ಕರ್ನಾಟಕ ಅಪಾರ್ಟ್ಮೆಂಟ್ ಸಮುಚ್ಚಯ ಮಾಲಕತ್ವ ಕಾಯ್ದೆ ಜಾರಿ ಕೋರಿ ಪಿಐಎಲ್: ರಾಜ್ಯ ಸರಕಾರಕ್ಕೆ ಹೈಕೋರ್ಟ್ ನೋಟಿಸ್
ಬೆಂಗಳೂರು, ಜ.17: ಕರ್ನಾಟಕ ಅಪಾರ್ಟ್ಮೆಂಟ್ ಸಮುಚ್ಚಯ ಮಾಲಕತ್ವ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ನಿರ್ದೇಶಿಸಲು ಕೋರಿ ಸಲ್ಲಿಸಿದ್ದ ಅರ್ಜಿ ಸಂಬಂಧ ಹೈಕೋರ್ಟ್ ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿದೆ.
ಈ ಕುರಿತು ಬೆಂಗಳೂರು ಸಿಟಿ ಫ್ಲಾಟ್ ಓನರ್ಸ್ ವೆಲ್ಫೇರ್ ಅಸೋಸಿಯೇಷನ್ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ನ್ಯಾಯಪೀಠ, ಕಂದಾಯ ಇಲಾಖೆಯ ಮುಖ್ಯ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಇನ್ಸ್ಪೆಕ್ಟರ್ ಜನರಲ್ ಆಫ್ ರಿಜಿಸ್ಟ್ರೇಷನ್ ಮತ್ತು ಕಮಿಷನರ್ ಆಫ್ ಸ್ಟಾಂಪ್ಸ್ ಗೆ ನೋಟಿಸ್ ಜಾರಿಗೊಳಿಸಿದೆ.
ಅರ್ಜಿದಾರರ ಪರ ವಾದಿಸಿದ ವಕೀಲರು, ಕರ್ನಾಟಕ ಅಪಾರ್ಟ್ಮೆಂಟ್ ಸಮುಚ್ಚಯ ಮಾಲಕತ್ವ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಯಾಗದ ಹಿನ್ನೆಲೆಯಲ್ಲಿ ಮನೆ ಖರೀದಿದಾರರಿಗೆ ತೊಂದರೆ ಆಗುತ್ತಿದೆ. ಇದರಿಂದ, ಖಾಸಗಿ ಬಿಲ್ಡರ್ಗಳಿಗೆ ಅನುಕೂಲವಾಗುತ್ತಿದೆ ಎಂದು ಪೀಠಕ್ಕೆ ತಿಳಿಸಿದರು.
ಕೆಲ ಕಾಲ ವಕೀಲರ ವಾದ ಆಲಿಸಿದ ನ್ಯಾಯಪೀಠ, ರಾಜ್ಯ ಸರಕಾರಕ್ಕೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ಮುಂದೂಡಿತು.