ಡಿಜೆ-ಕೆಜಿ ಹಳ್ಳಿ ಗಲಭೆ ಪ್ರಕರಣ: ಸಂಪತ್ ರಾಜ್ ಜಾಮೀನು ಅರ್ಜಿಗೆ ಆಕ್ಷೇಪಣೆ
ಬೆಂಗಳೂರು, ಅ.24: ಡಿಜೆ-ಕೆಜಿಹಳ್ಳಿ ಗಲಭೆ ಪ್ರಕರಣ ಸಂಬಂಧ ಬಿಬಿಎಂಪಿ ಮಾಜಿ ಮೇಯರ್ ಸಂಪತ್ ರಾಜ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿರುವ ಅರ್ಜಿಗೆ ಸಿಸಿಬಿ ಪೊಲೀಸರು ಆಕ್ಷೇಪಣೆ ಅರ್ಜಿ ಸಲ್ಲಿಕೆ ಮಾಡಿರುವುದಾಗಿ ವರದಿಯಾಗಿದೆ.
ತಮ್ಮನ್ನು ತನಿಖಾಧಿಕಾರಿಗಳು ಬಂಧಿಸದಂತೆ ನಿರೀಕ್ಷಣಾ ಜಾಮೀನು ಕೋರಿ ಸಂಪತ್ ರಾಜ್ ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಗೆ ಸಿಸಿಬಿ ಆಕ್ಷೇಪಣೆ ಅರ್ಜಿ ಸಲ್ಲಿಸಿ, ನಿರೀಕ್ಷಣಾ ಜಾಮೀನು ನೀಡಬಾರದು ಎಂದು ನ್ಯಾಯಾಲಯಕ್ಕೆ ಮನವಿ ಮಾಡಿದೆ.
ಪುಲಿಕೇಶಿನಗರ ಕ್ಷೇತ್ರದ ಶಾಸಕ ಅಖಂಡ ಶ್ರೀನಿವಾಸ್ ಮನೆಗೆ ಬೆಂಕಿ ಹಚ್ಚಲು ಕುಮ್ಮಕ್ಕು ನೀಡಿರುವುದಕ್ಕೆ ಪ್ರಾಥಮಿಕ ವಿಚಾರಣೆಯಿಂದ ಸಾಕ್ಷ್ಯ ಲಭ್ಯವಾಗಿದೆ.ಅಷ್ಟೇ ಅಲ್ಲದೆ, ಇಬ್ಬರು ಆರೋಪಿಗಳೊಂದಿಗೆ ಸಂಪತ್ ರಾಜ್ ಸಂಪರ್ಕ ಹೊಂದಿದ್ದು, ಹಲವು ದಿನಗಳಿಂದ ತನಿಖೆಗೆ ಸಹಕರಿಸದೆ, ತಲೆ ಮರೆಸಿಕೊಂಡಿದ್ದಾರೆ. ಹೀಗಾಗಿ ಜಾಮೀನು ನೀಡಬಾರದೆಂದು ಸಿಸಿಬಿ ಪರ ವಕೀಲರು ಮನವಿ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ.
Next Story