ಅರ್ಜಿದಾರರ ಕೋರಿಕೆ ತಿರಸ್ಕಿರಿಸಿ, ಅರ್ಜಿ ವಜಾಗೊಳಿಸಿ ಆದೇಶಿಸಿದೆ.
ಪ್ರಕರಣದ ಹಿನ್ನೆಲೆ: 2018ರ ಸಾರ್ವತ್ರಿಕ ಚುನಾವಣೆಯಲ್ಲಿ ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಪ್ರತಾಪ್ ಗೌಡ ಪಾಟೀಲ್ ಬಿಜೆಪಿಯ ಪ್ರತಿಸ್ಪರ್ಧಿ ಬಸನಗೌಡ ತುರವಿಹಾಳ್ ವಿರುದ್ಧ ಗೆಲುವು ಸಾಧಿಸಿದ್ದರು. ಬಳಿಕ, ಬಸನಗೌಡ ತುರವಿಹಾಳ್ ಅವರು ಪ್ರತಾಪ್ ಗೌಡ ಪಾಟೀಲ್ ಅವರು ಅಕ್ರಮವಾಗಿ ಮತಗಳನ್ನು ಪಡೆದು ಆಯ್ಕೆಯಾಗಿದ್ದಾರೆ ಎಂದು ಆರೋಪಿಸಿದ್ದರಲ್ಲದೇ, ಅವರ ಆಯ್ಕೆಯನ್ನು ಅಸಿಂಧುಗೊಳಿಸಿ, ತಮ್ಮನ್ನು ಶಾಸಕರಾಗಿ ಘೋಷಿಸಬೇಕು ಎಂದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು.
ಈ ನಡುವೆ ಪ್ರತಾಪ್ ಗೌಡ ಪಾಟೀಲ್ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರಿಂದ ಶಾಸಕ ಸ್ಥಾನದಿಂದ ಅನರ್ಹಗೊಂಡಿದ್ದರು. ಹೀಗಾಗಿ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಬೇಕಿತ್ತು. ಆದರೆ ಹೈಕೋರ್ಟ್ ನಲ್ಲಿ ಚುನಾವಣಾ ತಕರಾರು ಅರ್ಜಿ ಬಾಕಿ ಇದ್ದುದರಿಂದ ಉಪ ಚುನಾವಣೆ ನಡೆಸಿರಲಿಲ್ಲ. ಇದೀಗ ಹೈಕೋರ್ಟ್ ಅರ್ಜಿದಾರರು ಸೂಕ್ತ ದಾಖಲೆಗಳನ್ನು ಒದಗಿಸಿಲ್ಲ ಎಂಬ ಕಾರಣಕ್ಕೆ ತಕರಾರು ಅರ್ಜಿ ವಜಾಗೊಳಿಸಿದೆ. ತಕರಾರು ವಜಾಗೊಂಡಿರುವುದರಿಂದ ಉಪಚುನಾವಣೆಗೆ ಇದ್ದ ಅಡ್ಡಿ ನಿವಾರಣೆಯಾದಂತಾಗಿದೆ.