ಕೊರೋನ ಕರ್ಫ್ಯೂ ವಿಸ್ತರಣೆ ಬಗ್ಗೆ ಮೇ 12ರ ನಂತರ ತೀರ್ಮಾನ: ಮುಖ್ಯಮಂತ್ರಿ ಯಡಿಯೂರಪ್ಪ
ಪತ್ರಕರ್ತರು 'ಮುಂಚೂಣಿ ಕಾರ್ಯಕರ್ತರು' ಎಂದು ಘೋಷಣೆ
ಬೆಂಗಳೂರು, ಮೇ 4: ರಾಜ್ಯದಲ್ಲಿ ಕೋವಿಡ್ ಎರಡನೆ ಅಲೆಯನ್ನು ಸಮರ್ಥವಾಗಿ ಎದುರಿಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಂಪೂರ್ಣ ಜವಾಬ್ದಾರಿ ನೀಡಲಾಗಿದೆ. ಜೊತೆಗೆ, ಹಿರಿಯ ಸಚಿವರಿಗೆ ಔಷಧ, ಆಕ್ಸಿಜನ್, ಹಾಸಿಗೆಗಳ ಸೌಲಭ್ಯ ಹೊಂದಿಸುವ ಹೊಣೆಗಾರಿಕೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಚಾಮರಾಜನಗರ ಆಸ್ಪತ್ರೆಯಲ್ಲಿ ಸಂಭವಿಸಿದ ಸಾವುಗಳ ಬಗ್ಗೆ ವಿಷಾದ ವ್ಯಕ್ತಪಡಿಸಿದರು. ಐಎಎಸ್ ಅಧಿಕಾರಿ ಶಿವಯೋಗಿ ಕಳಸದ್ ಅವರಿಗೆ ತನಿಖೆಯ ಜವಾಬ್ದಾರಿ ನೀಡಿದ್ದು, ಮೂರು ದಿನಗಳಲ್ಲಿ ವರದಿ ನೀಡುವಂತೆ ಸೂಚನೆ ನೀಡಿದ್ದೇನೆ. ವರದಿ ಬಂದ ನಂತರ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದರು.
ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವುದರಿಂದ ಸಚಿವರೊಂದಿಗೆ ಇಂದು ಸವಿಸ್ತಾರವಾಗಿ ಚರ್ಚೆ ಮಾಡಲಾಗಿದೆ. ಉಸ್ತುವಾರಿ ಸಚಿವರು ತಮ್ಮ ತಮ್ಮ ಜಿಲ್ಲೆಯಲ್ಲಿ ನಾಳೆಯಿಂದಲೇ ಮೊಕ್ಕಾಂ ಹೂಡಬೇಕು. ರೆಮ್ಡೆಸಿವಿರ್, ಆಕ್ಸಿಜನ್, ಹಾಸಿಗೆ ಸೇರಿದಂತೆ ಕೋವಿಡ್ ನಿರ್ವಹಣೆ ಸಂಬಂಧ ಸಚಿವರಿಗೆ ಜವಾಬ್ದಾರಿ ಹಂಚಿಕೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಹಿರಿಯ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಆಕ್ಸಿಜನ್ ಹಂಚಿಕೆಯ ಹೊಣೆ ನೀಡಲಾಗಿದೆ. ಮಾನವ ಸಂಪನ್ಮೂಲ, ರೆಮ್ಡೆಸಿವಿರ್ ಸೇರಿದಂತೆ ಅಗತ್ಯ ಔಷಧಗಳ ಕೊರತೆಯಾಗದಂತೆ ಔಷಧಿಗಳನ್ನು ತಯಾರಿಸುವ ಕಂಪೆನಿಗಳೂ, ಸರಬರಾಜು ಮಾಡುವ ಕಂಪನಿಗಳ ಜೊತೆ ಸತತವಾಗಿ ಸಂಪರ್ಕವಿರಿಸಿಕೊಂಡು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಜವಾಬ್ದಾರಿಯನ್ನು ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರಿಗೆ ನೀಡಲಾಗಿದೆ ಎಂದು ಯಡಿಯೂರಪ್ಪ ಹೇಳಿದರು.
ರಾಜೀವ್ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದೊಂದಿಗೆ ನರ್ಸಿಂಗ್ ಕಾಲೇಜುಗಳಲ್ಲಿ ಸಮನ್ವಯ ಸಾಧಿಸಿ, ಅಂತಿಮ ವರ್ಷದ ವೈದ್ಯಕೀಯ ವಿದ್ಯಾರ್ಥಿಗಳು, ನರ್ಸ್ ಗಳನ್ನು ಕೋವಿಡ್ ನಿರ್ವಹಣೆ ಕಾರ್ಯಕ್ಕೆ ತೆಗೆದುಕೊಳ್ಳಬೇಕು. ಖಾಸಗಿ ಮತ್ತು ಸರಕಾರಿ ಆಸ್ಪತ್ರೆಗಳಲ್ಲಿ ಹಾಸಿಗೆಗಳ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗದಂತೆ ವ್ಯವಸ್ಥೆ ಮಾಡುವ ಜವಾಬ್ದಾರಿಯನ್ನು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹಾಗೂ ಕಂದಾಯ ಸಚಿವ ಆರ್.ಅಶೋಕ್ ಅವರಿಗೆ ನೀಡಲಾಗಿದೆ ಎಂದು ಅವರು ತಿಳಿಸಿದರು.
ಅದೇ ರೀತಿ ಕೋವಿಡ್ ವಾರ್ ರೂಮ್, ಕಾಲ್ ಸೆಂಟರ್ ನಿರ್ವಹಣೆಯ ಹೊಣೆಗಾರಿಕೆಯನ್ನು ಅರಣ್ಯ ಸಚಿವ ಅರವಿಂದ ಲಿಂಬಾವಳಿಗೆ ವಹಿಸಲಾಗಿದೆ. ಜಿಲ್ಲೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ನರ್ಸಿಂಗ್ ಸಿಬ್ಬಂದಿ, ವೈದರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಕೋವಿಡ್ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾ ಉಸ್ತುವಾರಿ ಸಚಿವರಿಗೆ ಸಂಪೂರ್ಣ ಜವಾಬ್ದಾರಿ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಹೊರ ರಾಜ್ಯಗಳಿಂದ ಆಕ್ಸಿಜನ್ ತಡವಾಗಿ ಬರುತ್ತಿರುವುದರಿಂದ ರಾಜ್ಯದಲ್ಲಿ ಆಕ್ಸಿಜನ್ ಸಮಸ್ಯೆ ಎದುರಾಗಿದೆ. 350 ಮೆಟ್ರಿಕ್ ಟನ್ ಇದ್ದ ಆಕ್ಸಿಜನ್ ಹಂಚಿಕೆ ಪ್ರಮಾಣ 850 ಮೆಟ್ರಿಕ್ ಟನ್ ಗೆ ಕೇಂದ್ರ ಸರಕಾರ ಹೆಚ್ಚಳ ಮಾಡಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ಸೋಂಕು ಕಡಿಮೆಯಾಗುತ್ತಿರುವುದರಿಂದ ಜಿಂದಾಲ್ ಸಂಸ್ಥೆಯಿಂದ ಮಹಾರಾಷ್ಟ್ರಕ್ಕೆ ಹಂಚಿಕೆಯಾಗಿರುವ ಆಕ್ಸಿಜನ್ ಅನ್ನು ನಮ್ಮ ರಾಜ್ಯಕ್ಕೆ ಬಳಸಿಕೊಳ್ಳಲು ಅನುಮತಿ ನೀಡುವಂತೆ ಕೋರಿ ಕೇಂದ್ರ ಸಚಿವರಾದ ಅಮಿತ್ ಶಾ ಹಾಗೂ ಪಿಯೂಶ್ ಗೋಯಲ್ಗೆ ಮನವಿ ಮಾಡಿದ್ದು, ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ಯಡಿಯೂರಪ್ಪ ಹೇಳಿದರು.
ರೆಮ್ಡಿಸಿವಿರ್ ಔಷಧವನ್ನು ಕಾಳ ಸಂತೆಯಲ್ಲಿ ಮಾರಾಟ ಮಾಡುವವರ ಬಗ್ಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅದೇ ರೀತಿ, ಅಕ್ರಮವಾಗಿ ಆಕ್ಸಿಜನ್ ದಾಸ್ತಾನು ಮಾಡುವುದು ಸೇರಿದಂತೆ ಅವ್ಯವಹಾರ ನಡೆದರೆ ಯಾರು ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಕ್ಷಮಿಸುವ ಪ್ರಶ್ನೆಯೇ ಇಲ್ಲ. ಅಮಾನತು ಮಾಡಿ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಆಸ್ಪತ್ರೆಗಳಲ್ಲಿ ಹಾಸಿಗೆಗಳನ್ನು ಬ್ಲಾಕ್ ಮಾಡುವವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಚಾಮರಾಜನಗರ ಘಟನೆಗೆ ಸಂಬಂಧಿಸಿದಂತೆ ತಮ್ಮ ಹಾಗೂ ಆರೋಗ್ಯ ಸಚಿವ ಸುಧಾಕರ್ ರಾಜೀನಾಮೆಗೆ ಒತ್ತಾಯಿಸಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯಗೆ ತಿರುಗೇಟು ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಸಿದ್ದರಾಮಯ್ಯಗೆ ನನ್ನ ರಾಜೀನಾಮೆ ಕೇಳುವುದೇ ಒಂದು ಕೆಲಸ. ಅವರ ಬಳಿ ಸಲಹೆಗಳು ಇದ್ದರೆ ಕೊಡಲಿ. ರಾಜೀನಾಮೆಯಿಂದ ಯಾವ ಸಮಸ್ಯೆಯೂ ಬಗೆಹರಿಯುವುದಿಲ್ಲ ಎಂದರು.
ಮೇ 12ರ ನಂತರ ತೀರ್ಮಾನ: ಕೋವಿಡ್ ಸೋಂಕು ಹರಡುವುದನ್ನು ತಡೆಗಟ್ಟಲು ಮೇ 12ರವರೆಗೆ 'ಕೊರೋನ ಕರ್ಫ್ಯೂ' ಘೋಷಣೆ ಮಾಡಲಾಗಿದೆ. ಆನಂತರ, ಇದನ್ನು ಮುಂದುವರಿಸಬೇಕೆ, ಬೇಡವೇ ಎಂಬುದರ ಕುರಿತು ಅಧಿಕಾರಿಗಳು, ಸಚಿವರ ಜೊತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.
ಪತ್ರಕರ್ತರು 'ಫ್ರಂಟ್ ಲೈನ್ ವರ್ಕರ್ಸ್'
ಮಾಧ್ಯಮ ಸಂಸ್ಥೆಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ಪತ್ರಕರ್ತರನ್ನು ಕೋವಿಡ್ ಪರಿಸ್ಥಿತಿಯನ್ನು ನಿರ್ವಹಣೆ ಮಾಡುವ ಫ್ರಂಟ್ ಲೈನ್ ವರ್ಕರ್ಸ್ ( ಮುಂಚೂಣಿ ಕಾರ್ಯಕರ್ತರು) ಎಂದು ಪರಿಗಣಿಸಲಾಗಿದ್ದು, ಅವರಿಗೂ ಆದ್ಯತೆಯ ಮೇರೆಗೆ ಕೋವಿಡ್ ಲಸಿಕೆಯನ್ನು ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಕಟಿಸಿದರು.
ಸುಧಾಕರ್- ಸುರೇಶ್ ಕುಮಾರ್ ವಿರುದ್ಧ ಸಿಎಂ ಆಕ್ರೋಶ
ಚಾಮರಾಜನಗರದ ಆಸ್ಪತ್ರೆಯಲ್ಲಿ ಸಂಭವಿಸಿದ ರೋಗಿಗಳ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಹಾಗೂ ಆರೋಗ್ಯ ಡಾ.ಕೆ.ಸುಧಾಕರ್ ವಿರುದ್ಧ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತೀವ್ರ ಆಕ್ರೋಶ ಹೊರಹಾಕಿದ್ದಾರೆ ಎಂದು ತಿಳಿದು ಬಂದಿದೆ.
ಚಾಮರಾಜನಗರದಲ್ಲಿ ಆಕ್ಸಿಜನ್ ಸಮಸ್ಯೆ ಇರುವುದು ಮೊದಲೇ ನಿಮ್ಮ ಗಮನಕ್ಕೆ ಬಂದಿರಲಿಲ್ಲವೇ? ಈ ರೀತಿ ನಿರ್ಲಕ್ಷ್ಯ ವಹಿಸಿದರೆ ಯಾವ ರೀತಿ ಪರಿಸ್ಥಿತಿಯನ್ನು ನಿರ್ವಹಿಸುತ್ತೀರಾ? ಈ ಘಟನೆಯಿಂದಾಗಿ ರಾಜ್ಯಾದ್ಯಂತ ಜನರ ಆಕ್ರೋಶ ಹೆಚ್ಚಾಗಿದೆ. ರಾಷ್ಟ್ರಮಟ್ಟದಲ್ಲಿ ನಮ್ಮ ರಾಜ್ಯದ ಬಗ್ಗೆ ನಕಾರಾತ್ಮಕವಾದ ಅಭಿಪ್ರಾಯ ಮೂಡುತ್ತಿದೆ ಎಂದು ಯಡಿಯೂರಪ್ಪ ಕಿಡಿಗಾರಿದ್ದಾರೆ ಎನ್ನಲಾಗಿದೆ.