ನಾಡಿನ ಜನತೆಗೆ ವಿಜಯದಶಮಿ ಶುಭಾಶಯ ಕೋರಿದ ಮುಖ್ಯಮಂತ್ರಿ ಯಡಿಯೂರಪ್ಪ
ಮೈಸೂರು, ಅ.26: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಾಡಿನ ಜನತೆಗೆ ವಿಜಯದಶಮಿ ಶುಭಾಶಯಗಳನ್ನು ಕೋರಿದ್ದಾರೆ.
ವಿಶ್ವವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಉದ್ಘಾಟನೆಗೆಂದು ಸೋಮವಾರ ಲಲಿತ್ ಮಹಲ್ ಹೆಲಿಪ್ಯಾಡ್ ಗೆ ಆಗಮಿಸಿದ ಮುಖ್ಯಮಂತ್ರಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಕೊರೋನ ಕಾರಣದಿಂದ ಈ ಬಾರಿ ಸರಳ ದಸರಾ ಆಚರಣೆ ಮಾಡಲಾಗುತ್ತಿದೆ. ಕೊರೋನ ಎಲ್ಲಾ ಸಂಪೂರ್ಣವಾಗಿ ನಿಯಂತ್ರಣಕ್ಕೆ ಬಂದ ಮೇಲೆ ಮುಂದಿನ ವರ್ಷ ವಿಜೃಂಭಣೆಯಿಂದ ದಸರಾ ಆಚರಣೆ ಮಾಡಲಾಗುವುದು ಎಂದರು.
ಶ್ರೀಚಾಮುಂಡೇಶ್ವರಿ ಜನರ ಎಲ್ಲಾ ಸಂಕಷ್ಟಗಳನ್ನು ದೂರ ಮಾಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿ ಹೇಳಿದರು.
ಮುಖ್ಯಮಂತ್ರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್, ಶಾಸಕ ರಾಮದಾಸ್ , ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸ್ವಾಗತಿಸಿದರು.
Next Story