ಕೋವಿಡ್ ನಿರ್ವಹಣೆಯಲ್ಲಿ ಮಾರ್ಗಸೂಚಿ ಬಳಕೆ ಕಡ್ಡಾಯ : ಸಚಿವ ಡಾ. ಸುಧಾಕರ್
ಕಲಬುರಗಿ : ಆಕ್ಸಿಜನ್ ಬಳಕೆಯಲ್ಲಿ ಕಟ್ಟುನಿಟ್ಟಾಗಿ ಮಾನದಂಡಗಳನ್ನು ಅಳವಡಿಸಿಕೊಂಡು ಕಾರ್ಯ ನಿರ್ವಹಿಸಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಹೇಳಿದರು. ಕೋವಿಡ್ ಸಂದರ್ಭದಲ್ಲಿ ಒಟ್ಟಾರೆ ನಿರ್ವಹಣೆಯ ಉಸ್ತುವಾರಿಗಾಗಿ ಹಿರಿಯ ಅಧಿಕಾರಿಯನ್ನು ನೇಮಿಸಲು ಜಿಲ್ಲಾಧಿಕಾರಿಯವರಿಗೆ ಸೂಚನೆ ನೀಡಿದರು.
ಜಿಮ್ಸ್ ಆಸ್ಪತ್ರೆ ಮತ್ತು ಕಾಲೇಜಿಗೆ ಭೇಟಿ ನೀಡಿ ಕೋವಿಡ್ ಚಿಕಿತ್ಸೆಗೆ ಸಂಬಂಧಿಸಿದ ವಿಷಯಗಳ ಬಗ್ಗೆ ಶನಿವಾರ ಪರಿಶೀಲನೆ ನಡೆಸಿದರು.
ಆಕ್ಸಿಜನ್ ಬಳಕೆ ಬಗ್ಗೆ ಕೆಲ ದೂರುಗಳಿವೆ. ರೋಗಿಗೆ ನೀಡಬೇಕಾದ ಚುಚ್ಚುಮದ್ದು ಕಾಳಸಂತೆಯಲ್ಲಿ ಮಾರಾಟ ಆಗುತ್ತಿರುವ ದೂರುಗಳಿವೆ. ಈ ಹಿನ್ನೆಲೆಯಲ್ಲಿ ಆಕ್ಸಿಜನ್ ಮತ್ತು ಇತರ ನಿರ್ವಹಣೆಗೆ ತಜ್ಞರ ತಂಡ ರಚನೆ ಮಾಡಿ ಪ್ರತಿದಿನ ಅವುಗಳ ಬಳಕೆಯ ಮೇಲುಸ್ತುವಾರಿ ನೋಡಿಕೊಳ್ಳಲು ಸೂಚನೆ ನೀಡಬೇಕು. ಆಯಾ ದಿನದ ವರದಿಯನ್ನು ಸರಕಾರಕ್ಕೆ ನೀಡಬೇಕು ಎಂದು ನಿರ್ದೇಶಕರಿಗೆ ಸೂಚನೆ ನೀಡಿದರು.
ವೈದ್ಯರು ಮತ್ತು ಸಿಬ್ಬಂದಿಗೆ ಸೂಕ್ತ ರಕ್ಷಣೆ ನೀಡಬೇಕು. ಅದಕ್ಕಾಗಿ ಪ್ರತಿದಿನ ರಕ್ಷಣಾ ಸಿಬ್ಬಂದಿಗಳನ್ನು ನಿಯೋಜಿಸುವಂತೆ ಡಿಸಿಯವರಿಗೆ ಸೂಚನೆ ನೀಡಿದರು ಎಂದರು.