ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ: ಮಾಜಿ ಸಿಎಂ ಸಿದ್ದರಾಮಯ್ಯ
ಬೆಂಗಳೂರು, ಸೆ. 30: ಅತ್ಯಾಚಾರಕ್ಕೊಳಗಾಗಿ ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಫಲಿಸದೆ ಹೊಸದಿಲ್ಲಿ ಆಸ್ಪತ್ರೆಯಲ್ಲಿ ಅಸುನೀಗಿದ ಉತ್ತರ ಪ್ರದೇಶದ ದಲಿತ ಯುವತಿಯ ಅಂತ್ಯ ಸಂಸ್ಕಾರವನ್ನು ಅಲ್ಲಿನ ಪೊಲೀಸರು ಒತ್ತಾಯಪೂರ್ವಕವಾಗಿ ಮಾಡಿರುವುದನ್ನು ವಿಧಾನಸಭೆ ವಿರೋಧ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರವಾಗಿ ಖಂಡಿಸಿದ್ದಾರೆ.
ಬುಧವಾರ ಸರಣಿ ಟ್ವೀಟ್ ಮಾಡಿರುವ ಅವರು, 'ಅತ್ಯಾಚಾರಕ್ಕೊಳಗಾಗಿ ಸಾವಿಗೀಡಾದ ಉತ್ತರ ಪ್ರದೇಶದ ದಲಿತ ಯುವತಿಗೆ ಗೌರವಪೂರ್ವಕ ಅಂತ್ಯಕ್ರಿಯೆಗೂ ಅವಕಾಶ ನೀಡದೆ, ಹೆತ್ತವರನ್ನು ಗೋಳಾಡಿಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕಾವಿಧಾರಿಗಳ ಪಾಲಿನ ಕಳಂಕ. ಇವರ ಆಡಳಿತದಲ್ಲಿ ಉತ್ತರ ಪ್ರದೇಶದ ಯಾವ ಹೆಣ್ಣು ಮಕ್ಕಳೂ ಸುರಕ್ಷಿತರಲ್ಲ. ಮೊದಲು ಇವರನ್ನು ವಜಾ ಮಾಡಿ' ಎಂದು ಆಗ್ರಹಿಸಿದ್ದಾರೆ.
'ಉತ್ತರ ಪ್ರದೇಶದಲ್ಲಿ ನಡೆದ ದಲಿತ ಯುವತಿಯ ಅತ್ಯಾಚಾರ ಮತ್ತು ಕೊಲೆಯ ಹೊಣೆಯನ್ನು ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮಾತ್ರವಲ್ಲ, ಅವರನ್ನು ಬೆಂಬಲಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಮತ್ತು ಸಮಸ್ತ ಸಂಘ ಪರಿವಾರ ಕೂಡಾ ಹೊರಬೇಕಾಗುತ್ತದೆ. ತಕ್ಷಣ ಯುಪಿ ಸಿಎಂ ಯೋಗಿ ಆದಿತ್ಯ ನಾಥ್ ಅವರನ್ನು ಕಿತ್ತು ಹಾಕಿ ಉತ್ತರ ಪ್ರದೇಶವನ್ನು ರಕ್ಷಿಸಿ' ಎಂದು ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.