ಕಾಳಸಂತೆಯಲ್ಲಿ ರೆಮ್ಡಿಸಿವಿರ್ ಮಾರಾಟ ಆರೋಪ: ಖಾಸಗಿ ಆಸ್ಪತ್ರೆಯ ಸಿಬ್ಬಂದಿ ಸಹಿತ ಮೂವರ ಬಂಧನ
ಸಾಂದರ್ಭಿಕ ಚಿತ್ರ
ತುಮಕೂರು, ಮೇ 3: ಕೋವಿಡ್-19 ಚಿಕಿತ್ಸೆಗೆ ಬಳಸುವ ರೆಮ್ಡೆಸಿವಿರ್ ಚುಚ್ಚುಮದ್ದನ್ನು ಕಾಳಸಂತೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಆರೋಪದಲ್ಲಿ ನಗರದ ಪ್ರತಿಷ್ಠಿತ ಆಸ್ಪತ್ರೆಯ ಇಬ್ಬರು ನೌಕರರು ಸೇರಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಖಾಸಗಿ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ಸಿಬ್ಬಂದಿ ಸೈಯದ್ ಹರ್ಷದ್, ಇದೇ ಆಸ್ಪತ್ರೆಯಲ್ಲಿ ಸಿಟಿ ಎಕ್ಸರೇ ವಿಭಾಗದಲ್ಲಿ ಕೆಲಸ ಮಾಡುವ ರಖೀಬ್ ಹಾಗೂ ಸೂರ್ಯ ಆಸ್ಪತ್ರೆಯ ಟೆಕ್ನಿಷಿಯನ್ ರಂಗನಾಥ ಬಂಧಿತ ಆರೋಪಿಗಳೆಂದು ಪೊಲೀಸರು ತಿಳಿಸಿದ್ದಾರೆ.
ನಗರದ ಗುಂಚಿ ವೃತ್ತದಲ್ಲಿ ಚುಚ್ಚುಮದ್ದು ಮಾರಾಟ ಮಾಡುವ ಸಮಯದಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದು, ಅವರಿಂದ 100 ಎಂ.ಜಿ.ಯ ಮೂರು ರೆಮ್ಡಿಸಿವಿರ್ ಚುಚ್ಚುಮದ್ದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಆರೋಪಿಗಳು 4,700 ರೂ. ಮೌಲ್ಯದ ಚುಚ್ಚುಮದ್ದನ್ನು 17 ಸಾವಿರ ರೂ.ಗಳಿಗೆ ಮಾರಾಟ ಮಾಡುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Next Story