ದ್ವೇಷ ಬಿತ್ತುವ ಸಂಘ ಸಂಸ್ಥೆಗಳಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಿದ್ದು ಸರಿಯಲ್ಲ: ಎಸ್ಡಿಪಿಐ
ಬೆಂಗಳೂರು, ಅ.30: ಕನ್ನಡ ನಾಡು ನುಡಿಗೆ ಶ್ರಮಿಸಿದವರಿಗೆ ರಾಜ್ಯ ಸರಕಾರದ ನೀಡುವ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯನ್ನು ಬಿಜೆಪಿ ಸರಕಾರ ಸಮಾಜದಲ್ಲಿ ದ್ವೇಷ ಬಿತ್ತುವ, ಅಶಾಂತಿಗೆ ಕಾರಣವಾಗಿರುವ ಸಂಘ ಸಂಸ್ಥೆಗಳಿಗೆ ನೀಡುವ ಮೂಲಕ ಪ್ರಶಸ್ತಿಯ ಗೌರವವನ್ನು ಮಣ್ಣುಪಾಲು ಮಾಡಿದೆ ಎಂದು ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ರಾಜ್ಯಾಧ್ಯಕ್ಷ ಅಬ್ದುಲ್ ಹನ್ನಾನ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಸಂಬಂಧ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, 2020ನೇ ಸಾಲಿನ ರಾಜ್ಯೋತ್ಸವ ಪ್ರಶಸ್ತಿಯನ್ನು ಸರಕಾರ ಪ್ರಕಟಿಸಿದ್ದು, ಪ್ರಶಸ್ತಿಗೆ ಆಯ್ಕೆಯಾದವರಲ್ಲಿ ಬಿಜೆಪಿ ಮತ್ತು ಸಂಘಪರಿವಾರದೊಂದಿಗೆ ಪ್ರತ್ಯಕ್ಷ ಮತ್ತು ಪರೋಕ್ಷವಾಗಿ ಸಂಪರ್ಕ ಹೊಂದಿರುವವರೇ ಹೆಚ್ಚಾಗಿದ್ದಾರೆ. ಯುವ ಬ್ರಿಗೇಡ್, ಧರ್ಮೋತ್ಥಾನ ಟ್ರಸ್ಟ್ ಮುಂತಾದ ಸಂಘಟನೆಗಳು ಆರೆಸ್ಸೆಸ್ ಅಂಗಸಂಸ್ಥೆಗಳಾಗಿವೆ.
ಸಮಾಜದಲ್ಲಿ ಒಡಕು ಮೂಡಿಸುವ ಮತ್ತು ದ್ವೇಷ ಬಿತ್ತುವ ಕೃತ್ಯಗಳಲ್ಲಿ ತೊಡಗಿರುವುದು ಗುಟ್ಟಾಗಿ ಏನೂ ಉಳಿದಿಲ್ಲ. ಈ ಸಂಘಟನೆಗಳ ಸದಸ್ಯರ ವಿರುದ್ಧ ಗಂಭೀರ ಅಪರಾಧ ಪ್ರಕರಣಗಳು ಕೂಡ ದಾಖಲಾಗಿವೆ. ಇಂತಹ ಸಂಸ್ಥೆಗಳಿಗೆ ನಾಡಿನ ಹೆಮ್ಮೆಯ ರಾಜ್ಯೋತ್ಸವ ಪ್ರಶಸ್ತಿ ನೀಡುವ ಮೂಲಕ ರಾಜ್ಯ ಸರಕಾರ ಯಾವ ಸಂದೇಶ ನೀಡಲು ಹೊರಟಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ಚುನಾಯಿತ ಸರಕಾರವೊಂದು ಸಮಾಜ ಸೇವೆ ಸಲ್ಲಿಸಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ಇಂತಹ ಪ್ರಶಸ್ತಿ ನೀಡದೆ ತಮಗೆ ಬೇಕಾದವರಿಗೆ ಅಥವಾ ತನ್ನ ಬೆಂಬಲಿಗರಿಗೆ ಪ್ರಶಸ್ತಿ ನೀಡುತ್ತಾ ಹೋದರೆ ಮುಂದಿನ ದಿನಗಳಲ್ಲಿ ಸರಕಾರ ನೀಡುವ ಪ್ರಶಸ್ತಿಗಳಿಗೆ ಯಾವುದೇ ಗೌರವ ಇಲ್ಲವಾಗಬಹುದು. ಪ್ರಶಸ್ತಿ ಆಯ್ಕೆ ಸಮಿತಿ ಯಾವ ಮಾನದಂಡದ ಆಧಾರದ ಮೇಲೆ ಇಂತಹ ಸಂಸ್ಥೆಗಳಿಗೆ ಪ್ರಶಸ್ತಿ ನೀಡಲು ಶಿಫಾರಸು ಮಾಡಿದೆ ಎಂಬುದನ್ನು ಕನ್ನಡಿಗರಿಗೆ ವಿವರಿಸಬೇಕಾಗಿದೆ ಎಂದು ಅವರು ಪ್ರಶ್ನಿಸಿದ್ದಾರೆ.
ಪ್ರಜ್ಞಾವಂತ ಕನ್ನಡಿಗರು ನಾಡಿನ ಹೆಮ್ಮೆಯ ಹಾಗೂ ಪ್ರತಿಷ್ಠಿತ ರಾಜ್ಯೋತ್ಸವ ಪ್ರಶಸ್ತಿಯ ಗೌರವ ಕಾಪಾಡುವ ನಿಟ್ಟಿನಲ್ಲಿ ಧ್ವನಿ ಎತ್ತ ಬೇಕು. ರಾಜ್ಯೋತ್ಸವ ಪ್ರಶಸ್ತಿ ಪಟ್ಟಿಯನ್ನು ಪರಿಷ್ಕರಿಸಿ, ಅರ್ಹ ಸಾಧಕರಿಗೆ ಪ್ರಶಸ್ತಿ ಪ್ರಕಟಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.