ಗೋಹತ್ಯೆ ನಿಷೇಧ ಸುಗ್ರೀವಾಜ್ಞೆ ಪ್ರಶ್ನಿಸಿ ಪಿಐಎಲ್: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಜ.12: ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ, ಸಂರಕ್ಷಣಾ ವಿಧೇಯಕ-2020ರ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ನಗರದ ಸಾಮಾಜಿಕ ಕಾರ್ಯಕರ್ತ ಆರೀಫ್ ಜಮೀಲ್ ಸುಗ್ರೀವಾಜ್ಞೆಯನ್ನು ಅಸಂವಿಧಾನಿಕವೆಂದು ಘೋಷಿಸಿ ರದ್ದುಪಡಿಸಬೇಕು ಎಂದು ಕೋರಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ಹಾಗೂ ನ್ಯಾಯಮೂರ್ತಿ ಸಚಿನ್ ಶಂಕರ್ ಮಗುದಂ ಅವರಿದ್ದ ವಿಭಾಗೀಯ ನ್ಯಾಯಪೀಠ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿತು.
ಅರ್ಜಿದಾರರ ಪರ ವಾದಿಸಿದ ವಕೀಲ ರೆಹಮತ್ ಉಲ್ಲಾ ಕೊತ್ವಾಲ್ ಅವರು, ಕಾಯ್ದೆಯ ಸೆಕ್ಷನ್ 2, 12 ಹಾಗೂ 13ರ ಪ್ರಕಾರ ಜಾನುವಾರುಗಳ ಸಾಗಿಸುವವರ ವಿರುದ್ಧ ಪ್ರಕರಣ ದಾಖಲಿಸಿ ತನಿಖೆಗೆ ಒಳಪಡಿಸಬಹುದು. ಇಂಥ ಸೆಕ್ಷನ್ಗಳ ಜಾರಿಯಿಂದಾಗಿ ರೈತರಿಗೆ ಹಾಗೂ ಜಾನುವಾರು ಸಾಗಿಸುವವರಿಗೆ ತೊಂದರೆಯಾಗುತ್ತದೆ ಎಂದು ಪೀಠಕ್ಕೆ ತಿಳಿಸಿದರು.
ಒಂದು ಕಡೆಯಿಂದ ಮತ್ತೊಂದು ಕಡೆಗೆ ಜಾನುವಾರುಗಳನ್ನು ಸಾಗಿಸಿದರೆ, ಸೆಕ್ಷನ್ 5ರ ಪ್ರಕಾರ ಶಿಕ್ಷಾರ್ಹ ಅಪರಾಧ ಎನ್ನಲಾಗಿದೆ. ಈ ಕಾಯ್ದೆ ಜಾರಿಯಾದ ಮೇಲೆ ದಾವಣಗೆರೆ ಸೇರಿದಂತೆ ಇನ್ನಿತರ ಕಡೆಗಳಲ್ಲಿ ಜಾನುವಾರು ಸಾಗಣೆ ಮಾಡುವವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೀಠಕ್ಕೆ ತಿಳಿಸಿದರು.
ಗೋಹತ್ಯೆ ನಿಷೇಧದಿಂದ ಭಾರತದ ಸಂವಿಧಾನದ 19(ಜಿ) ವಿಧಿ ಖಾತರಿಪಡಿಸಿದ ಮೂಲಭೂತ ಹಕ್ಕಿನ ಉಲ್ಲಂಘನೆಯಾಗಿದೆ. ಹಾಗೆಯೇ ಸಂವಿಧಾನದ 21ನೆ ಪರಿಚ್ಛೇದದ ಅಡಿಯಲ್ಲಿ ಜೀವನೋಪಾಯದ ಹಕ್ಕನ್ನು ಉಲ್ಲಂಘಿಸಿವೆ. ಹಾಗೆಯೇ ಈ ಸುಗ್ರೀವಾಜ್ಞೆಯು ವ್ಯಾಪಾರ ಮತ್ತು ವ್ಯವಹಾರದ ಹಕ್ಕನ್ನು ಉಲ್ಲಂಘಿಸಿವೆ ಎಂದು ಪೀಠಕ್ಕೆ ವಕೀಲ ಕೊತ್ವಾಲ್ ಅವರು ಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ಜಾನುವಾರುಗಳನ್ನು ಸಾಗಿಸುವವರ ವಿರುದ್ಧ ಪ್ರಕರಣ ದಾಖಲಿಸುವುದರಿಂದ ರೈತರಿಗೆ ತೊಂದರೆ ಉಂಟಾಗಬಹುದು. ಸರಕಾರ ಈ ಕಾಯ್ದೆಗೆ ಸಂಬಂಧಿಸಿದಂತೆ ಸ್ಪಷ್ಟನೆ ನೀಡಬೇಕೆಂದು ತಿಳಿಸಿತು.
ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವಾಲಯ ಹಾಗೂ ಪಶುಸಂಗೋಪನಾ ಇಲಾಖೆಗೆ ಸೂಚನೆ ನೀಡಿ, ವಿಚಾರಣೆಯನ್ನು ಮುಂದೂಡಿತು.
ಅರ್ಜಿದಾರರ ಮನವಿ ಏನು: ರಾಜ್ಯದಲ್ಲಿ ಎಲ್ಲ ವಯಸ್ಸಿನ ಆಕಳು, ಕರು, ಗೂಳಿ, ಎತ್ತು ಹಾಗೂ 13 ವರ್ಷದೊಳಗಿನ ಕೋಣ ಅಥವಾ ಎಮ್ಮೆಗಳ ಹತ್ಯೆಯನ್ನು ನಿಷೇಧಿಸಲು ಸರಕಾರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ರೂಪಿಸಿದೆ. ವಿಧಾನಸಭೆಯಲ್ಲಿ ವಿಧೇಯಕಕ್ಕೆ ಅನುಮೋದನೆ ದೊರೆತಿದೆ. ಆದರೆ, ವಿಧಾನ ಪರಿಷತ್ತಿನಲ್ಲಿ ಅನುಮೋದನೆ ದೊರೆತಿರಲಿಲ್ಲ. ಈ ಹಿನ್ನೆಲೆಯಲ್ಲಿ ಸುಗ್ರೀವಾಜ್ಞೆ ಮೂಲಕ ನಿಯಮ ಜಾರಿ ಮಾಡಲು ರಾಜ್ಯಪಾಲರ ಒಪ್ಪಿಗೆ ಕೋರಿತ್ತು.
ರಾಜ್ಯಪಾಲರು ಒಪ್ಪಿಗೆ ನೀಡಿದ್ದರಿಂದ ಸರಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಇದನ್ನು ಪ್ರಶ್ನಿಸಿರುವ ಅರ್ಜಿದಾರರು, 1964ರಿಂದ ಕರ್ನಾಟಕದಲ್ಲಿ ಜಾನುವಾರು ಸಂರಕ್ಷಣೆ ಮತ್ತು ಗೋ ಹತ್ಯೆ ತಡೆ ಕಾಯ್ದೆ ಜಾರಿಯಲ್ಲಿದೆ. ಹೀಗಾಗಿ, ಜಾರುವಾರು ರಕ್ಷಣೆ ಹೆಸರಿನಲ್ಲಿ ಸುಗ್ರೀವಾಜ್ಞೆ ಅಗತ್ಯವೇನಿಲ್ಲ. ಬಿಹಾರ ಮತ್ತು ಗುಜರಾತ್ ರಾಜ್ಯಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ, 15 ವರ್ಷ ಮೀರಿದ ಹಸು ಮತ್ತು ಎತ್ತುಗಳನ್ನು ವ್ಯವಸಾಯ, ಹೈನುಗಾರಿಕೆ ಉಪಯೋಗಕ್ಕೆ ಬರುವುದಿಲ್ಲ. ಅಂತಹ ಹಸು ಹಾಗೂ ಎತ್ತುಗಳನ್ನು ಕಸಾಯಿ ಖಾನೆಗೆ ರೈತರು ಮಾರಾಟ ಮಾಡಬಹುದು ಎಂದು ಸುಪ್ರೀಂಕೋರ್ಟ್ ಆದೇಶಿಸಿದೆ.
ಅಲ್ಲದೇ, ರಾಜ್ಯದ ಈ ಸುಗ್ರೀವಾಜ್ಞೆ ಸಂವಿಧಾನದ ಮೂಲ ತತ್ವ ಹಾಗೂ ಅಶಯಗಳಿಗೆ ವಿರುದ್ಧವಾಗಿದೆ. ಮುಸ್ಲಿಮರು, ದಲಿತರ ಮತ್ತು ಇತರೆ ಅಲ್ಪಸಂಖ್ಯಾತರ ಆಹಾರದ ಹಕ್ಕನ್ನು ಕಸಿದುಕೊಳ್ಳಲಿದೆ. ವಿಧಾನಪರಿಷತ್ತಿನಲ್ಲಿ ಅಂಗೀಕಾರ ದೊರೆಯದೇ ಹೋದರೂ ಸರಕಾರ ಸುಗ್ರೀವಾಜ್ಞೆ ಹೊರಡಿಸಿರುವುದು ಏಕಪಕ್ಷೀಯ ಮತ್ತು ತಾರತಮ್ಯದಿಂದ ಕೂಡಿದೆ. ಸಂವಿಧಾನ ಆಶಯ ಹಾಗೂ ಮಾನವ ಹಕ್ಕುಗಳ ಉಲ್ಲಂಘನೆ ಮಾಡುವ ಸುಗ್ರೀವಾಜ್ಞೆಯನ್ನು ರದ್ದುಪಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.