ಎಫ್ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ: ಮತ್ತೋರ್ವ ಆರೋಪಿ ಬಂಧನ
ಸಾಂದರ್ಭಿಕ ಚಿತ್ರ
ಬೆಂಗಳೂರು, ಫೆ.11: ಎಫ್ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಸಂಬಂಧ ಮತ್ತೋರ್ವ ಆರೋಪಿಯನ್ನು ಸಿಸಿಬಿ ಪೊಲೀಸರು ಬಂಧಿಸಿ ತೀವ್ರ ವಿಚಾರಣೆ ನಡೆಸಿದ್ದಾರೆ.
ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಪ್ರಮುಖ ಆರೋಪಿ ರಾಚಪ್ಪನ ಸಹೋದರ ವೆಂಕಟೇಶ್ ಬಂಧಿತ ಆರೋಪಿಯಾಗಿದ್ದಾನೆ.
ಆರೋಪಿ ವೆಂಕಟೇಶ್ ಸಹ ಎಫ್ಡಿಎ ಪರೀಕ್ಷಾ ಆಭ್ಯರ್ಥಿಯಾಗಿದ್ದು, ಈತನಿಗೆ ಸಹೋದರನಿಂದ ಪ್ರಶ್ನೆಪತ್ರಿಕೆ ದೊರೆಯುತ್ತಿದ್ದಂತೆ ರಾಜ್ಯದ ಮೂಲೆ ಮೂಲೆಗೂ ತಲುಪಿಸಲು ಸಂಚು ರೂಪಿಸಿ ಒಬ್ಬೊಬ್ಬರಿಗೆ 10 ಲಕ್ಷಗಳಿಗೆ ಪ್ರಶ್ನೆ ಪತ್ರಿಕೆ ಮಾರಾಟ ಮಾಡುವ ಯೋಜನೆ ರೂಪಿಸಿಕೊಂಡಿದ್ದು ತನಿಖೆಯಲ್ಲಿ ಪತ್ತೆಯಾಗಿದೆ.
ಪ್ರಕರಣ ಸಂಬಂಧ ಈಗಾಗಲೇ ಕೆಪಿಎಸ್ಸಿಯ ಮೂವರು ನೌಕರರು ಸೇರಿ 19 ಮಂದಿ ಆರೋಪಿಗಳನ್ನು ಬಂಧಿಸಿ ತನಿಖೆ ಕೈಗೊಂಡಿದ್ದಾರೆ.
ಪ್ರಕರಣದ ಕಿಂಗ್ ಪಿನ್ಗಳಾದ ಕೆಪಿಎಸ್ಸಿಯ ದ್ವಿತೀಯ ದರ್ಜೆ ಸಹಾಯಕ ರಮೇಶ್ ಹಾಗೂ ಕಂಟ್ರೋಲ್ ಆಫ್ ಎಕ್ಸಾಂ ಡಿವಿಷನ್ನಲ್ಲಿ ಸ್ಟೆನೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದ ಸನಾ ಬೇಡಿಯನ್ನು ಹೆಚ್ಚಿನ ವಿಚಾರಣೆಗೊಳಪಡಿಸಲಾಗಿದೆ ಅಧಿಕಾರಿಗಳು ತಿಳಿಸಿದ್ದಾರೆ.