'ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರಿಗೆ ಸಂಕಷ್ಟ': ಅಡಿಕೆ ಕಾರ್ಯಪಡೆ ನಿಯೋಗದಿಂದ ಮುಖ್ಯಮಂತ್ರಿಗೆ ಮನವಿ
ಬೆಂಗಳೂರು, ಅ.14: ಗುಟ್ಕಾ ನಿಷೇಧದ ಸುದ್ದಿ ಹರಿದಾಡುತ್ತಿದ್ದು, ಅಡಿಕೆ ಬೆಳೆಗಾರರು ಆತಂಕಗೊಂಡಿದ್ದಾರೆ. ಹೀಗಾಗಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಒದಗಿಸಬೇಕೆಂದು ಅಡಿಕೆ ಕಾರ್ಯಪಡೆ ನಿಯೋಗದ ಸದಸ್ಯರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.
ಬುಧವಾರ ನಗರದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿದ ನಿಯೋಗದ ಸದಸ್ಯರು, ಶಿವಮೊಗ್ಗ ಜಿಲ್ಲೆಯಲ್ಲಿ ಅಡಿಕೆಯನ್ನು ಹೆಚ್ಚಾಗಿ ಗುಟ್ಕಾ ಉತ್ಪನ್ನಕ್ಕೆ ಬಳಸುತ್ತಿದ್ದು, ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟ ಎದುರಿಸುವಂತಾಗುತ್ತದೆ. ಆದ್ದರಿಂದ ಅಡಿಕೆ ಬೆಳಗಾರರ ಹಿತ ಕಾಯುವಂತೆ ಮನವಿ ಮಾಡಿದರು.
ನಿಯೋಗದ ಮನವಿಗೆ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ನಮ್ಮದು ರೈತಪರ ಸರಕಾರ. ಯಾವುದೇ ಕಾರಣಕ್ಕೂ ರೈತರಿಗೆ ಹಾಗೂ ಅಡಿಕೆ ಬೆಳೆಗಾರರ ಹಿತಕ್ಕೆ ಧಕ್ಕೆಯಾಗುವ ನಿರ್ಧಾರವನ್ನು ತೆಗೆದುಕೊಳ್ಳುವುದಿಲ್ಲ. ಹೀಗಾಗಿ ರೈತರು ಆತಂಕಕ್ಕೆ ಒಳಗಾಗುವುದು ಬೇಡವೆಂದು ಭರವಸೆ ನೀಡಿದರು.
ಅಡಿಕೆ ಕಾರ್ಯಪಡೆ ನಿಯೋಗದಲ್ಲಿ ಶಾಸಕ ಹರತಾಳ ಹಾಲಪ್ಪ, ಗೃಹ ಮಂಡಳಿ ಅಧ್ಯಕ್ಷ ಅರಗ ಜ್ಞಾನೇಂದ್ರ, ಹೊನ್ನಾಳಿ ಶಾಸಕ ರೇಣುಕಾಚಾರ್ಯ ಹಾಗೂ ಅಡಿಕೆ ಬೆಳೆಗಾರರ ಸಂಘ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.