ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಳ: ಸಿದ್ದರಾಮಯ್ಯ
ಬೆಂಗಳೂರು, ನ. 21: ಬೀದರ್ ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮರಾಠರನ್ನು ಓಲೈಸಲು ರಾಜ್ಯ ಸರಕಾರ ಕ್ಷುಲ್ಲಕ ರಾಜಕೀಯ ನಡೆಸುತ್ತಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಆರೋಪಿಸಿದ್ದಾರೆ.
ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಮರಾಠಾ ಅಭಿವೃದ್ದಿ ನಿಗಮ ಸ್ಥಾಪನೆಯನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಡಿಸೆಂಬರ್ 5ರಂದು ನಡೆಸಲಿರುವ ಕರ್ನಾಟಕ ಬಂದ್ನಲ್ಲಿ ಪಾಲ್ಗೊಳ್ಳುವ ಬಗ್ಗೆ ಕಾಂಗ್ರೆಸ್ ಪಕ್ಷದಲ್ಲಿ ಚರ್ಚಿಸಿ ತೀರ್ಮಾನಿಸುತ್ತೇವೆ ಎಂದು ಸ್ಪಷ್ಟನೆ ನೀಡಿದರು.
ಬೆಳಗಾವಿ ಕರ್ನಾಟಕದ ಅಖಂಡ ಭಾಗ, ಇದನ್ನು ಮಹಾಜನ ವರದಿಯೇ ಸ್ಪಷ್ಟಪಡಿಸಿದೆ. ಇದರಲ್ಲಿ ರಾಜಿಯೇ ಇಲ್ಲ. ನೆಲ-ಜಲ-ಭಾಷೆಯ ರಕ್ಷಣೆ ಬಗ್ಗೆ ಕಾಂಗ್ರೆಸ್ ಬದ್ಧವಾಗಿದೆ. ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ಅಧಿಕ ಪ್ರಸಂಗತನದ ಹೇಳಿಕೆ ಖಂಡನೀಯ ಎಂದು ಸಿದ್ದರಾಮಯ್ಯ ತಿಳಿಸಿದರು.
ಮಾಜಿ ಸಂಸದ ಪ್ರಕಾಶ್ ಹುಕ್ಕೇರಿಯವರ ಅಸಮಾಧಾನದ ಬಗ್ಗೆ ನನಗೆ ತಿಳಿದಿಲ್ಲ, ಅವರು ನನ್ನ ಜೊತೆಯಲ್ಲಿ ಏನನ್ನೂ ಹೇಳಿಲ್ಲ. ಈ ಅಸಮಾಧಾನದ ಸುದ್ದಿಗಳೆಲ್ಲ ಹುಕ್ಕೇರಿಯವರ ಹೆಸರಿನಲ್ಲಿ ಬಿಜೆಪಿ ನಾಯಕರು ನಡೆಸುತ್ತಿರುವ ಸುಳ್ಳು ಪ್ರಚಾರ ಇದ್ದಿರಲೂಬಹುದು. ಅದನ್ನು ತಿಳಿದುಕೊಳ್ತೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.
ಅವರೇ ಅಭ್ಯರ್ಥಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಬಸನಗೌಡ ತುರ್ವಿಹಾಳ್ ನಾಳೆ(ನ.22) ಕಾಂಗ್ರೆಸ್ ಸೇರಲಿದ್ದಾರೆ. ಉಪಚುನಾವಣೆಯಲ್ಲಿ ಅವರೇ ನಮ್ಮ ಅಭ್ಯರ್ಥಿಯಾಗಬಹುದು. ನಾವು ನಾಳೆ ಮಸ್ಕಿಯಲ್ಲಿ ಸ್ಥಳೀಯ ಕಾಂಗ್ರೆಸ್ ನಾಯಕರು-ಕಾರ್ಯಕರ್ತರ ಜೊತೆ ಸಮಾಲೋಚನೆ ನಡೆಸಿ ತೀರ್ಮಾನಿಸುತ್ತೇವೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ನಮ್ಮ ನಿಲುವು ಸ್ಪಷ್ಟ: ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ನಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆಯಿಲ್ಲ. ಹಿಂದಿನ ಬಿಜೆಪಿ ಸರಕಾರ 1964ರ ಜಾನುವಾರು ಹತ್ಯೆ ನಿಷೇಧ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ನಮ್ಮ ಸರಕಾರ ರದ್ದುಗೊಳಿಸಿ ಮೂಲ ಕಾಯ್ದೆಯನ್ನು ಉಳಿಸಿಕೊಂಡಿದೆ. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ ಎಂದು ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಬಿಜೆಪಿ ದ್ವಂದ್ವ: ಗೋಹತ್ಯೆಯ ಬಗ್ಗೆ ಬಿಜೆಪಿ ನಾಯಕರದ್ದು ದಂದ್ವ ನಿಲುವು. ಪ್ರಧಾನಿ ನರೇಂದ್ರ ಮೋದಿ ಅಧಿಕಾರಕ್ಕೆ ಬಂದ ನಂತರ ಗೋಮಾಂಸ ರಫ್ತು ಹಲವು ಪಟ್ಟು ಹೆಚ್ಚಾಗಿದೆ. ಅತೀ ಹೆಚ್ಚು ಗೋಮಾಂಸ ರಫ್ತು ನಡೆಯುತ್ತಿರುವುದು ಉತ್ತರಪ್ರದೇಶದಲ್ಲಿ. ಹೆಚ್ಚಿನ ಗೋಮಾಂಸ ವ್ಯಾಪಾರಿಗಳು ಬಿಜೆಪಿಗೆ ಸೇರಿದವರು ಎಂದು ಸಿದ್ದರಾಮಯ್ಯ ವಾಗ್ದಾಳಿ ನಡೆಸಿದರು.
ಸಮಾನತೆ ವಿರೋಧಿ: ಬಿಜೆಪಿ ಮತ್ತು ಆರೆಸ್ಸೆಸ್ ಮೂಲಭೂತವಾಗಿ ಸಂವಿಧಾನ ವಿರೋಧಿ. ಅದು ಮೀಸಲಾತಿ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎಲ್ಲವನ್ನೂ ವಿರೋಧಿಸುತ್ತದೆ. ಅವರು ಮಿಲ್ಲರ್ ವರದಿಯಿಂದ ಮಂಡಲ್ ವರದಿ ವರೆಗೆ ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರು, ಮನುಸ್ಮೃತಿಗೆ ಬದ್ಧರಾಗಿರುವವರು ಎಂದು ಸಿದ್ದರಾಮಯ್ಯ ಟೀಕಿಸಿದರು.
ಗೂಂಡಾ ರಾಜ್ಯ ನಮಗೆ ಮಾದರಿಯಲ್ಲ: ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಂತರಧರ್ಮೀಯ ಮದುವೆ ಅಕ್ರಮ ಎಂದು ಹೇಳಿಲ್ಲ. ಆ ತೀರ್ಪನ್ನು ಉಲ್ಲೇಖಿಸುವವರು ಮೊದಲು ಅದನ್ನು ಓದಿಕೊಳ್ಳಲಿ. ಇಷ್ಟಪಟ್ಟವರನ್ನು ವಿವಾಹವಾಗುವ ಸ್ವಾತಂತ್ರ್ಯವನ್ನು ಸಂವಿಧಾನ ನೀಡಿದೆ. ಗೂಂಡಾರಾಜ್ಯವಾದ ಉತ್ತರ ಪ್ರದೇಶ ನಮಗೆ ಮಾದರಿ ಅಲ್ಲ ಎಂದು ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದರು.
‘ಆರೆಸ್ಸೆಸ್ ಶಾಖೆಗೆ ಹೋಗಿ ನಾನು ಕಲಿಯುವಂತಹದ್ದು ಏನೂ ಇಲ್ಲ. ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸುತ್ತಿದ್ದೇನೆ. ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು, ಆರೆಸ್ಸೆಸ್ ಅಲ್ಲ. ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ. ಬೇಕಾದರೆ ನಾನೇ ಸಂವಿಧಾನದ ಪಾಠ ಮಾಡ್ತೇನೆ.’
-ಸಿದ್ದರಾಮಯ್ಯ, ವಿಪಕ್ಷ ನಾಯಕ