ಪ್ರವಾಹ ಸಂತ್ರಸ್ತರ ನೆರವಿಗೆ ಸರಕಾರ ಬದ್ಧ: ಕಂದಾಯ ಸಚಿವ ಆರ್.ಅಶೋಕ್
ಬೆಳಗಾವಿ, ಅ.19: ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರವಾಹದಿಂದ ಮನೆ ಕಳೆದುಕೊಂಡವರ ಸಮೀಕ್ಷೆ ಪೂರ್ಣಗೊಂಡು ವಸತಿ ನಿಗಮದ ತಂತ್ರಾಂಶದಲ್ಲಿ ದಾಖಲಿಸಲಾಗಿರುವ ಕುಟುಂಬಗಳಿಗೆ ತಕ್ಷಣವೇ ಪರಿಹಾರ ಒದಗಿಸಬೇಕು. ಈಗಾಗಲೇ ಪರಿಹಾರ ಪಡೆದವರು ಮನೆ ನಿರ್ಮಿಸಲು ಕ್ರಮಕೈಗೊಳ್ಳಬೇಕು ಎಂದು ಕಂದಾಯ ಸಚಿವ ಆರ್.ಅಶೋಕ್, ಜಿಲ್ಲಾಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅತಿವೃಷ್ಟಿ ಹಾಗೂ ಪ್ರವಾಹ ನಿರ್ವಹಣೆಗೆ ಸಂಬಂಧಿಸಿದಂತೆ ಕೈಗೊಂಡ ಕ್ರಮಗಳ ಕುರಿತು ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಒಂದು ವೇಳೆ ತಂತ್ರಾಂಶದಲ್ಲಿ ಬೋಗಸ್ ಎಂಟ್ರಿ ಆಗಿರುವುದು ಕಂಡುಬಂದರೆ ರದ್ದುಪಡಿಸಿ, ಉಳಿದ ಎಲ್ಲ ಕೆಟಗರಿ ಮನೆಗಳ ಸಮೀಕ್ಷೆಯನ್ನು ಎರಡು ತಿಂಗಳಲ್ಲಿ ಪೂರ್ಣಗೊಳಿಸಿ ಕೂಡಲೇ ಪರಿಹಾರ ಬಿಡುಗಡೆಗೊಳಿಸಿ, ಮನೆ ನಿರ್ಮಾಣ ಕಾರ್ಯ ಪೂರ್ಣಗೊಳಿಸುವಂತೆ ಅವರು ತಿಳಿಸಿದರು.
ಅತಿವೃಷ್ಟಿ ಹಾಗೂ ಪ್ರವಾಹದಿಂದ ನೊಂದವರಿಗೆ ಎಲ್ಲ ಸೌಲಭ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ಆದರೆ, ಕಳೆದ ಬಾರಿ ಪ್ರವಾಹದಲ್ಲಿ ಉಂಟಾಗಿರುವ ಹಾನಿಯನ್ನು ಇದುವರೆಗೆ ಭರಿಸಿಲ್ಲ ಹಾಗೂ ಮನೆ ನಿರ್ಮಾಣಕ್ಕೆ ಪರಿಹಾರ ನೀಡಿಲ್ಲ ಎಂಬ ದೂರುಗಳು ವ್ಯಾಪಕವಾಗಿ ಕೇಳಿಬರುತ್ತಿವೆ. ಈಗಾಗಲೇ ಸರಕಾರ ಹಣ ಬಿಡುಗಡೆ ಮಾಡಿದ್ದರೂ ಇದುವರೆಗೆ ಎಲ್ಲ ಕುಟುಂಬಗಳಿಗೆ ಪರಿಹಾರ ಯಾಕೆ ತಲುಪಿಲ್ಲ ಎಂದು ಜಿಲ್ಲಾಧಿಕಾರಿಯನ್ನು ಅವರು ಪ್ರಶ್ನಿಸಿದರು.
ಜಿಲ್ಲೆಯಲ್ಲಿ ಹಾನಿಯಾಗಿರುವ ಸುಮಾರು 6000 ಮನೆಗಳ ನಿರ್ಮಾಣಕ್ಕೆ ಪರಿಹಾರ ಬಿಡುಗಡೆ ಮಾಡಿದ್ದರೂ ಇದುವರೆಗೆ ಕೇವಲ 500 ಮನೆಗಳ ನಿರ್ಮಾಣ ಆಗಿರುವ ಬಗ್ಗೆ ಪ್ರಸ್ತಾಪಿಸಿದ ಅಶೋಕ್, ಪರಿಹಾರ ನೀಡಲಾದ ಮನೆಗಳ ನಿರ್ಮಾಣಕ್ಕೆ ಮೊದಲು ಕ್ರಮಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದರು.
ಮನೆ ನಿರ್ಮಿಸಿಕೊಳ್ಳದಿದ್ದರೆ ಅಂತಹವರ ಪರಿಹಾರ ರದ್ದುಗೊಳಿಸಬೇಕು ಹಾಗೂ ಮನೆ ನಿರ್ಮಾಣದಲ್ಲಿ ಪ್ರಗತಿ ಸಾಧಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ಪ್ರತಿವರ್ಷ ಪ್ರವಾಹದಿಂದ ಬಾಧಿತಗೊಳ್ಳುವ ಹಳ್ಳಿಗಳನ್ನು ಸ್ಥಳಾಂತರಿಸಲು ಅವಕಾಶಗಳಿವೆ. ಆದರೆ ಈಗಾಗಲೆ ನಿರ್ಮಿಸಿ ಕೊಟ್ಟಿರುವ ಮನೆಗಳಿಗೆ ಜನ ಹೊಗದೇ, ಮೊದಲು ಇದ್ದ ಮನೆಗಳಲ್ಲೇ ವಾಸಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಬೆಳೆ ಪರಿಹಾರದ ಸಮಿಕ್ಷೇಯನ್ನು ಆದಷ್ಟು ಬೇಗ ಮುಗಿಸಿ ಪರಿಹಾರ ನೀಡಬೇಕು. ಜಿಲ್ಲಾಡಳಿತ ಪ್ರವಾಹ ನಿರ್ವಹಣೆಗೆ ಮುಂಜಾಗೃತ ಕ್ರಮ ಕೈಗೊಳಬೇಕು. ಆ ಸಂದರ್ಭದಲ್ಲಿ ಅಧಿಕಾರಿಗಳು ರಜೆ ಹಾಕದೇ ಕರ್ತವ್ಯಕ್ಕೆ ಹಾಜರಾಗಬೇಕು. ಪ್ರವಾಹ ನಿರ್ವಹಣೆ ಅನುದಾನ ದುರುಪಯೋಗ ಆಗಬಾರದು ಎಂದು ಅಶೋಕ್ ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಮಾತನಾಡಿ, ಜಿಲ್ಲೆಯಲ್ಲಿ ಮಳೆಯಿಂದ ಕಬ್ಬು ಬೆಳೆ ಹಾನಿ ಆಗಿದೆ. ಹಾಗಾಗಿ ಸಕ್ಕರೆ ಕಾರ್ಖಾನೆಯವರ ಜತೆ ಸಭೆ ಮಾಡಿ ಕಬ್ಬು ಕಟಾವು ಪ್ರಾರಂಭಿಸಬೇಕು ಎಂದು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಮಹಾರಾಷ್ಟ್ರದ ಜಲಾಶಯದಿಂದ ನೀರು ಬಿಡುಗಡೆ ಮಾಡಿರುವ ಬಗ್ಗೆ ಹಾಗೂ ಪ್ರಸ್ತುತ ಕೃಷ್ಣಾ, ಘಟಪ್ರಭಾ ಹಾಗೂ ಮಲಪ್ರಭಾ ನದಿಗಳ ನೀರಿನ ಸ್ಥಿತಿಗತಿ ಬಗ್ಗೆ ರಮೇಶ್ ಜಾರಕಿಹೊಳಿ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಕಳೆದ ವರ್ಷದಿಂದ ಎದುರಾಗಿರುವ ಅತಿವೃಷ್ಟಿ ಮತ್ತು ಪರಿಹಾರದ ಕುರಿತು ಮಾಹಿತಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಆಗಸ್ಟ್ ನಲ್ಲಿ ಶೇ.139 ರಷ್ಟು ಅಧಿಕ ಮಳೆಯಿಂದ ಪ್ರವಾಹ ಸ್ಥಿತಿ ಎದುರಾಗಿತ್ತು. ಸದ್ಯಕ್ಕೆ ಪ್ರವಾಹ ಸ್ಥಿತಿಯಿಲ್ಲ ಎಂದು ತಿಳಿಸಿದರು.
ಹುಕ್ಕೇರಿಯಲ್ಲಿ ಮಾತ್ರ ಅತಿವೃಷ್ಟಿಯಿಂದ ಒಬ್ಬ ವ್ಯಕ್ತಿ ಪ್ರಾಣ ಕಳೆದುಕೊಂಡಿದ್ಧಾರೆ. ಜಿಲ್ಲೆಯಲ್ಲಿ ಒಟ್ಟಾರೆ 4619 ಮನೆಗಳಿಗೆ ಹಾನಿ ಯಾಗಿದ್ದು, ಸದ್ಯಕ್ಕೆ ಕಾಳಜಿ ಕೇಂದ್ರಗಳು ಕಾರ್ಯನಿರ್ವಹಿಸುತ್ತಿಲ್ಲ. 14 ಸಾವಿರ ರೈತರಿಗೆ 6.40 ಕೋಟಿ ರೂ.ಬೆಳೆ ಪರಿಹಾರ ಪಾವತಿಸಲಾಗಿದ್ದು, ಉಳಿದವರಿಗೆ ಶೀಘ್ರ ಪಾವತಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
1.66 ಲಕ್ಷ ಹೆಕ್ಟೇರ್ ಬೆಳೆಹಾನಿಯಾಗಿದ್ದು, ಜಂಟಿ ಸಮೀಕ್ಷೆ ನಡೆದಿದ್ದು, ಇದಾದ ಬಳಿಕ ಹಾನಿಯ ಸಮಗ್ರ ವರದಿಯನ್ನು ಸಲ್ಲಿಸಲಾಗುವುದು. ಹತ್ತು ದಿನಗಳಲ್ಲಿ ಪರಿಹಾರ ವಿತರಣಾ ಕಾರ್ಯ ಪೂರ್ಣಗೊಳಿಸಲಾಗುವುದು ಎಂದು ಹಿರೇಮಠ ತಿಳಿಸಿದರು.
ಜಿಲ್ಲೆಯಲ್ಲಿ ಕಳೆದ ವರ್ಷ ಮನೆ ಕಳೆದುಕೊಂಡಿರುವ ಎ, ಬಿ ಮತ್ತು ಸಿ ಕೆಟಗರಿಯ ಕುಟುಂಬಗಳಿಗೆ ಒಟ್ಟು 488 ಕೋಟಿ ರೂ. ಪರಿಹಾರ ವಿತರಣೆ ಮಾಡಲಾಗಿದೆ. ಮಳೆ ಹಾಗೂ ಕೊರೋನ ಹಿನ್ನೆಲೆಯಲ್ಲಿ ಪರಿಹಾರ ವಿತರಣೆ ವಿಳಂಬವಾಗಿದೆ. ಪಟ್ಟಿಯಿಂದ ಬಿಟ್ಟು ಹೋಗಿರುವ ಮನೆಗಳನ್ನು ಮರು ಸಮೀಕ್ಷೆ ಕೈಗೊಂಡು ಪುನಃ ವಸತಿ ನಿಗಮಕ್ಕೆ ಕಳುಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.
ಸಭೆಯಲ್ಲಿ ವಿಧಾನಸಭೆ ಉಪ ಸಭಾಪತಿ ಆನಂದ ಮಾಮನಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಪಿ.ರಾಜೀವ್, ಶಾಸಕರಾದ ದುರ್ಯೋಧನ ಐಹೊಳೆ, ಅನಿಲ್ ಬೆನಕೆ, ಅಭಯ್ ಪಾಟೀಲ್, ಜಿ.ಪಂ.ಅಧ್ಯಕ್ಷೆ ಆಶಾ ಐಹೊಳೆ, ಬುಡಾ ಅಧ್ಯಕ್ಷ ಘೂಳಪ್ಪ ಹೊಸಮನಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅಧ್ಯಕ್ಷ ಮುಖ್ತಾರ್ ಪಠಾಣ, ಜಿ.ಪಂ.ಸಿಇಒ ದರ್ಶನ್ ಎಚ್.ವಿ.ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.