ಪ್ರವಾಹ ಪರಿಸ್ಥಿತಿ ನಿಭಾಯಿಸಲು ಸರಕಾರ ಶಕ್ತಿಮೀರಿ ಪ್ರಯತ್ನಿಸುತ್ತಿದೆ: ಯಡಿಯೂರಪ್ಪ
ಬೆಂಗಳೂರು, ಅ. 18: ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಸರಕಾರ ಶಕ್ತಿ ಮೀರಿ ಪ್ರಯತ್ನಿಸುತ್ತಿದ್ದು, ಪ್ರವಾಹ ಸಂತ್ರಸ್ತರಿಗೆ ಯಾವುದೇ ಕಾರಣಕ್ಕೂ ಆತಂಕಕ್ಕೆ ಒಳಗಾಗುವ ಅಗತ್ಯವಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿಲ್ಲಿ ಅಭಯ ನೀಡಿದ್ದಾರೆ.
ರವಿವಾರ ಶಿಕಾರಿಪುರಕ್ಕೆ ತೆರಳುವ ಮುನ್ನ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಸಚಿವರು, ಶಾಸಕರು, ಅಧಿಕಾರಿಗಳು ಈಗಾಗಲೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಸಂಕಷ್ಟಕ್ಕೆ ಸಿಲುಕಿರುವ ಸಂತ್ರಸ್ತರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಲು ಪ್ರಯತ್ನ ನಡೆಸಿದ್ದಾರೆ. ಜನರಿಗೆ ಸ್ಪಂದಿಸುವ ಪ್ರಾಮಾಣಿಕ ಪ್ರಯತ್ನವನ್ನು ಸರಕಾರ ಮಾಡುತ್ತಿದೆ ಎಂದು ಸ್ಪಷ್ಟಪಡಿಸಿದರು.
ಪ್ರವಾಹ ಪರಿಸ್ಥಿತಿಯಿಂದ ಸಂಕಷ್ಟಕ್ಕೆ ಸಿಲುಕಿರುವ ಜನರನ್ನು ಮೊದಲು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಮಾಡಬೇಕು. ಅಗತ್ಯವಿರುವ ಕಡೆಗಳಲ್ಲಿ ಕಾಳಜಿ ಕೇಂದ್ರ ಸ್ಥಾಪನೆ, ಜನರಿಗೆ ಆಹಾರ, ವಸತಿ, ಬಟ್ಟೆ, ಹೊದಿಕೆಗಳನ್ನು ನೀಡುವುದು ನಮ್ಮ ಮೊದಲ ಆದ್ಯತೆಯಾಗಿದೆ. ಅಗತ್ಯವಿರುವ ಎಲ್ಲ ಕಡೆಗಳಲ್ಲಿ ಕಾಳಜಿ ಕೇಂದ್ರಗಳನ್ನು ಸ್ಥಾಪಿಸಲು ಸ್ಥಳೀಯ ಅಧಿಕಾರಿಗಳಿಗೆ ಈಗಾಗಲೇ ನಿರ್ದೇಶನ ನೀಡಲಾಗಿದೆ ಎಂದು ಯಡಿಯೂರಪ್ಪ ತಿಳಿಸಿದರು.
ಸ್ಥಳೀಯ ಅಧಿಕಾರಿಗಳು ಹಗಲು-ರಾತ್ರಿ ಪರಿವೆ ಮರೆತು ಅಹೋರಾತ್ರಿ ಕಾರ್ಯನಿರ್ವಹಿಸುತ್ತಿದ್ದಾರೆ. ಸರಕಾರ ಈ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುತ್ತಿದೆ. ಅಲ್ಲದೆ, ಪ್ರವಾಹ ಪೀಡಿತ ಪ್ರದೇಶಗಳ ಜನತೆ ಅಧಿಕಾರಿಗಳಿಗೆ ಅಗತ್ಯ ಸಹಕಾರ ನೀಡಬೇಕು ಎಂದು ಮನವಿ ಮಾಡಿದ ಯಡಿಯೂರಪ್ಪ, ಸಂತ್ರಸ್ತರ ಪರಿಹಾರ ಕಾರ್ಯಗಳಿಗೆ ಯಾವುದೇ ಹಣಕಾಸಿನ ಸಮಸ್ಯೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಬಾಗಲಕೋಟೆ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಪುತ್ರನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಲು ಸಾಧ್ಯವಾಗಿಲ್ಲ. ಆದರೂ ಅವರು ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಅಗತ್ಯ ಸಲಹೆ-ಸೂಚನೆಗಳನ್ನು ನೀಡುತ್ತಿದ್ದಾರೆ. ಚೆನ್ನೈನ ಆಸ್ಪತ್ರೆಯಲ್ಲಿ ಕಾರಜೋಳರ ಪುತ್ರ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಸಿಎಂ ತಿಳಿಸಿದರು.
ಅ.21ಕ್ಕೆ ಪ್ರವಾಹ ಪೀಡಿತ ಪ್ರದೇಶಗಳ ವೈಮಾನಿಕ ಸಮೀಕ್ಷೆ ನಡೆಸಲಿದ್ದು, ಪರಿಸ್ಥಿತಿಯ ವಾಸ್ತವ ಪರಿಸ್ಥಿತಿ ಅರಿಯಲಿದ್ದೇನೆ. ಆ ಬಳಿಕ ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ವಾಸ್ತವ ನಷ್ಟದ ಮಾಹಿತಿಯನ್ನು ಪಡೆದುಕೊಳ್ಳಲಿದ್ದು, ಆ ಬಳಿಕ ಕೇಂದ್ರಕ್ಕೆ ಮನವಿ ಸಲ್ಲಿಸುವುದು ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಸರಕಾರ ಕ್ರಮ ವಹಿಸಲಿದೆ ಎಂದು ಯಡಿಯೂರಪ್ಪ ಸ್ಪಷ್ಟನೆ ನೀಡಿದರು.