ಸುಪ್ರೀಂಕೋರ್ಟ್ ತಪರಾಕಿಯಿಂದ ಪ್ರಧಾನಿ ಮೋದಿ ಈಗಲಾದರೂ ಬುದ್ದಿ ಕಲಿಯಲಿ: ಸಿದ್ದರಾಮಯ್ಯ
ಆಮ್ಲಜನಕ ಪೂರೈಕೆ ವಿಚಾರದಲ್ಲಿ ಸುಪ್ರೀಂ ಆದೇಶ ಸ್ವಾಗತಿಸಿದ ಮಾಜಿ ಸಿಎಂ
ಬೆಂಗಳೂರು, ಮೇ 7: ನಮ್ಮ ರಾಜ್ಯಕ್ಕೆ 1200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸುವಂತೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಆದೇಶದ ವಿರುದ್ಧ ಕೇಂದ್ರ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟಿನ ಆದೇಶವನ್ನು ನಾಡಿನ ನೊಂದ ಜನರೆಲ್ಲರ ಪರವಾಗಿ ನಾನು ಸ್ವಾಗತಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಅವರು, ಕರ್ನಾಟಕಕ್ಕೆ ನಿತ್ಯ 1600 - 1700 ಮೆಟ್ರಿಕ್ ಟನ್ ಆಮ್ಲಜನಕದ ಅಗತ್ಯವಿದೆ, ಆದರೆ ಪ್ರಧಾನಿ ನಿಗದಿ ಮಾಡಿದ್ದು 965 ಮೆಟ್ರಿಕ್ ಟನ್ ಮಾತ್ರ. ಇದರಿಂದ ಆಸ್ಪತ್ರೆಗಳಲ್ಲಿ ಆಕ್ಸಿಜನ್ ಕೊರತೆಯಿಂದ ಪ್ರಾಣ ಕಳೆದುಕೊಳ್ಳಲಿದ್ದ ರಾಜ್ಯದ ಸಹಸ್ರಾರು ರೋಗಿಗಳ ಪ್ರಾಣವನ್ನು ಸುಪ್ರೀಂ ಕೋರ್ಟ್ ಉಳಿಸಿದೆ ಎಂದು ತಿಳಿಸಿದ್ದಾರೆ.
ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಅನ್ನು ಸಂಪೂರ್ಣ ಇಲ್ಲಿಯೇ ಬಳಕೆ ಮಾಡಿಕೊಳ್ಳಲು ಅವಕಾಶ ನೀಡುವಂತೆ ಹಾಗೂ ರಾಜ್ಯಕ್ಕೆ ನೀಡುವ ಆಕ್ಸಿಜನ್ ಪ್ರಮಾಣವನ್ನು 1500 ಮೆಟ್ರಿಕ್ ಟನ್ ಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಿಜೆಪಿ ಸಂಸದರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕು ಎಂದು ಆಗ್ರಹಿಸುತ್ತೇನೆ.
ಸುಪ್ರೀಂ ಕೋರ್ಟ್ ತಪರಾಕಿಯಿಂದ ಪ್ರಧಾನಿ ಮೋದಿ ಈಗಲಾದರೂ ಬುದ್ದಿ ಕಲಿಯಲಿ. ಜನರ ಪ್ರಾಣದ ಜೊತೆ ಚೆಲ್ಲಾಟವಾಡುವ ಕ್ರೌರ್ಯವನ್ನು ನಿಲ್ಲಿಸಲಿ. ಕರ್ನಾಟಕಕ್ಕೆ ಅಗತ್ಯವಿರುವಷ್ಟು ಪ್ರಮಾಣದ ಆಮ್ಲಜನಕವನ್ನು ತಕ್ಷಣ ಪೂರೈಸಲಿ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.