ನ.10ರಂದು ಕನ್ನಡ ವಿವಿ ನುಡಿಹಬ್ಬ: ಇಬ್ಬರಿಗೆ ನಾಡೋಜ ಪದವಿ ಪ್ರದಾನ
ಬಳ್ಳಾರಿ, ನ. 2: ಹಂಪಿ ಕನ್ನಡ ವಿಶ್ವ ವಿದ್ಯಾಲಯದ 28ನ ನುಡಿಹಬ್ಬ-ಘಟಿಕೋತ್ಸವ ನ.10ರ ಮಂಗಳವಾರ ಬೆಳಗ್ಗೆ 11 ಗಂಟೆಗೆ ವಿವಿಯ ಮಂಟಪ ಸಭಾಂಗಣದಲ್ಲಿ ಜರುಗಲಿದೆ.
ವಿವಿ ಕುಲಾಧಿಪತಿಗಳೂ ಆಗಿರುವ ರಾಜ್ಯದ ರಾಜ್ಯಪಾಲರಾದ ವಝುಭಾಯಿ ರೂಡಾಭಾಯಿ ವಾಲಾ ಅವರು ಘಟಿಕೋತ್ಸವದ ಅಧ್ಯಕ್ಷತೆಯನ್ನು ವಹಿಸುತ್ತಾರೆ. ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ ಡಾ.ಹಣಮಂತ ಗೋವಿಂದಪ್ಪ ದಡ್ಡಿ ಮತ್ತು ಶಿಕ್ಷಣ ತಜ್ಞ ಡಾ.ವೂಡೇ ಪಿ.ಕೃಷ್ಣ ಇವರಿಗೆ ರಾಜ್ಯಪಾಲರು ಪ್ರಸಕ್ತ ಸಾಲಿನ `ನಾಡೋಜ ಗೌರವ ಪದವಿ ಪ್ರದಾನ ಮಾಡುತ್ತಾರೆ.
ರಾಜ್ಯದ ಉನ್ನತ ಶಿಕ್ಷಣ ಸಚಿವರೂ ಸಮಕುಲಾಧಿಪತಿಗಳೂ ಆಗಿರುವ ಡಾ.ಸಿ.ಎನ್.ಅಶ್ವಥ್ ನಾರಾಯಣ ಅವರು ಡಿ.ಲಿಟ್. ಹಾಗೂ ಪಿಎಚ್.ಡಿ. ಪದವಿಗಳನ್ನು ಪ್ರದಾನ ಮಾಡುತ್ತಾರೆ.
ರಾಷ್ಟ್ರೀಯ ಮೌಲ್ಯಂಕನ ಮತ್ತು ಮಾನ್ಯತಾ ಪರಿಷತ್ತಿನ ನಿರ್ದೇಶಕರು ಮತ್ತು ವಿಶ್ರಾಂತ ಕುಲಪತಿ ಪ್ರೊ.ಎಸ್.ಸಿ.ಶರ್ಮಾ ಅವರು ಘಟಿಕೋತ್ಸವ ಭಾಷಣ ಮಾಡುತ್ತಾರೆ.
ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಸ.ಚಿ.ರಮೇಶ ಅವರು ಸ್ವಾಗತ ಭಾಷಣ ಮಾಡುತ್ತಾರೆ ಎಂದು ಕನ್ನಡ ವಿಶ್ವವಿದ್ಯಾಲಯದ ಮಾನ್ಯ ಕುಲಸಚಿವರಾದ ಡಾ.ಎ.ಸುಬ್ಬಣ್ಣ ರೈ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.