ನೆರೆ ಸಂತ್ರಸ್ತರಿಗೆ ಸರಕಾರದಿಂದ ನೆರವು: ಡಿಸಿಎಂ ಅಶ್ವತ್ಥನಾರಾಯಣ
ಬೆಳಗಾವಿ, ಅ.24: ಬೆಂಗಳೂರಿನಲ್ಲಿ ಮಳೆ ಅವಾಂತರ ಸೃಷ್ಟಿಸಿದ್ದು, ಸಂತ್ರಸ್ತರಿಗೆ ರಾಜ್ಯ ಸರಕಾರ ನೆರವಾಗಲಿದೆ ಎಂದು ಡಿಸಿಎಂ ಅಶ್ವತ್ಥ ನಾರಾಯಣ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಭಾರೀ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಜನರಿಗೆ ತ್ವರಿತಗತಿಯಲ್ಲಿ ಸೂಕ್ತ ವ್ಯವಸ್ಥೆ ಮಾಡಿಕೊಡಲಾಗುವುದು. ಸಂತ್ರಸ್ತರಿಗೆ ಪುನರ್ವಸತಿ ಕಲ್ಪಿಸುವ ವ್ಯವಸ್ಥೆ ನಡೀತಿದೆ. ಎನ್.ಡಿ.ಆರ್.ಎಫ್ ಹಾಗೂ ರಾಜ್ಯ ಸರಕಾರದ ಗೈಡ್ ಲೈನ್ಸ್ ಮೂಲಕ ಸಂತ್ರಸ್ತರಿಗೆ ನೆರವು ನೀಡಲಾಗುವುದು ಎಂದರು.
ಬಿಬಿಎಂಪಿಯು ಸಾಕಷ್ಟು ಕೆಲಸ ಮಾಡಿದೆ. ಆದರೆ ಅಷ್ಟು ಕೆಲಸ ಸಾಲಲ್ಲ, ಇನ್ನೂ ಹೆಚ್ಚಿನ ಕೆಲಸ ಆಗಬೇಕಿದೆ. ನಗರ ಪ್ರದೇಶಗಳಲ್ಲಿ ಬಯಲು ಪ್ರದೇಶ ಇರಲ್ಲ. ಕಟ್ಟಡ ನಿರ್ಮಾಣವಾಗಿರುತ್ತವೆ. ಹೀಗಾಗಿ ಮಳೆ ಬಂದಾಗ ಪ್ರವಾಹ ಪರಿಸ್ಥಿತಿ ಎದುರಾಗುತ್ತದೆ ಎಂದರು.
ರಾಜಕಾಲುವೆ, ಕೆರೆ ಅಕ್ಕಪಕ್ಕದಲ್ಲಿ ಸಮಸ್ಯೆಗಳಿವೆ. ಸಮಸ್ಯೆ ಬಗೆಹರಿಸಲು ಬಿಬಿಎಂಪಿ ಇನ್ನಷ್ಟು ಕಾರ್ಯಪ್ರವೃತ್ತವಾಗಬೇಕು. ಮಳೆ ನೀರನ್ನು ಅಲ್ಲಲ್ಲಿ ತಡೆಗಟ್ಟಲು ಕ್ರಮ ವಹಿಸಬೇಕು. ಶೇಖರಣೆಗೂ ಅವಕಾಶ ಕಲ್ಪಿಸಬೇಕು. ಈ ನಿಟ್ಟಿನಲ್ಲಿ ಪ್ರಯತ್ನಗಳು ಸರಕಾರದಿಂದ ಆಗಿವೆ. ಮುಂದಿನ ದಿನಗಳಲ್ಲಿ ಶಾಶ್ವತ ಪರಿಹಾರ ಕಲ್ಪಿಸಲಾಗುವುದು ಎಂದರು.