ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವ ಮುರುಗೇಶ್ ನಿರಾಣಿ ಬಂಧಿಸದಂತೆ ಸುಪ್ರೀಂಕೋರ್ಟ್ ಆದೇಶ
ಡಿನೋಟಿಫಿಕೇಷನ್ ಪ್ರಕರಣ
ಹೊಸದಿಲ್ಲಿ, ಜ.27: ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಸಚಿವ ಮುರುಗೇಶ್ ನಿರಾಣಿಯನ್ನು ಬಂಧಿಸದಂತೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಆದರೆ ಕ್ರಿಮಿನಲ್ ಪ್ರಕರಣಕ್ಕೆ ತಡೆ ನೀಡಲು ನಿರಾಕರಿಸಿದೆ.
2011ರಲ್ಲಿ ದೇವನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ವಸತಿ ಯೋಜನೆಗೆ 26 ಎಕರೆ ಭೂಮಿ ಮಂಜೂರು ಮಾಡಿ, ನಂತರ 2015ರಲ್ಲಿ ನಕಲಿ ದಾಖಲೆ, ನಕಲಿ ಸಹಿ ಬಳಸಿ ಭೂಮಿಯನ್ನು ವಾಪಾಸ್ ಪಡೆಯಲಾಗಿದೆ ಎಂದು ಆರೋಪಿಸಿ ಉದ್ಯಮಿ ಎ. ಆಲಂ ಪಾಷಾ ಎನ್ನುವವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಈ ಪ್ರಕರಣ ರದ್ದು ಕೋರಿ ಯಡಿಯೂರಪ್ಪ ಹಾಗೂ ನಿರಾಣಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಆದರೆ ಪ್ರಕರಣ ರದ್ದಿಗೆ ನಿರಾಕರಿಸಿದ್ದ ಹೈಕೋರ್ಟ್, ಇಬ್ಬರನ್ನೂ ವಿಚಾರಣೆ ನಡೆಸುವಂತೆ ಸೂಚಿಸಿತ್ತು.
ಇದೀಗ ಇಬ್ಬರಿಗೂ ಸುಪ್ರೀಂ ಕೋರ್ಟ್ನಲ್ಲಿ ಹಿನ್ನಡೆಯಾಗಿದ್ದು, ಪ್ರಕರಣ ರದ್ದಿಗೆ ಸುಪ್ರೀಂಕೋರ್ಟ್ ನಿರಾಕರಿಸಿದೆ. ಕೋರ್ಟ್ ದೂರುದಾರರಿಗೂ ನೋಟಿಸ್ ಜಾರಿಗೊಳಿಸಿದೆ. ಅಲ್ಲದೆ, ನೀವು ಹಾಲಿ ಮುಖ್ಯಮಂತ್ರಿ ಆಗಿದ್ದೀರಿ. ನಿಮ್ಮ ವಿರುದ್ಧ ಯಾರು ವಾರಂಟ್ ಹೊರಡಿಸುತ್ತಾರೆ, ಹೆಚ್ಚೆಂದರೆ ನಿಮಗೆ ಮನವಿ ಸಲ್ಲಿಸಬಹುದು ಎಂದು ನ್ಯಾಯಪೀಠವು ಅಭಿಪ್ರಾಯಪಟ್ಟಿದೆ.
ಅಂದು ಮುಖ್ಯಮಂತ್ರಿಯಾಗಿದ್ದ ಯಡಿಯೂರಪ್ಪ, ಅಂದಿನ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ, ಮಾಜಿ ಪ್ರಧಾನ ಕಾರ್ಯದರ್ಶಿ ವಿಪಿ ಬಳಿಗಾರ್ ಹಾಗೂ ಕರ್ನಾಟಕ ಉದ್ಯೋಗ ಮಿತ್ರದ ಮಾಜಿ ಎಂಡಿ ಶಿವಸ್ವಾಮಿ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಾಗಿದ್ದಾರೆ. ಇವರೆಲ್ಲರೂ ಕ್ರಿಮಿನಲ್ ಸಂಚು, ದಾಖಲೆ ತಿರುಚಿದ ಆರೋಪವನ್ನು ಎದುರಿಸುತ್ತಿದ್ದಾರೆ.