ಜ.1ರಿಂದ ಶಾಲೆ-ಕಾಲೇಜು ಆರಂಭ: ಸೂಕ್ತ ಸಲಹೆ, ಮಾರ್ಗದರ್ಶನ ನೀಡುವಂತೆ ಶಿಕ್ಷಣ ಸಚಿವರಿಂದ ಜನಪ್ರತಿನಿಧಿಗಳಿಗೆ ಪತ್ರ
ಬೆಂಗಳೂರು, ಡಿ.28: ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿಯ ಸೂಚನೆ ಮತ್ತು ಸಲಹೆಯಂತೆ ಜ.1 ರಿಂದ ಎಸೆಸೆಲ್ಸಿ ಹಾಗೂ ದ್ವಿತೀಯ ಪಿಯುಸಿ ತರಗತಿಗಳು ಮತ್ತು ವಿದ್ಯಾಗಮ ಕಾರ್ಯಕ್ರಮ ಆರಂಭ ಮಾಡಲಾಗುತ್ತಿದ್ದು, ಸಹಕಾರ ನೀಡಬೇಕೆಂದು ವಿಧಾನಸಭಾ ಸದಸ್ಯರುಗಳಿಗೆ, ಜಿಲ್ಲಾ ಉಸ್ತುವಾರಿ ಸಚಿವರಿಗೆ ಪ್ರಾಥಮಿಕ ಶಿಕ್ಷಣ ಮತ್ತು ಪ್ರೌಢಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಪತ್ರ ಬರೆದಿದ್ದಾರೆ.
ಎಲ್ಲರಿಗೂ ಪ್ರತ್ಯೇಕವಾಗಿ ಪತ್ರ ಬರೆದಿರುವ ಸಚಿವರು, ಶಾಲಾ-ಕಾಲೇಜು ಆರಂಭಕ್ಕೆ ಇಲಾಖೆಯು ಸಿದ್ಧತೆ ಕೈಗೊಂಡಿದೆ. ಹೀಗಾಗಿ, ಶಾಲೆಗಳ ಆರಂಭಿಸುವ ಕುರಿತಂತೆ ಸಂಬಂಧಿಸಿದ ಇಲಾಖೆಗಳ ಸಮನ್ವಯದೊಂದಿಗೆ ಅಧಿಕಾರಿಗಳಿಗೆ ಸೂಕ್ತ ಸಲಹೆ, ಸೂಚನೆ, ಮಾರ್ಗದರ್ಶನಗಳನ್ನು ನೀಡಿ ಹೆಚ್ಚಿನ ಸಹಕಾರ ನೀಡಬೇಕು ಎಂದು ಕೋರಿದ್ದಾರೆ.
ತಮ್ಮ ಕ್ಷೇತ್ರ ಮತ್ತು ಜಿಲ್ಲೆಗಳ ವ್ಯಾಪ್ತಿಯಲ್ಲಿ ಕಳೆದ ಎಸೆಸೆಲ್ಸಿ ಪರೀಕ್ಷೆ ಸಂದರ್ಭದಲ್ಲಿ ನೀಡಿದಂತೆ ಶಾಲೆಗಳ ಆರಂಭಕ್ಕೆ ಸಹಕಾರ ನೀಡಬೇಕು. ಮಕ್ಕಳ ಸುಲಲಿತ ವಿದ್ಯಾಭ್ಯಾಸಕ್ಕೆ ನೆರವಾಗಬೇಕು ಎಂದೂ ಅವರು ಮನವಿ ಮಾಡಿದ್ದಾರೆ.
Next Story