ಯಡಿಯೂರಪ್ಪ ವಿರುದ್ಧದ ಆಪರೇಷನ್ ಕಮಲ ಪ್ರಕರಣ: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗ
ಕಲಬುರಗಿ, ಜ.27: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಆಪರೇಷನ್ ಕಮಲ ಆಡಿಯೋ ಪ್ರಕರಣವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಿ ಹೈಕೋರ್ಟ್ ಆದೇಶಿಸಿದೆ.
ಈ ಕುರಿತು ಶರಣಗೌಡ ಪಾಟೀಲ ಕಂದಕೂರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ವಿಶ್ವಜೀತ್ ಶೆಟ್ಟಿ ಅವರಿದ್ದ ವಿಭಾಗೀಯ ನ್ಯಾಯಪೀಠ, ಈ ಆದೇಶ ನೀಡಿದೆ.
ಜನಪ್ರತಿನಿಧಿಗಳಿಗಾಗಿಯೇ ವಿಶೇಷ ನ್ಯಾಯಾಲಯ ಸ್ಥಾಪನೆಯಾದ ಹಿನ್ನೆಲೆಯಲ್ಲಿ ಹೈಕೋರ್ಟ್ ಆಪರೇಷನ್ ಕಮಲ ಆಡಿಯೋ ಪ್ರಕರಣವನ್ನು ಅಲ್ಲಿಗೆ ವರ್ಗಾವಣೆ ಮಾಡಿದೆ.
ತಮ್ಮ ತಂದೆಯ ಕಡೆಯಿಂದ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಿಸಲು ಆಮಿಷ ಒಡ್ಡಲಾಗಿತ್ತು ಎಂದು ಆರೋಪಿಸಿ ಗುರುಮಠಕಲ್ ಶಾಸಕ ನಾಗನಗೌಡ ಕಂದಕೂರು ಪುತ್ರ ಶರಣಗೌಡ ಪಾಟೀಲ ಕಂದಕೂರ ದೂರು ನೀಡಿದ್ದರು. ದೇವದುರ್ಗ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡುವಂತೆ ಹೈಕೋರ್ಟ್ ಮೆಟ್ಟಿಲೇರಿದಾಗ ಹೈಕೋರ್ಟ್ ಪೀಠ ತಡೆಯಾಜ್ಞೆ ನೀಡಿತ್ತು.
ನಂತರ ತಡೆಯಾಜ್ಞೆ ತೆರವುಗೊಳಿಸುವಂತೆ ಶರಣಗೌಡ ಪಾಟೀಲ ಕಂದಕೂರ ಮೇಲ್ಮನವಿ ಸಲ್ಲಿಸಿದ್ದಾರೆ. ಆಪರೇಷನ್ ಕಮಲ ಆಡಿಯೋ ಪ್ರಕರಣ ದಾಖಲಾಗಿದ್ದಾಗ ಯಡಿಯೂರಪ್ಪ ವಿರೋಧ ಪಕ್ಷದ ನಾಯಕರಾಗಿದ್ದರು.