ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟವಿದೆ: ಡಿಸಿಎಂ ಡಾ.ಅಶ್ವತ್ಥನಾರಾಯಣ
ಮೈಸೂರು,ಅ.19: ಸರ್ಕಾರಕ್ಕೆ ನಿರೀಕ್ಷಿತ ಪ್ರಮಾಣದಲ್ಲಿ ಆದಾಯ ಬರುತ್ತಿಲ್ಲ. ಹೀಗಾಗಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟವಿದೆ ಎಂದು ಉಪಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ ಹೇಳಿದರು.
ಮೈಸೂರು ವಿವಿ ಘಟಿಕೋತ್ಸವದಲ್ಲಿ ಭಾಗವಹಿಸಿದ ನಂತರ ಸೋಮವಾರ ಮಾಧ್ಯಮದವರೊಂದಿಗೆ ಮಾನಾಡಿದ ಅವರು, ಕಳೆದ ವರ್ಷ ಪ್ರವಾಹ ಆಗಿತ್ತು. ಕೋವಿಡ್ ನಿಂದ ಎಷ್ಟೆಲ್ಲಾ ತೊಂದರೆಯಾಗಿದೆ ಅನ್ನೊದು ಗೊತ್ತಿದೆ. ಸರ್ಕಾರಕ್ಕೆ ನಿರೀಕ್ಷಿತ ಪ್ರಮಾಣಕ್ಕೆ ಆದಾಯ ಬರುತ್ತಿಲ್ಲ. ಹೀಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಆರ್ಥಿಕ ಸಂಕಷ್ಟ ಎದುರಾಗಿದೆ ಎಂದು ಹೇಳಿದರು.
ಹೀಗಾಗಿಯೂ, ಎಲ್ಲಾ ಸಮಸ್ಯೆಗಳನ್ನು ಜನಕ್ಕೆ ತೊಂದರೆಯಾಗದ ರೀತಿಯಲ್ಲಿ ನಿಭಾಯಿಸುತ್ತಿದ್ದೇವೆ. ಎನ್ ಡಿಆರ್ ಎಫ್ ನಿಯಮಗಳ ಪ್ರಕಾರ ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಪರಿಹಾರ ವಿತರಣೆ ಆಗುತ್ತಿದೆ ಎಂದರು.
ಯಾವ ಸಂತ್ರಸ್ತರಿಗೂ ಪರಿಹಾರ ಸಿಕ್ಕಿಲ್ಲ ಎಂದು ಹೇಳುವಂತಿಲ್ಲ. ಕೆಲ ಸಚಿವರು ವೈಯಕ್ತಿಕ ಸಮಸ್ಯೆಗಳಿಂದಾಗಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ಕೊಟ್ಟಿಲ್ಲ. ಆದರೆ, ಸರ್ಕಾರ ಈ ನಿಟ್ಟಿನಲ್ಲಿ ಜಾಗರೂಕತೆಯಿಂದ ಕೆಲಸ ಮಾಡುತ್ತಿದೆ ಎಂದು ತಿಳಿಸಿದರು.