ಲಾಕ್ಡೌನ್: ಬಡವರಿಗೆ ಆಹಾರ ಭದ್ರತೆ ಒದಗಿಸಲು ರಾಜ್ಯ ಸರಕಾರಕ್ಕೆ ಹೈಕೋರ್ಟ್ ಸೂಚನೆ
ಬೆಂಗಳೂರು, ಮೇ 11: ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾದ ಹಿನ್ನೆಲೆಯಲ್ಲಿ ಆಹಾರದ ಸಮಸ್ಯೆ ಉಂಟಾಗಿದೆ. ಈ ಕೂಡಲೇ ಬಡವರಿಗೆ ಆಹಾರ ಭದ್ರತೆ ಒದಗಿಸಲು ಕ್ರಮ ತೆಗೆದುಕೊಳ್ಳಬೇಕೆಂದು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿತು.
ಈ ಕುರಿತು ಸಲ್ಲಿಕೆಯಾಗಿದ್ದ ಹಲವು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್.ಓಕ ನೇತೃತ್ವದ ವಿಭಾಗೀಯ ನ್ಯಾಯಪೀಠ, ಈ ಸೂಚನೆ ನೀಡಿತು.
ಈ ವೇಳೆ ಪೀಠಕ್ಕೆ ಮಾಹಿತಿ ನೀಡಿದ ಅಡ್ವಕೇಟ್ ಜನರಲ್ ಪ್ರಭುಲಿಂಗ ನಾವದಗಿ, ಇಂದಿರಾ ಕ್ಯಾಂಟೀನ್ ಮೂಲಕ ಉಚಿತ ಆಹಾರ ವಿತರಣೆ ಮಾಡಲಾಗುತ್ತಿದೆ. ಮೂರು ಹೊತ್ತು ಉಚಿತ ಆಹಾರ ಒದಗಿಸಲಾಗುವುದು. 10 ಕೆಜಿ ಪಡಿತರ ಧಾನ್ಯ ಒದಗಿಸಲಾಗುವುದು. ಎನ್ಜಿಒಗಳ ಮೂಲಕವೂ ಆಹಾರ ಒದಗಿಸಲಾಗುವುದು ಎಂದು ಪೀಠಕ್ಕೆ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಪೀಠ, ದಿನಗೂಲಿ ಕಳೆದುಕೊಂಡವರಿಗೂ ಆಹಾರ ಭದ್ರತೆ ಒದಗಿಸಿ, ಗ್ರಾಮಾಂತರ ಪ್ರದೇಶಗಳಿಗೂ ಆಹಾರ ತಲುಪಿಸಿ, ದಾಸೋಹ ಹೆಲ್ಪ್ ಲೈನ್ ಮರು ಆರಂಭಿಸಿ ಎಂದು ಸರಕಾರಕ್ಕೆ ಸೂಚನೆ ನೀಡಿತು.
Next Story