ಬಹಿರಂಗ ಹೇಳಿಕೆ ನೀಡುವವರಿಗೆ ಕಡಿವಾಣ ಹಾಕಿ: ರಾಜ್ಯ ಬಿಜೆಪಿ ಉಸ್ತುವಾರಿಗೆ ಶಾಸಕ ಸುನೀಲ್ ಕುಮಾರ್ ದೂರು
ಬೆಂಗಳೂರು, ಡಿ. 6: ಸಚಿವ ಸಂಪುಟ ವಿಸ್ತರಣೆ ಸೇರಿದಂತೆ ಇನ್ನಿತರ ವಿಚಾರಗಳ ಬಗ್ಗೆ ಕೆಲ ಸಚಿವರು ಬಹಿರಂಗ ಹೇಳಿಕೆಗಳನ್ನು ನೀಡುವ ಮೂಲಕ ಪಕ್ಷಕ್ಕೆ ಮುಜುಗರವನ್ನುಂಟು ಮಾಡುತ್ತಿರುವುದಲ್ಲದೆ, ಪಕ್ಷದ ಶಿಸ್ತು ಉಲ್ಲಂಘನೆ ಮಾಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಕೋರಿ ಶಾಸಕ ವಿ.ಸುನೀಲ್ ಕುಮಾರ್, ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಅವರಿಗೆ ದೂರು ನೀಡಿದ್ದಾರೆ.
ರವಿವಾರ ಇಲ್ಲಿನ ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಅರುಣ್ ಸಿಂಗ್ ಅವರನ್ನು ಖುದ್ದು ಭೇಟಿ ಮಾಡಿದ ಸುನೀಲ್ ಕುಮಾರ್, ಸಚಿವ ಸಂಪುಟ ವಿಸ್ತರಣೆ, ನಿಗಮ ಮಂಡಳಿ ನೇಮಕ ಸಂಬಂಧ ಸೃಷ್ಟಿಯಾಗಿರುವ ಅಸಮಾಧಾನ ನಿವಾರಿಸಲು ಕ್ರಮ ಕೈಗೊಳ್ಳಬೇಕು ಎಂದು ಕೋರಿದ್ದಾರೆ.
ಪಕ್ಷದಲ್ಲಿ ಪ್ರಸಕ್ತ ಬೆಳವಣಿಗೆಗಳ ಬಗ್ಗೆ ಚರ್ಚಿಸಲು ಶಾಸಕರ ಸಭೆ ಕರೆಯಬೇಕು ಎಂದು ಕೋರಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ಗೆ ಪತ್ರ ಬರೆದ ಬೆನ್ನಲ್ಲೆ, ಪಕ್ಷದಲ್ಲಿ ಮೂಲ-ವಲಸಿಗರು ಎಂಬ ಭಾವನೆಯನ್ನು ಯಾರೊಬ್ಬರೂ ವ್ಯಕ್ತಪಡಿಸದೆ ಪಕ್ಷದ ಶಿಸ್ತಿನ ಚೌಕಟ್ಟಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಇರಬೇಕು. ನಿಗಮ ಮಂಡಳಿ ನೇಮಕ, ಸಚಿವ ಸಂಪುಟ ವಿಸ್ತರಣೆ ಕುರಿತು ಪಕ್ಷದ ಚೌಕಟ್ಟಿನಲ್ಲಿ ಎಲ್ಲ ಶಾಸಕರು ಅಭಿಪ್ರಾಯ ಹಂಚಿಕೊಳ್ಳಬೇಕಿದೆ ಎಂದು ಅವರು ಪ್ರತಿಪಾದಿಸಿದ್ದಾರೆ ಎಂದು ಗೊತ್ತಾಗಿದೆ.