ಫೆ.1ರಿಂದ 9 -12ನೇ ತರಗತಿವರೆಗೆ ಪೂರ್ಣಾವಧಿ ತರಗತಿಗಳು ಆರಂಭ
ಸಾಂದರ್ಭಿಕ ಚಿತ್ರ
ಬೆಂಗಳೂರು, ಜ.28: ಪ್ರಸ್ತುತ ಶೈಕ್ಷಣಿಕ ವರ್ಷದ 9 ಮತ್ತು 11ನೇ ತರಗತಿಗಳನ್ನು ಫೆಬ್ರವರಿ 1ರಿಂದ ಪೂರ್ಣ ಪ್ರಮಾಣದಲ್ಲಿ ಆರಂಭಿಸಲಾಗುವುದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.
ಗುರುವಾರ ವಿಧಾನಸೌಧದಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಮತ್ತು ರಾಜ್ಯ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಅಧ್ಯಕ್ಷರು ಹಾಗೂ ಸದಸ್ಯರು ಮತ್ತು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಚರ್ಚೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈಗಾಗಲೇ 10 ಮತ್ತು 12ನೇ ತರಗತಿಗೆ ಪೂರ್ಣಾವಧಿ ನಡೆಯುತ್ತಿದೆ. ಇದೇ ಮಾದರಿಯಲ್ಲಿ 9 ಮತ್ತು 11ನೇ ತರಗತಿಯು ಪೂರ್ಣಾವಧಿ ನಡೆಸಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಒಂದರಿಂದ ಎಂಟನೇ ತರಗತಿಗಳನ್ನು ಆರಂಭಿಸುವ ಕುರಿತಂತೆ ಫೆಬ್ರವರಿ ಎರಡನೇ ವಾರದಲ್ಲಿ ಆರೋಗ್ಯ ಇಲಾಖೆ ಮತ್ತು ಕೋವಿಡ್ ತಾಂತ್ರಿಕ ಸಲಹಾ ಸಮಿತಿಯೊಂದಿಗೆ ಸಭೆ ನಡೆಸಿ ತೀರ್ಮಾನ ಕೈಗೊಳ್ಳಲು ಸಭೆಯಲ್ಲಿ ನಿರ್ಧರಿಸಲಾಗಿದೆ. ಪ್ರಸ್ತುತ 9ರಿಂದ 12ವರೆಗಿನ ತರಗತಿಗಳು ಪೂರ್ಣ ಅವಧಿಯಲ್ಲಿ ಸಮಿತಿಯ ಮಾರ್ಗದರ್ಶನದಂತೆ ಕೋವಿಡ್ ನಿಯಮಗಳನ್ನು ಅನುಸರಿಸಿ ನಡೆಯಲಿವೆ. ಹಾಗೆಯೇ 6ರಿಂದ 8ನೇ ತರಗತಿಗಳಿಗೆ ಪರಿಷ್ಕೃತ ವಿದ್ಯಾಗಮ ತರಗತಿಗಳು ಈಗ ನಡೆಯುತ್ತಿರುವಂತೆ ಮುಂದುವರೆಯಲಿವೆ ಎಂದು ಅವರು ತಿಳಿಸಿದ್ದಾರೆ.
ಈಗಾಗಲೇ ಆರಂಭವಾಗಿರುವ 12ನೇ ತರಗತಿಗೆ ಸರಾಸರಿ ಶೇ. 75, 10ನೇ ತರಗತಿಗೆ ಶೇ.70, 6ರಿಂದ 9ನೇ ತರಗತಿಯ ವಿದ್ಯಾಗಮ ತರಗತಿಯ ಹಾಜರಾತಿ ಶೇ. 45ರಷ್ಟು ಹಾಜರಾತಿ ಇದೆ. ಈ ಅಂಶವನ್ನು ತಾಂತ್ರಿಕ ಸಲಹಾ ಸಮಿತಿ ಅವಲೋಕಿಸಿ 9 ಮತ್ತು 11ನೇ ತರಗತಿಗಳ ಆರಂಭಕ್ಕೆ ಅನುಮತಿ ನೀಡಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ಪೋಷಕರು ಮತ್ತು ಶಾಲಾಡಳಿತ ಮಂಡಳಿಗಳು ಎಲ್ಲ ತರಗತಿಗಳನ್ನು ಆರಂಭಿಸಬೇಕೆಂದು ಒತ್ತಾಯಿಸುತ್ತಿದ್ದಾರೆ. ಮಕ್ಕಳು ಭೌತಿಕವಾಗಿ ಶಾಲೆಗಳಲ್ಲಿ ಹಾಜರಾಗುತ್ತಿರುವ ಕಾರಣ ಕಲಿಕಾ ಆಸಕ್ತಿ ಹೆಚ್ಚಿದೆ. ಬೋಧನೆ ಪರಿಣಾಮಕಾರಿಯಾಗುತ್ತಿದೆ ಎಂದ ಅವರು, ಶಾಲೆ ಆರಂಭವಾದ ಮೇಲೆ ಮಕ್ಕಳಿಗಾಗಲಿ ಇಲ್ಲವೇ ಶಿಕ್ಷಕರಿಗಾಗಲಿ ಯಾವುದೇ ಸೋಂಕು ಹರಡಿಲ್ಲ ಎಂದು ತಿಳಿಸಿದ್ದಾರೆ.
ಇತ್ತೀಚಿಗೆ ಶಿಕ್ಷಕ-ಪದವೀಧರ ಕ್ಷೇತ್ರದ ವಿಧಾನಪರಿಷತ್ ಸದಸ್ಯರೊಂದಿಗೆ ನಡೆದ ಸಭೆಯಲ್ಲಿ ಎಲ್ಲ ತರಗತಿಗಳು ನಿರಂತರವಾಗಿ ನಡೆಯಬೇಕೆಂದು ಒತ್ತಾಯಿಸಿದ್ದಾರೆ. ಸರಕಾರಿ ನೌಕರರ ಸಂಘ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಕರ ಸಂಘಟನೆಗಳು, ಪದವಿ ಪೂರ್ವ ಉಪನ್ಯಾಸಕರು ಮತ್ತು ಪ್ರಾಂಶುಪಾಲರ ಸಂಘಗಳು ಮಕ್ಕಳ ಹಿತದೃಷ್ಟಿಯಿಂದ ಎಲ್ಲ ತರಗತಿಗಳನ್ನೂ ಆರಂಭಿಸಬೇಕೆಂದು ಪದೇ ಪದೇ ಒತ್ತಾಯಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಂತ, ಹಂತವಾಗಿ ಎಲ್ಲ ಶಾಲೆಗಳನ್ನು ಪ್ರಾರಂಭಿಸಲು ತೀರ್ಮಾನಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಸಭೆಯಲ್ಲಿ ಸಾರಿಗೆ ಇಲಾಖೆ, ಹಿಂದುಳಿದ ವರ್ಗಗಳ ಇಲಾಖೆ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ, ಪದವಿ ಪೂರ್ವ ಶಿಕ್ಷಣ ಇಲಾಖೆ ಹಿರಿಯ ಅಧಿಕಾರಿಗಳು ಹಾಜರಿದ್ದರು.