ಕಾವೇರಿ ನೀರಾವರಿ ಯೋಜನೆ ಸ್ಥಗಿತಕ್ಕೆ ಆಗ್ರಹ: ಮಾ.27ರಂದು 'ಕರ್ನಾಟಕ ಬಂದ್'ಗೆ ಕರೆ
ಬೆಂಗಳೂರು, ಫೆ.27: ತಮಿಳುನಾಡು ಸರಕಾರ ಕೈಗೆತ್ತಿಕೊಂಡಿರುವ ಕಾವೇರಿ ನೀರಾವರಿ ಯೋಜನೆಗಳನ್ನು ಕೂಡಲೇ ಕೈ ಬಿಡಬೇಕೆಂದು ಒತ್ತಾಯಿಸಿ ಮಾ.27ರಂದು ಕರ್ನಾಟಕ ಬಂದ್ಗೆ ಕರೆ ನೀಡಲಾಗಿದೆ ಎಂದು ಕನ್ನಡ ಒಕ್ಕೂಟದ ಅಧ್ಯಕ್ಷ ವಾಟಾಳ್ ನಾಗರಾಜ್ ತಿಳಿಸಿದ್ದಾರೆ.
ಶನಿವಾರ ನಗರದಲ್ಲಿ ಕನ್ನಡ ಒಕ್ಕೂಟದಿಂದ ಆಯೋಜಿಸಿದ್ದ ಸಭೆಯಲ್ಲಿ ಮಾತನಾಡಿದ ಅವರು, ತಮಿಳುನಾಡು ಸರಕಾರ ಏಕಾಏಕಿ ಕಾವೇರಿ ನೀರಿನ ಮೂಲವನ್ನು ಆಧರಿಸಿ ನೀರಾವರಿ ಯೋಜನೆ ಜಾರಿ ಮಾಡಿರುವುದು ಆತಂಕ ಮೂಡಿಸಿದೆ. ಇದನ್ನು ಕೂಡಲೇ ನಿಲ್ಲಿಸಬೇಕೆಂದು ಒತ್ತಾಯಿಸುವುದು ಕನ್ನಡಪರ ಸಂಘಟನೆಗಳ ಜವಾಬ್ದಾರಿಯಾಗಿದೆ ಎಂದು ತಿಳಿಸಿದ್ದಾರೆ.
ಕಾವೇರಿ ನದಿ ಜೋಡಣೆಗೆ ಸಂಬಂಧಿಸಿದಂತೆ 1,188 ಕಿಮೀ ಉದ್ದದ ಕಾಲುವೆಗಳ ನಿರ್ಮಾಣಕ್ಕೆ ತಮಿಳುನಾಡು ಸರಕಾರ ಶಂಕುಸ್ಥಾಪನೆ ಮಾಡಿದೆ. ಇದರಿಂದ ಕಾವೇರಿ ನೀರನ್ನು ಅವಲಂಬಿಸಿರುವ ರೈತರಿಗೆ ಹಾಗೂ ನಾಗರಿಕರಿಗೆ ಸಾಕಷ್ಟು ನಷ್ಟವಾಗಲಿದೆ. ಈ ಬಗ್ಗೆ ಕರ್ನಾಟಕ ಸರಕಾರ ಕೇಂದ್ರದ ಗಮನಕ್ಕೆ ತಂದು ಕಾಮಗಾರಿಗಳ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.
ಮಾ.13ರಂದು ಕನ್ನಡ ಒಕ್ಕೂಟದ ವತಿಯಿಂದ ಕೆಆರ್ಎಸ್ ಚಲೋ ನಡೆಸಲು ಉದ್ದೇಶಿಸಲಾಗಿದೆ. ಮಾ.20ರಂದು ಬೆಂಗಳೂರು ನಗರದ ಮೈಸೂರು ಬ್ಯಾಂಕ್ ವೃತ್ತದ ಬಳಿ ಪ್ರತಿಭಟನೆ ನಡೆಸಿ ರಾಜ್ಯ ಸರಕಾರದ ಗಮನಕ್ಕೆ ತರಲಾಗುವುದು. ಅಷ್ಟರೊಳಗೆ ಈ ಸಂಬಂಧ ರಾಜ್ಯ ಸರಕಾರ ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಮಾ.27ರಂದು ಕರ್ನಾಟಕ ಬಂದ್ ನಡೆಸುವುದು ಶತಃಸಿದ್ಧವೆಂದು ಅವರು ಎಚ್ಚರಿಕೆ ನೀಡಿದ್ದಾರೆ. ಈ ವೇಳೆ ಕರ್ನಾಟಕ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಮುಖ್ಯಮಂತ್ರಿ ಚಂದ್ರು ಸೇರಿದಂತೆ ಹಲವರು ಉಪಸ್ಥಿತರಿದ್ದರು.