ಕಾಂಗ್ರೆಸ್ ಸೇರ್ಪಡೆ ಕುರಿತು ಮೌನ ಮುರಿದ ಮಧು ಬಂಗಾರಪ್ಪ
ಶಿವಮೊಗ್ಗ : ಜೆಡಿಎಸ್ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆ ಕುರಿತು ಮಾಜಿ ಶಾಸಕ ಮಧು ಬಂಗಾರಪ್ಪ ಕೊನೆಗೂ ಮೌನ ಮುರಿದಿದ್ದಾರೆ. ಮುಂಬರುವ ಜಿಲ್ಲಾ ಪಂಚಾಯತ್ ಚುನಾವಣೆ ಒಳಗೆ ದೃಢ ನಿರ್ಧಾರ ಕೈಗೊಳ್ಳುವುದಾಗಿ ಮಾಜಿ ಶಾಸಕ ಮಧುಬಂಗಾರಪ್ಪ ತಿಳಿಸಿದರು.
ಶಿವಮೊಗ್ಗದ ಕಲ್ಲಹಳ್ಳಿಯಲ್ಲಿ ಇರುವ ಮನೆಯಲ್ಲಿ ಇಂದು ಮಧು ಬಂಗಾರಪ್ಪ ಹುಟ್ಟುಹಬ್ಬ ಆಚರಿಸಿಕೊಂಡರು. ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹುಟ್ಟು ಹಬ್ಬದ ದಿನ ಸುಳ್ಳು ಹೇಳುವುದಿಲ್ಲ. ಶಿವಮೊಗ್ಗದಿಂದಲೇ ಬದಲಾವಣೆಯ ಗಾಳಿ ಬೀಸಲಿದೆ. ನನ್ನ ರಾಜಕೀಯ ಭವಿಷ್ಯದ ದೃಷ್ಟಿಯಿಂದ ಬದಲಾವಣೆ ಅನಿವಾರ್ಯ ಎಂದರು.
ಜಿಲ್ಲಾ ಪಂಚಾಯತ್ ಚುನಾವಣೆಗೂ ಮೊದಲು ಕಾಂಗ್ರೆಸ್ ಪಕ್ಷ ಸೇರ್ಪಡೆ ಕುರಿತು ಕೇಳಿದ ಪ್ರಶ್ನೆಗೆ, ಹಿತೈಷಿಗಳು, ಕಾರ್ಯಕರ್ತರ ಜೊತೆಗೆ ಚರ್ಚೆ ಮಾಡಬೇಕಿದೆ. ಜಿಲ್ಲಾ ಪಂ. ಚುನಾವಣೆಯೊಳಗೆ ನಿರ್ಧಾರ ಪ್ರಕಟಸುತ್ತೇನೆ ಎಂದು ಮಧು ಬಂಗಾರಪ್ಪ ತಿಳಿಸಿದರು.
ಜೆಡಿಎಸ್ ಪಕ್ಷ ಬಿಡಲು ಕಾರಣವೇನು ಎಂದು ಪ್ರಶ್ನಿಸಿದಾಗ, ನಾನಿನ್ನು ಜೆಡಿಎಸ್ ಪಕ್ಷದಲ್ಲೇ ಇದ್ದೇನೆ. ಕುಮಾರಸ್ವಾಮಿ ಅವರು ರಾಜಕೀಯವಾಗಿ ಬೆಳಸಿದ್ದಾರೆ. ಅವರನ್ನು ಹೆಚ್ಚು ಪ್ರೀತಿಸುತ್ತೇನೆ. ಜೆಡಿಎಸ್ ಬಿಟ್ಟು ಬರುವ ನಿರ್ಧಾರ ತೆಗೆದುಕೊಳ್ಳಲು ಕಷ್ಟವಾಗುತ್ತಿದೆ ಎಂದರು. ಜೆಡಿಎಸ್ ಪಕ್ಷದಲ್ಲಿ ತಮಗೇನು ಸಮಸ್ಯೆ ಆಗಿಲ್ಲ. ಆದರೆ ಅಧಿಕಾರದಲ್ಲಿದ್ದಾಗ ಕಾರ್ಯಕರ್ತರಿಗೆ ಅಧಿಕಾರ ಸಿಗಲಿಲ್ಲ. ಶಿವಮೊಗ್ಗದ ಉದಾಹರಣೆಯನ್ನು ಹೇಳುವುದಾದರೆ ಶ್ರೀಕಾಂತ್ ಅವರಿಗೆ ಅಧಿಕಾರ ಕೊಡಬಹುದಾಗಿತ್ತು. ಆದರೆ ಹಾಗಾಗಲಿಲ್ಲ. ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ ವೇದಾ ವಿಜಯ ಕುಮಾರ್ ಅವರಿಗೆ ಕೆಲವು ಮಾತು ಕೊಟ್ಟು ಬೆಂಬಲ ಪಡೆದುಕೊಳ್ಳಲಾಯಿತು. ಆದರೆ ಈತನಕ ಆ ಭರವಸೆ ಈಡೇರಿಸಲು ಆಗಲಿಲ್ಲ. ಈ ರೀತಿ ಕೆಲವು ತಪ್ಪುಗಳಾಗಿರುವ ಬಗ್ಗೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಮಾಡಿದ್ದೆ. ಇದನ್ನು ಕುಮಾರಸ್ವಾಮಿ ಅವರು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ ಎಂದರು.
ಜಿಲ್ಲಾ ಪಂ. ಉಪಾಧ್ಯಕ್ಷೆ ವೇದಾ ವಿಜಯಕುಮಾರ್, ಹಾಪ್ ಕಾಮ್ಸ್ ಮಾಜಿ ಅಧ್ಯಕ್ಷ ವಿಜಯ್ ಕುಮಾರ್, ಜಿಲ್ಲಾ ಪಂ. ಸದಸ್ಯ ಕಲಗೋಡು ರತ್ನಾಕರ್, ಜಿ.ಡಿ.ಮಂಜುನಾಥ್, ಎನ್.ರಮೇಶ್, ಎಸ್.ಪಿ.ದಿನೇಶ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.