ಕೊರೋನದಿಂದ ಸಿನಿಮೋದ್ಯಮಕ್ಕೆ ತುಂಬಲಾರದ ನಷ್ಟ: ನಾಗತಿಹಳ್ಳಿ ಚಂದ್ರಶೇಖರ್
ಕಲಬುರಗಿ, ನ.14: ಕೊರೋನ ತಂದೊಡ್ಡಿದ ಸಂಕಷ್ಟ ಸಿನಿಮಾ ಉದ್ಯಮದ ಮೇಲೆ ತೀವ್ರ ಪರಿಣಾಮ ಬೀರಿದೆ ಎಂದು ಹಿರಿಯ ಸಾಹಿತಿ, ಚಲನಚಿತ್ರ ನಿರ್ದೇಶಕ ನಾಗತಿಹಳ್ಳಿ ಚಂದ್ರಶೇಖರ್ ಕಳವಳ ವ್ಯಕ್ತಪಡಿಸಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೋನದಿಂದಾಗಿ ಚಿತ್ರಮಂದಿರಗಳನ್ನು ಮುಚ್ಚಲಾಯಿತು, ಚಿತ್ರೀಕರಣವನ್ನೂ ಸ್ಥಗಿತಗೊಳಿಸಲಾಯಿತು. ಇದರಿಂದಾಗಿ ಸಿನಿಮಾ ಉದ್ಯಮಕ್ಕೆ ತುಂಬಲಾರದ ನಷ್ಟವಾಗಿದೆ. ಅದೆಲ್ಲಕ್ಕಿಂತಲೂ ಮುಖ್ಯವಾಗಿ ಕೆಳ ಹಂತದಲ್ಲಿ ಕೆಲಸ ಮಾಡುವ ಕಾರ್ಮಿಕರ ಬದುಕು ದುಸ್ತರವಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.
ಸರಕಾರ ಚಲನಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡಿದ್ದರೂ ಸಹ ಚಿತ್ರಮಂದಿರದ ಕಡೆ ಪ್ರೇಕ್ಷಕರು ಬರಲು ಹಿಂದೇಟು ಹಾಕುತ್ತಿದ್ದಾರೆ. ಸರಕಾರ ಶೇ.50ರಷ್ಟು ಆಸನಗಳನ್ನು ಭರ್ತಿ ಮಾಡಲು ಅವಕಾಶ ಮಾಡಿಕೊಟ್ಟಿದೆ. ಆದರೆ ಶೇ.4ರಿಂದ 5ರಷ್ಟು ಪ್ರಮಾಣದಲ್ಲಿ ಮಾತ್ರ ಪ್ರೇಕ್ಷಕರು ಬರುತ್ತಿರುವುದು ಚಿತ್ರಮಂದಿರಗಳಿಗೂ ತುಂಬಲಾರದ ನಷ್ಟವಾಗಿದೆ ಎಂದರು.
Next Story