ಸಿಡಿ ಪ್ರಕರಣ: ಕಮಲ್ ಪಂತ್ ಸೇರಿ ಮೂವರು ಪೊಲೀಸರ ವಿರುದ್ಧ ಕೋರ್ಟ್ ನಲ್ಲಿ ಮೊಕದ್ದಮೆ ದಾಖಲು
ಬೆಂಗಳೂರು, ಎ.7: ಬಿಜೆಪಿ ಶಾಸಕ ರಮೇಶ್ ಜಾರಕಿಹೊಳಿ ಅಶ್ಲೀಲ ವೀಡಿಯೊ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿ ಮೂವರು ಪೊಲೀಸ್ ಅಧಿಕಾರಿಗಳ ವಿರುದ್ಧ ನಗರದ 8ನೆ ಎಸಿಎಂಎ ಕೋರ್ಟ್ ನಲ್ಲಿ ಖಾಸಗಿ ಮೊಕದ್ದಮೆಯೊಂದು ದಾಖಲಾಗಿದೆ.
ಕೋರ್ಟ್ ಗೆ ಜನಾಧಿಕಾರ ಸಂಘರ್ಷ ಪರಿಷತ್ ಅರ್ಜಿ ಸಲ್ಲಿಸಿದ್ದು, ಸಿಡಿ ಪ್ರಕರಣ ಸಂಬಂಧ ರಮೇಶ ಜಾರಕಿಹೊಳಿ ವಿರುದ್ಧ ನಾಗರಿಕ ಹಕ್ಕು ಹೋರಾಟ ಸಮಿತಿ ಅಧ್ಯಕ್ಷ ದಿನೇಶ್ ಕಲ್ಲಹಳ್ಳಿ ನೀಡಿದ್ದ ದೂರು ಆಧರಿಸಿ ಎಫ್ಐಆರ್ ದಾಖಲಿಸದ ಆರೋಪದಡಿ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿ ಮೂವರು ಅಧಿಕಾರಿಗಳ ವಿರುದ್ಧ ಕೋರ್ಟ್ ನಲ್ಲಿ ಖಾಸಗಿ ಮೊಕದ್ದಮೆ ದಾಖಲಿಸಲಾಗಿದೆ.
ಅರ್ಜಿಯಲ್ಲಿ ಏನಿದೆ: ಯುವತಿ ಮೇಲಾದ ಲೈಂಗಿಕ ದೌರ್ಜನ್ಯ ಹಾಗೂ ಜೀವ ಬೆದರಿಕೆ ಬಗ್ಗೆ ದಿನೇಶ್ ಕಲ್ಲಹಳ್ಳಿ ಮಾ.16 ರಂದು ದೂರು ನೀಡಿದ್ದರು. ಆದರೆ, ಪೊಲೀಸ್ ಆಯುಕ್ತ ಕಮಲ್ ಪಂತ್, ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್. ಅನುಚೇತ್ ಹಾಗೂ ಕಬ್ಬನ್ಪಾರ್ಕ್ ಠಾಣೆ ಇನ್ಸ್ ಪೆಕ್ಟರ್ ಬಿ. ಮಾರುತಿ ಎಫ್ಐಆರ್ ದಾಖಲಿಸಿಕೊಂಡಿರಲಿಲ್ಲ. ಬದಲಿಗೆ ದೂರುದಾರರನ್ನೆ ವಿಚಾರಣೆಗೆ ಒಳಪಡಿಸಿದ್ದರು ಎಂದು ಅರ್ಜಿಯಲ್ಲಿ ದೂರಿದ್ದಾರೆ. ಇದೀಗ ಈ ಮೊಕದ್ದಮೆ ಅಂಗೀಕರಿಸಿರುವ ನ್ಯಾಯಾಲಯ, ಅದರ ಮುಂದಿನ ವಿಚಾರಣೆಯನ್ನು ಎ.16ಕ್ಕೆ ಮುಂದೂಡಿದೆ.