ರಸಗೊಬ್ಬರದ ಮೇಲಿನ ದರ ಹೆಚ್ಚಳ ವಾಪಸ್ ಪಡೆಯಿರಿ: ಕುಮಾರಸ್ವಾಮಿ ಆಗ್ರಹ
ಬೆಂಗಳೂರು, ಎ. 11: `ಬಾಯಿ ಮಾತಿನಿಂದ ರೈತರ ಬಾಳು ಬೆಳಗಲು ಸಾಧ್ಯವಿಲ್ಲ. ರೈತರ ಮತಗಳ ಮೇಲೆ ಕಣ್ಣಿಟ್ಟು ಎಷ್ಟು ದಿನ ಸುಳ್ಳಿನ ಅರಮನೆ ಕಟ್ಟುತ್ತೀರಿ? ಇನ್ನಾದರೂ ರೈತರಿಗೆ ಸಹನೀಯ ಬದುಕು ಕಟ್ಟಿಕೊಳ್ಳಲು ಅವಕಾಶ ಕೊಡಿ. ರಸಗೊಬ್ಬರದ ಮೇಲಿನ ದರ ಹೆಚ್ಚಳ ವಾಪಸ್ ಪಡೆಯಿರಿ' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, `ಕೇಂದ್ರ ಸಚಿವ ಸದಾನಂದಗೌಡರು, ಪ್ರಧಾನಿ ನರೇಂದ್ರ ಮೋದಿ ಅವರ ಜತೆ ಮಾತನಾಡಿ ರಸಗೊಬ್ಬರಕ್ಕಾಗಿ ನೀಡುತ್ತಿದ್ದ 1.5 ಲಕ್ಷ ಕೋಟಿಯಷ್ಟು ಸಬ್ಸಿಡಿ ಮುಂದುವರಿಸುವಂತೆ ಮನವರಿಕೆ ಮಾಡಿಕೊಡಬೇಕು. ಈಗ ಅದನ್ನು ಶೇ.50ರಷ್ಟು ಕಡಿತ ಮಾಡಲಾಗಿದೆ' ಎಂದು ದೂರಿದರು.
ಕೇಂದ್ರದ ರಸಗೊಬ್ಬರ ಸಚಿವ ಡಿ.ವಿ.ಸದಾನಂದ ಗೌಡರು ರಸಗೊಬ್ಬರ ಕಂಪೆನಿಗಳ ಪ್ರತಿನಿಧಿಗಳ ಜತೆ ಸಭೆ ನಡೆಸುವುದರಿಂದ ಈ ಸಮಸ್ಯೆ ಬಗೆಹರಿಯುವುದಿಲ್ಲ. ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ ಹಾಕಬಾರದು. ಅಧಿಕಾರಕ್ಕೆ ಬಂದ ಕೆಲವೇ ಗಂಟೆಗಳಲ್ಲಿ ರೈತರ ಮೇಲೆ ಗೋಲಿಬಾರ್ ನಡೆಸಿದ್ದ ಬಿಜೆಪಿ ಸರಕಾರ, ರೈತರ ಬಗ್ಗೆ ಮೃದು ಮಾತಾಡುತ್ತಲೇ ರೈತರ ಬೆನ್ನಿಗೆ ಚೂರಿ ಹಾಕುವ ಕೆಲಸ ಮಾಡುತ್ತಿದೆ. ಇದೀಗ ರಸಗೊಬ್ಬರ ದರವನ್ನು ಶೇ.60ರಷ್ಟು ಹೆಚ್ಚಳ ಮಾಡಿದೆ' ಎಂದು ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.