ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಎಚ್ಚರಿಕೆ
ಬೆಂಗಳೂರು, ಫೆ.26: ಅಪರಾಧ ಪ್ರಕರಣಗಳ ತನಿಖೆ ವೇಳೆ ಲೋಪ ಕಂಡು ಬರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಗೊಳ್ಳುವುದಾಗಿ ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಎಚ್ಚರಿಸಿದ್ದಾರೆ.
ಪ್ರಕರಣದ ತನಿಖೆ ವೇಳೆ ಅಧಿಕಾರಿಗಳು ಎಸಗುವ ಲೋಪದಿಂದ ನ್ಯಾಯಾಲಯದಲ್ಲಿ ಅವರಿಗೆ ಶಿಕ್ಷೆ ಕೊಡಿಸಲು ಸಾಧ್ಯವಾಗುತ್ತಿಲ್ಲ. ಸರಿಯಾದ ಸಾಕ್ಷಿ, ಆಧಾರಗಳು ಸಕಾಲಕ್ಕೆ ಹಾಜರುಪಡಿಸಿದ ಕಾರಣ ನ್ಯಾಯಾಲಯದಲ್ಲಿ ಆರೋಪಿಗಳಿಗೆ ಲಾಭವಾಗುತ್ತಿದೆ. ಹೀಗಾಗಿ ಮುಂದಿನ ದಿನಗಳಲ್ಲಿ ತನಿಖೆ ವೇಳೆ ನಿರ್ಲಕ್ಷ್ಯ ಕಂಡು ಬಂದರೆ ಅಂತಹ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ತನಿಖೆ ನಡೆಸುವಾಗ ನಿರ್ಲಕ್ಷ್ಯ ವಹಿಸಿ, ಸೂಕ್ತ ಸಮಯಕ್ಕೆ ಬಿ ರಿಪೋೀರ್ಟ್, ಚಾರ್ಜ್ಶೀಟ್ ಸಲ್ಲಿಕೆ ಮಾಡದಿರುವುದು ಸೇರಿದಂತೆ ಕರ್ತವ್ಯಲೋಪದಿಂದ ನ್ಯಾಯಾಲಯದಲ್ಲಿ ಪ್ರಕರಣಗಳು ಖುಲಾಸೆಯಾಗುತ್ತಿವೆ ಎನ್ನುವ ಆರೋಪಗಳು ಕೇಳಿಬಂದಿವೆ. ಹಾಗಾಗಿ, ತನಿಖಾಧಿಕಾರಿಗಳ ಲೋಪದ ಬಗ್ಗೆ ತನಿಖೆ ನಡೆಸಿ ಕ್ರಮ ಕೈಗೊಳ್ಳಲು ಮೇಲಾಧಿಕಾರಿಗಳಿಗೆ ಸೂಚಿಸಲಾಗಿದೆ. ಸ್ಥಳದಿಂದ ವರ್ಗಾವಣೆ ಆಗಿದ್ದರೂ ಕೂಡ ಮೇಲಾಧಿಕಾರಿ ವರದಿ ಆಧರಿಸಿ ಕ್ರಮ ಕೈಗೊಳ್ಳಿ ಎಂದು ಪ್ರವೀಣ್ ಸೂದ್ ಸೂಚನೆ ನೀಡಿದ್ದಾರೆ.