ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಪ್ರಜಾಪ್ರಭುತ್ವದ ಕಗ್ಗೊಲೆ: ಡಿ.ಕೆ.ಶಿವಕುಮಾರ್
ದಾವಣಗೆರೆ: ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಕುರಿತು ಬಿಜೆಪಿಯವರು ಸರ್ವಾಧಿಕಾರಿ ಧೋರಣೆ ತೋರಿಸುತ್ತಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ. ಈ ಕಾಯ್ದೆಗೆ ನಮ್ಮ ವಿರೋಧವಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಹರಿಹರದ ರಾಜನಹಳ್ಳಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್, ಜೆಡಿಎಸ್ ಶಾಸಕರಿಗೆ ಮಾತನಾಡಲೂ ಅವಕಾಶ ನೀಡಲಿಲ್ಲ. ಅಧಿಕಾರದ ದುರುಪಯೋಗ ಪಡಿಸಿಕೊಂಡಿದ್ದಾರೆ. ಧ್ವನಿ ಮತದಿಂದ ಗೋಹತ್ಯೆ ಕಾಯ್ದೆ ಜಾರಿಗೆ ತಂದಿದ್ದಾರೆ ಎಂದು ಕಿಡಿಕಾರಿದರು.
ಕೇಂದ್ರ ಹಾಗೂ ರಾಜ್ಯದಲ್ಲಿ ತಮ್ಮದೇ ಸರ್ಕಾರವಿದೆ ಎಂಬ ಕಾರಣಕ್ಕೆ ಬಿಜೆಪಿಯವರು ಸರ್ವಾಧಿಕಾರಿ ಧೋರಣೆ ತೋರಿಸುತ್ತಿದ್ದಾರೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಯನ್ನು ಖಂಡಿಸುತ್ತೇವೆ ಎಂದ ಅವರು, ಬೆಳಗಾವಿಯ ಲೋಕಸಭೆ ಉಪಚುನಾವಣೆ ಹಿನ್ನೆಲೆ ಮೂರು ಜನರ ಹೆಸರು ವರಿಷ್ಠರಿಗೆ ಶಿಫಾರಸ್ಸು ಮಾಡಿದ್ದೇವೆ. ಯಾರ ಹೆಸರನ್ನೂ ಅತಿ ಹೆಚ್ಚಾಗಿ ಕಾರ್ಯಕರ್ತರು ಹೇಳುತ್ತಾರೋ ಅವರಿಗೆ ಟಿಕೆಟ್ ಸಿಗಲಿದೆ. ನಾವು ಯಾರೊಬ್ಬರ ಪರವಾಗಿ ಇಲ್ಲ ಎಂದು ಸ್ಪಷ್ಟಪಡಿಸಿದರು.