ಬಾಲಕಿಯ ಅತ್ಯಾಚಾರ ಪ್ರಕರಣ: ಪೊಲೀಸ್ ಮಹಾನಿರ್ದೇಶಕ, ಜಿಲ್ಲಾಧಿಕಾರಿಗೆ ಎನ್ಎಚ್ಆರ್ಸಿ ನೋಟಿಸ್ ಜಾರಿ
ಕಲಬುರಗಿ, ಎ.9: ಎಂಟು ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಕಲಬುರಗಿ ಜಿಲ್ಲೆಯ ಚಿಂಚೋಳಿ ಪೊಲೀಸ್ ಠಾಣೆಯಲ್ಲಿ 2020ರ ಮಾ.20ರಂದು ಪ್ರಕರಣ ದಾಖಲಾಗಿದ್ದರೂ, ಈವರೆಗೆ ಯಾವ ಆರೋಪಿಯನ್ನು ಬಂಧಿಸದೆ, ಸಕ್ಷಮ ನ್ಯಾಯಾಲಯದ ಎದುರು ಚಾರ್ಜ್ಶೀಟ್ ಅನ್ನು ದಾಖಲಿಸದೆ ಇರುವುದರಿಂದ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ(ಎನ್ಎಚ್ಆರ್ಸಿ)ವು ರಾಜ್ಯ ಪೊಲೀಸ್ ಮಹಾನಿರ್ದೇಶಕ ಹಾಗೂ ಕಲಬುರಗಿ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿದೆ.
ಈ ಸಂಬಂಧ ಕಲಬುರಗಿಯ ಸಾಮಾಜಿಕ ಹೋರಾಟಗಾರ ಮುಹಮ್ಮದ್ ರಿಯಾಝುದ್ದೀನ್ ಖತೀಬ್, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ನೀಡಿ, ಈ ಪ್ರಕರಣದಲ್ಲಿ ಮಧ್ಯಪ್ರವೇಶಿಸಿ, ರಾಜ್ಯ ಸರಕಾರ, ಡಿಜಿಪಿಗೆ ನಿರ್ದೇಶನ ನೀಡಿ, ಈ ಅತ್ಯಾಚಾರ ಪ್ರಕರಣದ ತನಿಖೆಯನ್ನು ಎಸ್ಐಟಿ ಅಥವಾ ಸಿಬಿಐಗೆ ವಹಿಸುವಂತೆ ಕೋರಿದ್ದರು. ಅಲ್ಲದೆ, ಸಂತ್ರಸ್ತ ಬಾಲಕಿಗೆ ಪರಿಹಾರ ಹಾಗೂ ಆಕೆಯ ಭವಿಷ್ಯದ ಶಿಕ್ಷಣಕ್ಕೆ ಅಗತ್ಯ ನೆರವನ್ನು ಕೊಡಿಸಬೇಕು ಎಂದು ಮನವಿ ಮಾಡಿದರು.
ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಡಿಜಿಪಿ ಹಾಗೂ ಕಲಬುರಗಿ ಜಿಲ್ಲಾಧಿಕಾರಿಗೆ ನೋಟಿಸ್ ಜಾರಿ ಮಾಡಿ, ನಾಲ್ಕು ವಾರಗಳಲ್ಲಿ ಈ ಸಂಬಂಧ ಅಗತ್ಯ ಕ್ರಮ ಕೈಗೊಂಡು, ಸಂತ್ರಸ್ತೆಗೆ ಪರಿಹಾರ ಒದಗಿಸುವಂತೆ ಸೂಚನೆ ನೀಡಿದೆ.